5 ಗ್ಯಾರಂಟಿ ಯೋಜನೆ ತಲುಪಿಲು ಪ್ರಯತ್ನ

KannadaprabhaNewsNetwork | Published : Jan 24, 2024 2:02 AM

ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರದ ಕಾರ್ಯಕ್ರಮಕ್ಕೆ ಡಿಸಿ ಟಿ.ಭೂಬಾಲನ್‌ ಚಾಲನೆ ನೀಡಿ ಹೇಳಿದ್ದು ಹೀಗೆ.

ಕನ್ನಡಪ್ರಭ ವಾರ್ತೆ ವಿಜಯಪುರ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಜನಪ್ರಿಯ ಹಾಗೂ ಜನಪರ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕ-ಜಾನಪದ ಕಲಾ ತಂಡಗಳ ಪ್ರದರ್ಶನ ಪರಿಣಾಮಕಾರಿ ಸಂವಹನವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ನೈಜ ಫಲಾನುಭವಿಗಳಿಗೆ ಅವರ ಹಕ್ಕನ್ನು ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ ಯೋಜನೆಗಳನ್ನು ಜನರಲ್ಲಿಗೆ ತಲುಪಿಲು ಪ್ರಯತ್ನಿಸಲಾಗುತ್ತಿದೆ. ಸಾರ್ವಜನಿಕರು ಸಹ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರ ಮತ್ತು ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ರಾಜ್ಯ ಸರ್ಕಾರ ಜನರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಕುರಿತಾಗಿ ಜಾಗೃತಿ ಮೂಡಿಸುವಲ್ಲಿ ಈ ಕಲಾ ತಂಡಗಳು ಕಲೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ತಮ್ಮದೇ ಆದ ಹಾಡಿನ ಮೂಲಕ, ಸಂಭಾಷಣೆಯ ಮೂಲಕ ವಿಶಿಷ್ಠ ಹಾಗೂ ವೈಶಿಷ್ಟ ಪೂರ್ಣ ಶೈಲಿಯಲ್ಲಿ ತಲುಪಿಸಲಿವೆ ಎಂದರು.

ನಗರ ಹಾಗೂ ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ಯಥಾವತ್ತಾಗಿ ತಲುಪಿಸಲು ಸಂವಹನ ಮಾಧ್ಯಮವಾಗಿ ಬೀದಿನಾಟಕ ಮತ್ತು ಜಾನಪದ ಕಲಾತಂಡಗಳು, ಜನರಿಗೆ ಮನಮುಟ್ಟುವಂತೆ ತಿಳಿಸಿಕೊಡಲಿವೆ ಎಂದು ತಿಳಿಸಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆಯಿಂದ ಬೀದಿ ನಾಟಕ ಹಾಗೂ ಜಾನಪದ ಕಲಾ ತಂಡಗಳು ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬೀದಿ ನಾಟಕ ಹಾಗೂ ಜಾನಪದ ಸಂಗೀತದ ಮೂಲಕ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಿವೆ ಎಂದು ವಿವರಿಸಿದರು.

ಬೀದಿ ನಾಟಕ ತಂಡಗಳಾದ ವಿಶ್ವಚೇತನ ಕಲಾ ತಂಡ, ಗ್ರಾಮೀಣಾಭಿವೃದ್ದಿ ಕಲಾ ತಂಡ ಹಾಗೂ ಜಾನಪದ ಕಲಾ ತಂಡಗಳಾದ ಸಿದ್ದಾಪುರದ ಗುರುಪ್ರಸಾದ ಜಾನಪದ ತಂಡಗಳು ಭಾಗವಹಿಸಿ ಸರ್ಕಾರದ ಯೋಜನೆಗಳ ಕುರಿತು ಪ್ರದರ್ಶನ ನೀಡಲಿವೆ. ಈ ಕಲಾ ತಂಡಗಳು ಜನವರಿ ಹಾಗೂ ಫೆಬ್ರವರಿ ಮಾಹೆಯಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿವೆ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ,ಜಿಲ್ಲಾಧಿಕಾರಿ ಕಚೇರಿಯ ಎಂ.ಕೆ.ದೇಸಾಯಿ,ಎಸ್.ಎಸ್. ದಿವಟೆ, ಜಮಾದಾರ, ಮೇಟಿ, ಪಿ.ಜಿ.ಕವಟಗಿಮಠ, ಎಂ.ಡಿ.ಕರ್ನಾಳ, ಹಿರೇಮಠ ಸೇರಿದಂತೆ ಮುಂತಾದವರು ಇದ್ದರು.