ಕೊಟ್ಟೂರಲ್ಲಿ 5 ದಿನಕ್ಕೊಮ್ಮೆ ನೀರು ಪೂರೈಕೆ!

KannadaprabhaNewsNetwork |  
Published : Feb 29, 2024, 02:06 AM IST
ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮದಲ್ಲಿ ನೀರಿಗಾಗಿ ಕಾಯುತ್ತಿರುವ ಗ್ರಾಮಸ್ಥರು. | Kannada Prabha

ಸಾರಾಂಶ

ಕೊಟ್ಟೂರು ಪಟ್ಟಣವು 32 ಸಾವಿರ ಜನಸಂಖ್ಯೆ ಹೊಂದಿದೆ. ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ಕಳೆದ 3 ತಿಂಗಳಿನಿಂದ 5 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ.

ಜಿ. ಸೋಮಶೇಖರ

ಕೊಟ್ಟೂರು: ಕೊಟ್ಟೂರು ತಾಲೂಕು ಕೇಂದ್ರವಾಗಿದೆ. ಆದರೂ ಇಲ್ಲಿ 5 ದಿನಕ್ಕೊಮ್ಮೆ ನೀರು ಪೂರೈಕೆ ಮಾಡುತ್ತಾರೆ. ಅದೇ ರೀತಿ ತಾಲೂಕಿನ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ.

ಕೊಟ್ಟೂರು ಪಟ್ಟಣವು 32 ಸಾವಿರ ಜನಸಂಖ್ಯೆ ಹೊಂದಿದೆ. ಕುಡಿಯುವ ನೀರಿನ ಬವಣೆ ಹೇಳತೀರದಾಗಿದೆ. ಕಳೆದ 3 ತಿಂಗಳಿನಿಂದ 5 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ.

ಪಟ್ಟಣಕ್ಕೆ ತುಂಗಭದ್ರಾ ಹಿನ್ನೀರಿನಿಂದ ಜಾಕ್‌ವೆಲ್‌ ನೀರನ್ನು ಎತ್ತಿ ಶುದ್ದೀಕರಿಸಿ ಸರಬರಾಜು ಮಾಡಲಾಗುತ್ತಿದ್ದು, ಭೀಕರ ಬರದಿಂದಾಗಿ ಹಿನ್ನೀರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. ಅಲ್ಲದೇ ಏರುತ್ತಿರುವ ಬಿಸಿಲಿನ ತಾಪಕ್ಕೆ ನೀರು ದಿನದಿಂದ ದಿನಕ್ಕೆ ಇಳಿಯುತ್ತಿದೆ. ಹೀಗಾಗಿ ಪಟ್ಟಣಕ್ಕೆ 5 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಅಲ್ಲದೇ ನೀರನ್ನು ಮಿತವಾಗಿ ಬಳಸಬೇಕೆಂದು ಪುರಸಭಾ ಅಧಿಕಾರಿಗಳೇ ಮನವಿ ಮಾಡುತ್ತಿದ್ದಾರೆ.

ಕೈಕೊಡುವ ವಿದ್ಯುತ್‌: ಇದು ಪಟ್ಟಣದ ಪರಿಸ್ಥಿತಿಯಾದರೆ, ಗ್ರಾಮೀಣ ಭಾಗಗಳ ಸ್ಥಿತಿ ಇದಕ್ಕಿಂತ ಭಿನ್ನವಿಲ್ಲ. ತಾಲೂಕಿನ 14 ಗ್ರಾಮ ಪಂಚಾಯಿತಿಗಳಿವೆ. ಆದರೆ 3 ಗ್ರಾಪಂಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಆಗಾಗ ಕೈಕೊಡುವ ವಿದ್ಯುತ್‌ ಕೂಡ ನೀರಿನ ಸಮಸ್ಯೆ ಉಲ್ಬಣಿಸಲು ಕಾರಣವಾಗಿದೆ. ಕೊಟ್ಟೂರು ಪಟ್ಟಣಕ್ಕೆ ಮಾತ್ರ ತುಂಗಭದ್ರಾ ಹಿನ್ನೀರಿನಿಂದ ಪೂರೈಕೆ ಮಾಡಲಾಗುತ್ತಿದೆ. ಆದರೆ ತಾಲೂಕಿನ ಹಳ್ಳಿಗಳಿಗೆ ಬೋರ್‌ವೆಲ್‌ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ.

ತಾಲೂಕಿನ ಕಂದಗಲ್ಲು, ತಿಮ್ಮಲಾಪುರ ಮತ್ತು ತಿಮ್ಮಲಾಪುರ ತಾಂಡಾದ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಹೀಗಾಗಿ ಉಜ್ಜಯಿನಿಯಲ್ಲಿ 1 ಮತ್ತು ನಾಗರಕಟ್ಟೆಯಲ್ಲಿ 2 ಖಾಸಗಿ ಬೊರ್‌ವೆಲ್‌ಗಳನ್ನು ಗ್ರಾಮ ಪಂಚಾಯಿತಿ ಆಡಳಿತ ಬಾಡಿಗೆ ಆಧಾರದಲ್ಲಿ ಪಡೆದು ಗ್ರಾಮದ ಜನತೆಗೆ ನೀರು ಪೂರೈಸುವ ಕೆಲಸ ನಿರ್ವಹಿಸುತ್ತಿದೆ. ಇನ್ನುಳಿದ ಗ್ರಾಮಗಳ ಬೋರ್‌ವೆಲ್‌ಗಳಲ್ಲಿ ಸದ್ಯಕ್ಕೆ ನೀರು ಇರುವ ಕಾರಣ ಯಾವುದೇ ನೀರಿನ ತೊಂದರೆ ಕಂಡುಬಂದಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಅಗತ್ಯ ಸಿದ್ಧತೆ: ತಾಲೂಕು ಆಡಳಿತ ನೀರಿನ ತೊಂದರೆ ನಿವಾರಿಸಲು ಸಿದ್ಧತೆ ಕೈಗೊಂಡಿದೆ. ಶಾಸಕ ಕೆ. ನೇಮರಾಜನಾಯ್ಕ ಅವರ ಅಧ್ಯಕ್ಷತೆಯ ಟಾಸ್ಕ್‌ಪೋರ್ಸ್‌ ಈಗಾಗಲೇ ಎರಡು ಬಾರಿ ಸಭೆ ನಡೆಸಿದೆ. ಬರ ಮತ್ತು ನೀರಿನ ಸಮಸ್ಯೆ ನಿರ್ವಹಣೆಗೆ ₹45 ಲಕ್ಷ ಅನುದಾನವನ್ನು ಮೀಸಲಿಡುವ ತೀರ್ಮಾನ ಕೈಗೊಳ್ಳಲಾಗಿದೆ. ನೀರಿನ ಸಮಸ್ಯೆ ಕಂಡುಬರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ ಮಾಲೀಕರೊಂದಿಗೆ ಬಾಡಿಗೆ ಒಪ್ಪಂದ ಮಾಡಿಕೊಳ್ಳುವ ತೀರ್ಮಾನ ಕೈಗೊಳ್ಳಲಾಗಿದೆ. ತುರ್ತು ಅಗತ್ಯ ಬಿದ್ದರೆ ಹಳ್ಳಿಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲು ಟಾರ್ಸ್‌ಪೋರ್ಸ್‌ ಸಮಿತಿ ಯೋಜನೆ ರೂಪಿಸಿದೆ.

15ನೇ ಹಣಕಾಸು ಯೋಜನೆ: ಜಲಜೀವನ್‌ ಯೋಜನೆ ಅನುದಾನ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಶೇ. 60 ಅನುದಾನ ಬಳಸಿಕೊಂಡು ಹೊಸ ಬೋರ್‌ವೆಲ್‌ಗಳನ್ನು ಕೊರೆಸಲು ತಾಲೂಕಿನಲ್ಲಿ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ.

ತಾಲೂಕಿನ ಪ್ರತಿಹಳ್ಳಿಗಳಲ್ಲಿ ಮನೆ ಮನೆಗೆ ನೀರಿನ ಅಳವಡಿಸಲು ಜಲಜೀವನ್‌ ಯೋಜನೆಯಲ್ಲಿ ಎಲ್ಲ ಗ್ರಾಮಗಳಲ್ಲಿ ಕೆಲಸ ಆರಂಭಿಸಿದರೂ ಕಾಮಗಾರಿ ಪೂರ್ಣಗೊಳಿಸುವ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿಲ್ಲ. ಹೀಗಾಗಿ ನೀರಿನ ಸಮಸ್ಯೆ ಗ್ರಾಮಗಳ ಜನತೆಯಲ್ಲಿ ಮತ್ತಷ್ಟು ಕಾಡತೊಡಗಿದೆ.

ಕೊಟ್ಟೂರು ಪಟ್ಟಣದ ಜನತೆಗೆ ಕೊಟ್ಟೂರೇಶ್ವರ ಜಾತ್ರೆಯ ನಿಮಿತ್ತ ಹೆಚ್ಚುವರಿ ನೀರು ಬಿಡಬೇಕೆಂಬ ಬೇಡಿಕೆ ಇದ್ದರೂ ಅದನ್ನು ಈಡೇರಿಸುವ ಆಶಯವನ್ನು ಅಧಿಕಾರಿಗಳು ನೀಡುತ್ತಿಲ್ಲ. ಇದರಿಂದಾಗಿ ಪಟ್ಟಣದ ಜನತೆಯಲ್ಲಿ ಆತಂಕ ಮಡುಗಟ್ಟಿದೆ. ಪಿಡಿಒಗಳಿಗೆ ಸೂಚನೆ: ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿರುವೆ. 15ನೇ ಹಣಕಾಸು ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳುವಂತೆ ತಾಲೂಕು ಪಂಚಾಯಿತಿ ಮೂಲಕ ಗ್ರಾಮಗಳ ಪಿಡಿಒಗಳಿಗೆ ಸೂಚನೆ ನೀಡಿರುವೆ ಎಂದು ಶಾಸಕ ಕೆ. ನೇಮರಾಜನಾಯ್ಕ ತಿಳಿಸಿದರು.

ನೀರು ಪೂರೈಸಿ: ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರನ್ನು ಪಡೆಯಲು ಹೆಚ್ಚುವರಿ ಬೋರ್‌ವೆಲ್‌ಗಳನ್ನು ಕೊರೆಸುವತ್ತ ತಾಲೂಕು ಆಡಳಿತ ಮುಂದಾಗಬೇಕು. ಬಾಡಿಗೆ ಬೋರ್‌ವೆಲ್‌ಗಳನ್ನು ಪಡೆದು ನೀರು ಪೂರೈಸಲು ಗ್ರಾಮ ಪಂಚಾಯಿತಿ ಆಡಳಿತ ಮುಂದಾಗಬೇಕು ಎಂದು ರಾಜ್ಯ ರೈತ ಸಂಘ ಉಪಾಧ್ಯಕ್ಷ ಎನ್‌. ಭರಮಣ್ಣ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಊದಿನಕಡ್ಡಿ ವಾಸನೆಗೆ ಹಣ ಕಳೆದುಕೊಂಡ ಜನ
ಸಾಹಿತ್ಯ - ಸಾಂಸ್ಕೃತಿಕ ಚಟುವಟಿಕೆಗಳಿಂದ ಉತ್ತಮ ಸಮಾಜ ನಿರ್ಮಾಣ: ಹನುಮಂತಯ್ಯ