ಪುಸ್ತಕ ಮನೆಗೆ ೫ ಎಕರೆ ನಿವೇಶನ, ೫ ಕೋಟಿ ರು. ಅನುದಾನ ನೀಡಿ

KannadaprabhaNewsNetwork |  
Published : Jan 31, 2026, 01:30 AM IST
೩೦ಕೆಎಂಎನ್‌ಡಿ-೫ಅಂಕೇಗೌಡರ ಪುಸ್ತಕ ಮನೆಯಲ್ಲಿರುವ ಪುಸ್ತಕಗಳನ್ನು ಜೋಡಿಸಲು ಅಗತ್ಯವಿರುವ ಸ್ಟೀಲ್ ರಾಕ್‌ಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ವಿಧಾನಪರಿಷತ್ ಶಾಸಕ ದಿನೇಶ್‌ಗೂಳಿಗೌಡ ಮನವಿ ಮಾಡಿದರು. | Kannada Prabha

ಸಾರಾಂಶ

ಮುಂಬರುವ ರಾಜ್ಯ ಆಯವ್ಯಯದಲ್ಲಿ ಅಂಕೇಗೌಡರ ಪುಸ್ತಕ ಭಂಡಾರಕ್ಕೆ ಶಾಶ್ವತ ಪರಿಹಾರ ಘೋಷಿಸುವಂತೆ ವಿಧಾನ ಪರಿಷತ್ ಶಾಸಕ ದಿನೇಶ್‌ಗೂಳಿಗೌಡ ಕೋರಿದ್ದಾರೆ. ಪಾಂಡವಪುರ ತಾಲೂಕಿನ ಹರಳಹಳ್ಳಿಯಲ್ಲಿ ೫ ಎಕರೆ ಜಮೀನು ಮಂಜೂರು ಮಾಡುವುದು ಹಾಗೂ ಸುಸಜ್ಜಿತ ಗ್ರಂಥಾಲಯ ಸಂಕೀರ್ಣ ನಿರ್ಮಿಸಲು ೫ ಕೋಟಿ ರು. ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡುವಂತೆ ವಿನಂತಿ.

ಕನ್ನಡಪ್ರಭ ವಾರ್ತೆ ಮಂಡ್ಯ

‘ಅಕ್ಷರ ಸಂತ’ ಎಂ.ಅಂಕೇಗೌಡರ ಅಪರೂಪದ ಜ್ಞಾನ ಭಂಡಾರವನ್ನು ರಕ್ಷಿಸಲು ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ೫ ಎಕರೆ ಭೂಮಿ, ೫ ಕೋಟಿ ರು. ಘೋಷಣೆ ಮಾಡುವಂತೆ ವಿಧಾನ ಪರಿಷತ್ ಶಾಸಕ ದಿನೇಶ್‌ಗೂಳಿಗೌಡ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಸಕ ದಿನೇಶ್ ಗೂಳಿಗೌಡ ಅವರು ಮುಂಬರುವ ರಾಜ್ಯ ಆಯವ್ಯಯದಲ್ಲಿ ಅಂಕೇಗೌಡರ ಪುಸ್ತಕ ಭಂಡಾರಕ್ಕೆ ಶಾಶ್ವತ ಪರಿಹಾರ ಘೋಷಿಸುವಂತೆ ಕೋರಿದ್ದಾರೆ. ಪಾಂಡವಪುರ ತಾಲೂಕಿನ ಹರಳಹಳ್ಳಿಯಲ್ಲಿ ೫ ಎಕರೆ ಜಮೀನು ಮಂಜೂರು ಮಾಡುವುದು ಹಾಗೂ ಸುಸಜ್ಜಿತ ಗ್ರಂಥಾಲಯ ಸಂಕೀರ್ಣ ನಿರ್ಮಿಸಲು ೫ ಕೋಟಿ ರು. ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡುವಂತೆ ಅವರು ಪ್ರಮುಖವಾಗಿ ವಿನಂತಿಸಿದ್ದಾರೆ.

ನಿವೇಶನ ಮಂಜೂರಾತಿ ಘೋಷಣೆ:

ಈ ಪುಸ್ತಕ ಭಂಡಾರವನ್ನು ಉಳಿಸಿ ಬೆಳೆಸಲು, ಪಾಂಡವಪುರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿಯೇ (ಅವರ ಊರಿನಲ್ಲಿ) ಕಂದಾಯ ಇಲಾಖೆಯಿಂದ ೫ ಎಕರೆ ಸರ್ಕಾರಿ ಜಮೀನು ಅಥವಾ ಸೂಕ್ತವಾದ ಸಿ.ಎ.ನಿವೇಶನವನ್ನು ಮಂಜೂರು ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಬೇಕು.

೫ ಕೋಟಿ ರು. ಅನುದಾನ ಮೀಸಲು:

ಮಂಜೂರಾದ ಜಾಗದಲ್ಲಿ ಸುಸಜ್ಜಿತ ಗ್ರಂಥಾಲಯ, ಓದುಗರ ಕೊಠಡಿ ಮತ್ತು ವಸ್ತು ಸಂಗ್ರಹಾಲಯವನ್ನು ನಿರ್ಮಿಸಲು ೫ ಕೋಟಿ ರೂ.ಗಳ ವಿಶೇಷ ಅನುದಾನವನ್ನು ಈ ಆಯವ್ಯಯದಲ್ಲಿ ಮೀಸಲಿಡಬೇಕು.

ಪ್ರವಾಸಿ ತಾಣವಾಗಿ ಅಭಿವೃದ್ಧಿ:

ಇಲ್ಲಿರುವ ಲಕ್ಷಾಂತರ ಪುಸ್ತಕಗಳನ್ನು ಮುಂದಿನ ಪೀಳಿಗೆಗೆ ಉಳಿಸಲು ’ಡಿಜಿಟಲೀಕರಣ’ ವ್ಯವಸ್ಥೆಗೆ ನೆರವು ನೀಡುವುದರ ಜೊತೆಗೆ, ಈ ತಾಣವನ್ನು ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಗೆ ತಂದು ’ಗ್ರಾಮೀಣ ಸಾಂಸ್ಕೃತಿಕ ಪ್ರವಾಸಿ ತಾಣ’ ಎಂದು ಘೋಷಿಸಬೇಕು.

ಸ್ಟೀಲ್ ರಾಕ್‌ಗಳ ಅಳವಡಿಕೆಗೆ ಅನುದಾನ ಕೋರಿಕೆ

ಅಂಕೇಗೌಡರು ಕಳೆದ ೪೦ ವರ್ಷಗಳಿಂದ ೨೫ ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದಾರೆ. ಆದರೆ, ಪ್ರಸ್ತುತ ಈ ಪುಸ್ತಕಗಳನ್ನು ಜೋಡಿಸಿಡಲು ಸ್ಥಳಾವಕಾಶದ ಕೊರತೆ ಇರುವುದರಿಂದ ಪುಸ್ತಕಗಳನ್ನು ಒಂದರ ಮೇಲೊಂದು ರಾಶಿ ಹಾಕಲಾಗಿದೆ. ಇದರಿಂದ ಮೌಲ್ಯಯುತ ಪುಸ್ತಕಗಳು ಹಾಳಾಗುವ ಆತಂಕವಿದ್ದು, ಅವುಗಳನ್ನು ಸಂರಕ್ಷಿಸಲು ಸುಸಜ್ಜಿತ ಸ್ಟೀಲ್ ರಾಕ್‌ಗಳನ್ನು ಅಳವಡಿಸಲು ಇಲಾಖೆಯಿಂದ ವಿಶೇಷ ಅನುದಾನ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಕೋರಿದ್ದರು.

ಶಾಸಕರ ಮನವಿಗೆ ತಕ್ಷಣವೇ ಸ್ಪಂದಿಸಿದ ಸಚಿವರು, ಅಗತ್ಯ ಅನುದಾನ ಮಂಜೂರು ಮಾಡಲು ಕಡತ ಮಂಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

‘ಸಾಂಸ್ಕೃತಿಕ ಪ್ರವಾಸಿ ತಾಣ’ವಾಗಿ ಅಭಿವೃದ್ಧಿ ಮಾಡಲು ಎಚ್.ಕೆ.ಪಾಟೀಲ್‌ಗೆ ಮನವಿ

ಶಾಸಕ ದಿನೇಶ್ ಗೂಳಿಗೌಡ ಅವರು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಭೇಟಿ ಮಾಡಿ, ಅಂಕೇಗೌಡರ ಪುಸ್ತಕ ಮನೆಯನ್ನು ಅಧಿಕೃತವಾಗಿ ‘ಗ್ರಾಮೀಣ ಸಾಂಸ್ಕೃತಿಕ ಪ್ರವಾಸಿ ತಾಣ’ ಎಂದು ಘೋಷಿಸಲು ಮನವಿ ಮಾಡಿದರು. ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿರುವ ಈ ಸ್ಥಳದಲ್ಲಿ ಸುಸಜ್ಜಿತ ವಸ್ತು ಸಂಗ್ರಹಾಲಯ ನಿರ್ಮಾಣ, ಪುಸ್ತಕಗಳ ಡಿಜಿಟಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಅವರು ಕೋರಿದರು. ಈ ಮನವಿಯನ್ನು ಪುರಸ್ಕರಿಸಿದ ಸಚಿವ ಎಚ್.ಕೆ.ಪಾಟೀಲ್ ಅವರು, ಶೀಘ್ರದಲ್ಲೇ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟಿಬಿ ಗೇಟ್‌ ಬದಲಿಸಲು ಹಣ ಕೊಡಿ : ಬಿವೈವಿ
ರಾಯ್‌ ಸಾವಿಗೆ ಐ.ಟಿ. ಕಿರುಕುಳ ಕಾರಣ : ಬಾಬು