ಕನ್ನಡಪ್ರಭ ವಾರ್ತೆ ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಹಾರಂಗಿ ಜಲಾಶಯದ ನಿರ್ಮಾಣಕ್ಕೆ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಜನ್ಮದಿನ ಶತಮಾನೋತ್ಸವ ಆಚರಣೆ ಕಾರ್ಯಕ್ರಮ ಫೆ. 28 ರಂದು ಹಾರಂಗಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷರಾದ ಬಿ ಎಸ್ ಲೋಕೇಶ್ ಸಾಗರ್ ತಿಳಿಸಿದ್ದಾರೆ.
ಕೃಷಿ ಚಟುವಟಿಕೆಯ ಅಭಿವೃದ್ಧಿಯ ಹರಿಕಾರರಾಗಿರುವ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಸ್ಮರಣೆಯೊಂದಿಗೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಹಾರಂಗಿ ಜಲಾಶಯ ಆವರಣದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಕ್ಷೇತ್ರ ಶಾಸಕರಾದ ಮಂತರ್ ಗೌಡ ಉದ್ಘಾಟನೆ ನಡೆಸುವರು.ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚುರಂಜನ್ ಲಾಂಛನ ಬಿಡುಗಡೆ ಮಾಡಲಿದ್ದು ವಿಶೇಷ ಆಹ್ವಾನಿತರಾಗಿ ಮಾಜಿ ಶಾಸಕರು ಹಾಗೂ ವೀರೇಂದ್ರ ಪಾಟೀಲ್ ಅವರ ಪುತ್ರರಾದ ಕೈಲಾಶ್ ನಾಥ್ ಪಾಟೀಲ್ ಅವರು ಉಪಸ್ಥಿತರಿರುವರು. ಮಾಜಿ ಶಾಸಕರಾದ ಬಸವರಾಜ್, ಹಾರಂಗಿ ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಚೌಡೇಗೌಡ, ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ರಘುಪತಿ, ಮತ್ತಿತರ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ಹೇಳಿದರು.
ಈ ಸಂದರ್ಭ ಹಾರಂಗಿ ಜಲಾಶಯ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಪ್ರತಿಮೆ ಅನಾವರಣಗೊಳಿಸಲು ಆಗ್ರಹಿಸಲಾಗುವುದು ಎಂದರು.ಬಳಗದ ಪ್ರಮುಖರಾದ ಎಂ.ಡಿ ರಂಗಸ್ವಾಮಿ, ಕೃಷ್ಣೇಗೌಡ ಮತ್ತು ನಾಗೇಗೌಡ ಅವರು ಇದ್ದರು.