ಮಂಜುನಾಥ ಕೆ.ಎಂ.
ಬಳ್ಳಾರಿ ತಾಲೂಕಿನಲ್ಲಿ 30,383 ನಾಯಿಗಳಿವೆ. ಬಳ್ಳಾರಿ ನಗರದಲ್ಲಿಯೇ 17 ಸಾವಿರಕ್ಕೂ ಹೆಚ್ಚು ನಾಯಿಗಳು ಇರಬಹುದು ಎಂದು ಅಂದಾಜಿಸಲಾಗಿದೆ. ಒಂದು ವರ್ಷದ ಹಿಂದಿನ ಗಣತಿ ಪ್ರಕಾರ ಜಿಲ್ಲೆಯಲ್ಲಿ 52,375 ನಾಯಿಗಳಿವೆ. ಕಳೆದ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ 4,330 ಜನರಿಗೆ ನಾಯಿ ಕಚ್ಚಿದ್ದು ಚಿಕಿತ್ಸೆ ಪಡೆದಿದ್ದಾರೆ. ಮೂರು ತಿಂಗಳಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
ಬಳ್ಳಾರಿ ನಗರದಲ್ಲಿ ನಿತ್ಯ 250ರಿಂದ 300 ಶ್ವಾನಗಳನ್ನು ಹಿಡಿದು ಸಂತಾನ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ಕಳೆದ ವರ್ಷದ ಜೂನ್ನಿಂದ ಈವರೆಗೆ ನಗರದ 3800 ಶ್ವಾನಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೊದಲ ಆದ್ಯತೆಯಾಗಿ ಆಸ್ಪತ್ರೆಗಳು ಹಾಗೂ ಶಾಲಾ-ಕಾಲೇಜುಗಳ ಬಳಿಯ ಶ್ವಾನಗಳನ್ನು ಮಾತ್ರ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ತಿಳಿಸಿದ್ದಾರೆ.ನಾಯಿ ಶೆಲ್ಟರ್ಗೆ ಜಾಗದ ಅಭಾವ:
ನಾಯಿಗಳ ಕಡಿತಕ್ಕೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಆರ್ವಿ ಇಂಜೆಕ್ಷನ್ ಲಭ್ಯವಿದೆ. ಎಲ್ಲೂ ಕೊರತೆಯಿಲ್ಲ. ಒಂದು ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಭ್ಯವಿಲ್ಲದಿದ್ದರೆ ಕೂಡಲೇ ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವೈ.ರಮೇಶ್ ಬಾಬು ಕನ್ನಡಪ್ರಭಕ್ಕೆ ತಿಳಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಕಳೆದ ಜನವರಿ, ಫೆಬ್ರವರಿಯಲ್ಲಿ 1751 ಜನರಿಗೆ ನಾಯಿಗಳು ಕಚ್ಚಿದ್ದು, ಈ ಪೈಕಿ ಹೊಸಪೇಟೆ ನಗರದಲ್ಲಿಯೇ 733 ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳಿವೆ. ಕೂಡ್ಲಿಗಿ, ಕೊಟ್ಟೂರಿನಲ್ಲಿ ಅತಿ ಕಡಿಮೆ ನಾಯಿ ದಾಳಿ ಪ್ರಕರಣಗಳಿವೆ.
ನಾಯಿಗಳಿಗೆ ಶೆಲ್ಟರ್ ನಿರ್ಮಿಸುವ ಸಂಬಂಧ ಸರ್ಕಾರಕ್ಕೆ ₹4 ಕೋಟಿ ಕೇಳಲಾಗಿತ್ತು. ಮೊದಲ ಹಂತದಲ್ಲಿ ₹1.05 ಕೋಟಿ ಬಿಡುಗಡೆ ಮಾಡಿದ್ದಾರೆ. ಆದರೆ, ಶೆಲ್ಟರ್ ನಿರ್ಮಿಸಲು ಜಾಗವಿಲ್ಲ. ಆಲ್ದಳಿ ಬಳಿಯ 10 ಎಕರೆ ಜಾಗ ಪಾಲಿಕೆ ಸುಪರ್ದಿಗೆ ಪಡೆಯಲು ಕ್ರಮ ವಹಿಸಲಾಗುತ್ತಿದೆ ಎನ್ನುತ್ತಾರೆ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ.