ಕನ್ನಡಪ್ರಭವಾರ್ತೆ ಕಾರ್ಕಳ
ಸರ್ಕಾರ ಮೂರನೇ ವರ್ಷದ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟದ ಸಚಿವರು ಹಾಗೂ ಶಾಸಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರವು ಜನಸಾಮಾನ್ಯರ ಬದುಕಿಗೆ ಸ್ಪಂದಿಸುವ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶ್ಲಾಘಿಸಿದ್ದಾರೆ.
ಕೋವಿಡ್ ನಂತರದ ದಿನಗಳಲ್ಲಿ ಉದ್ಯೋಗ ನಷ್ಟ, ಬೆಲೆ ಏರಿಕೆ ಹಾಗೂ ಕುಸಿದ ಆರ್ಥಿಕತೆಯಿಂದ ಹೈರಾಣಾಗಿದ್ದ ಜನಸಾಮಾನ್ಯರ ಬದುಕನ್ನು ಮೇಲೆತ್ತಲು ಕಾಂಗ್ರೆಸ್ ಸರ್ಕಾರವು ದೇಶದಲ್ಲೇ ಪ್ರಪ್ರಥಮ ಬಾರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಯುವಜನತೆ ಮತ್ತು ದುರ್ಬಲ ವರ್ಗದವರಿಗೆ ನೇರ ಪ್ರಯೋಜನ ತಲುಪಿಸುವ ಮೂಲಕ ಸರ್ಕಾರ ಜನರಿಗೆ ಆಸರೆಯಾಗಿದೆ ಎಂದು ಅವರು ತಿಳಿಸಿದ್ದಾರೆ.ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತದ ದಿಕ್ಕಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳು ಜನರಲ್ಲಿ ಹೊಸ ವಿಶ್ವಾಸ ಮೂಡಿಸಿವೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದವರ ಹಿತಾಸಕ್ತಿಯನ್ನು ಕಾಯುವ ಕೆಲಸ ನಿರಂತರವಾಗಿ ನಡೆಯುತ್ತಿರುವುದು ಕಾಂಗ್ರೆಸ್ ಪಕ್ಷದ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದು, ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರ ಯಶಸ್ವಿಯಾಗಲಿ ಎಂದು ಹಾರೈಸಿದ ಉದಯ ಶೆಟ್ಟಿ ಮುನಿಯಾಲು ಅವರು, ಮೂರು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟದ ಎಲ್ಲ ಸಚಿವರು ಹಾಗೂ ಶಾಸಕರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.