ಬೆಂ.ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹಗಳಿಗೆ ತಡೆ: ಡೀಸಿ

KannadaprabhaNewsNetwork |  
Published : May 16, 2026, 12:30 AM IST
 ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಮಕ್ಕಳ ರಕ್ಷಣಾ ಘಟಕದ ಮಿಷನ್ ವಾತ್ಸಲ್ಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು,ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ತಿಳಿಸಿದ್ದಾರೆ

ದೊಡ್ಡಬಳ್ಳಾಪುರ: ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು,

ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಘಟಕದ ಮಿಷನ್ ವಾತ್ಸಲ್ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು, ಅಧಿಕಾರಿಗಳ ಸಮನ್ವಯತೆ ಹಾಗೂ ಸಹಕಾರದಿಂದ ಬಾಲ್ಯ ವಿವಾಹ ಪ್ರಕರಣಗಳನ್ನು ಶೇಕಡಾ ನೂರರಷ್ಟು ತಡೆಯಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಒಟ್ಟು 28 ಬಾಲ್ಯ ವಿವಾಹ ಪ್ರಕರಣಗಳಲ್ಲಿ 24 ಬಾಲ್ಯ ವಿವಾಹ ತಡೆಯಲಾಗಿದ್ದು, ಇನ್ನೂ 04 ಪ್ರಕರಣಗಳ ವಿರುದ್ಧ ಎಫ್.ಆರ್.ಐ ದಾಖಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದ ಭಾಗವಾಗಿರುವ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಶಾಲಾ ಕಾಲೇಜು, ಕೈಗಾರಿಕೆ, ಕಾರ್ಖಾನೆಗಳಲ್ಲಿ ಆಗಿಂದಾಗ್ಗೆ ಪರಿಶೀಲನೆ ನಡೆಸಿ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಾರ್ವಜನಿಕರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ- 1098, ಪೊಲೀಸ್ ಸಹಾಯವಾಣಿ 112 ಕರೆ ಮಾಡಿ ಹಾಗೂ ಸಂಬಂಧಪಟ್ಟ ಪೊಲೀಸ್‌ ಠಾಣೆ ಅವರ ಗಮನಕ್ಕೆ ತುರ್ತಾಗಿ ತರಬಹುದಾಗಿದೆ ಎಂದರು.

70 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ:

ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ 70 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಭಾರತ ಸರ್ಕಾರವು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಲ್ಲಿ ಮಕ್ಕಳು. ಕುಟುಂಬದ ವ್ಯವಸ್ಥೆಯಲ್ಲಿ ಬೆಳೆಯಲು ಸಹಾಯವಾಗಲು ಆರಂಭಿಸಿದ ಏಕ ಪೋಷಕತ್ವ ಪ್ರಾಯೋಜಕತ್ವ ಕಾರ್ಯಕ್ರಮದಡಿ ಪ್ರತಿ ತಿಂಗಳು ₹4 ಸಾವಿರದಂತೆ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ 623 ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಡಿಬಿಟಿ ಮುಖಾಂತರ ಫಲಾನುಭವಿಗಳ ಬ್ಯಾಂಕ್

ಖಾತೆಗೆ ಪಾವತಿಸಲಾಗಿದೆ. 2025-26ನೇ ಸಾಲಿನಲ್ಲಿ ಪೋಷಕತ್ವ ಯೋಜನೆಯಡಿ 08 ಮಕ್ಕಳನ್ನು ಪೋಷಕತ್ವಕ್ಕೆ ನೀಡುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೇಂದ್ರ ಕಚೇರಿಯಿಂದ ಅಭಿನಂದನಾ ಪತ್ರ ಸ್ವೀಕರಿಸಲಾಗಿದೆ ಎಂದರು.

79 ಅರಿವು ಕಾರ್ಯಕ್ರಮ:

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಜಿಲ್ಲಾದ್ಯಂತ 8274 ಶಿಬಿರಾರ್ಥಿಗಳ ಒಳಗೊಂಡು 79 ಅರಿವು ಕಾರ್ಯಕ್ರಮ ಹಾಗೂ 12 ತರಬೇತಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 9 ಮಕ್ಕಳು ದತ್ತು ಸಂಸ್ಥೆಯಲ್ಲಿದ್ದು, 5 ಮಕ್ಕಳು ಪಾಲನೆ ಮತ್ತು ಪೋಷಣೆಯಲ್ಲಿದ್ದು, 4 ಮಕ್ಕಳು ದತ್ತು ಪ್ರಕ್ರಿಯೆಯಲ್ಲಿದ್ದಾರೆ. ಇನ್ನೂ ವಿಶೇಷ ಪಾಲನಾ ಯೋಜನೆಯಡಿ ಎಚ್‌ಐವಿ ಸೋಂಕಿತ ಹಾಗೂ ಬಾಧಿತ ಮಕ್ಕಳಿಗೆ ಮತ್ತು ಏಡ್ಸ್ ರೋಗದಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ, ಆರೋಗ್ಯಕ್ಕಾಗಿ ಪ್ರತಿ ಮಾಹೆ ₹2000ದಂತೆ ವಿಶೇಷ ಪಾಲನಾ ಸಹಾಯಧನವಾಗಿ 130 ಮಕ್ಕಳಿಗೆ ₹31,20,000 ಡಿಬಿಟಿ ಮುಖಾಂತರ ಪಾವತಿಸಲಾಗಿದೆ ಎಂದರು.

ಬಾಲನ್ಯಾಯ ನಿಧಿಯಡಿ ₹2.95 ಲಕ್ಷ ಬಳಕೆ:

ಜಿಲ್ಲೆಯಲ್ಲಿ ಬಾಲನ್ಯಾಯ ನಿಧಿ ಯೋಜನೆಯಡಿ 45 ಫಲಾನುಭವಿಗಳಿಗೆ ಒಟ್ಟು ₹2.95 ಲಕ್ಷ ಸೌಲಭ್ಯವನ್ನು ಒದಗಿಸಿಕೊಡಲಾಗಿದೆ. ಜತೆಗೆ ಬಾಲನ್ಯಾಯ ಮಂಡಳಿ ಬಳಿ ಒಟ್ಟು 503 ಪ್ರಕರಣಗಳಲ್ಲಿ 2025-26 ನೇ ಸಾಲಿನ 259 ಪ್ರಕರಣಗಳು, ಹೊಸದಾಗಿ ದಾಖಲಾದ 244 ಪ್ರಕರಣಗಳು ದಾಖಲಾಗಿದ್ದು, 204 ಪ್ರಕರಣ ಇತ್ಯರ್ಥವಾಗಿದ್ದು, 299 ಪ್ರಕರಣಗಳು ಬಾಕಿ ಉಳಿದಿವೆ ಎಂದು ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ ಮಾಹಿತಿ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

15ಕೆಡಿಬಿಪಿ4-

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಮಕ್ಕಳ ರಕ್ಷಣಾ ಘಟಕದ ಮಿಷನ್ ವಾತ್ಸಲ್ಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಡಗರ-ಸಂಭ್ರಮ ಶ್ರೀಚಾಮುಂಡೇಶ್ವರಿ ದೇವಿ ರಥೋತ್ಸವ
ಪಾರಂಪರಿಕ ಮೂಲೆ ಮಂಟಪ ಧ್ವಂಸ: ಪ್ರತಿಭಟನೆ