ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಭಕ್ತ ಯುವಕರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕಾರ್ಯದರ್ಶಿ ಎ. ವಿ. ಶೆಟ್ಟಿ ಸ್ವಾಗತಿಸಿ ಶುಭ ಹಾರೈಸಿದರು.
36 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಸೈಕಲ್ ಭಕ್ತಿ ಜಾಥಾವನ್ನು ಇವರ ಹಿರಿಯರು ಆರಂಭಿಸಿದ್ದು, ಆ ಪರಂಪರೆಯನ್ನು ಇಂದಿನ ಯುವಕರು ಅದೇ ಶ್ರದ್ಧೆ, ಭಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷ ನೂರಾರು ಗ್ರಾಮಗಳ ಮೂಲಕ ಸಾಗುವ ಈ ಜಾಥಾ ಸಮಾಜದಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಸದಾಚಾರದ ಕುರಿತು ಜಾಗೃತಿ ಮೂಡಿಸುತ್ತಿದೆ.‘ಯುವಕರು ಆರೋಗ್ಯವಂತರಾಗಿರಬೇಕು, ದುಶ್ಚಟಗಳಿಂದ ದೂರವಿರಬೇಕು ಹಾಗೂ ಶಿಸ್ತು-ಭಕ್ತಿಯ ಜೀವನ ನಡೆಸಬೇಕು’ ಎಂಬ ಉದಾತ್ತ ಸಂದೇಶವನ್ನು ಜನರಿಗೆ ತಲುಪಿಸುವುದೇ ಈ ಜಾಥಾದ ಪ್ರಮುಖ ಉದ್ದೇಶವಾಗಿದೆ.