ಕನ್ನಡಪ್ರಭ ವಾರ್ತೆ ಬೆಂಗಳೂರು
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಅಡಿ ರಚಿಸಲಾಗಿರುವ 5 ನಗರ ಪಾಲಿಕೆಗಳಿಗೆ ನವೆಂಬರ್-ಡಿಸೆಂಬರ್ ವೇಳೆ ಚುನಾವಣೆ ನಡೆಸುವ ಕುರಿತು ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.ಬಿಬಿಎಂಪಿ, ಬಿಡಿಎ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಮಂಗಳವಾರ ಡಿ.ಕೆ. ಶಿವಕುಮಾರ್ ಸಭೆ ನಡೆಸಿದರು.
ಸಭೆಯಲ್ಲಿ ಪ್ರಮುಖವಾಗಿ ಜಿಬಿಎ ಅಡಿಯಲ್ಲಿ ರಚಿಸಲಾಗಿರುವ 5 ನಗರ ಪಾಲಿಕೆಗಳ ಚುನಾವಣೆ ಕುರಿತಂತೆ ಚರ್ಚೆ ನಡೆಸಲಾಗಿದೆ. ನಗರ ಪಾಲಿಕೆಗಳ ಚುನಾವಣೆ ಕುರಿತಂತೆ ಅ. 4ಕ್ಕೆ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಬೇಕಿದೆ. ಅದರಂತೆ ನವೆಂಬರ್-ಡಿಸೆಂಬರ್ನಲ್ಲಿ ಚುನಾವಣೆ ನಡೆಸುವ ಕುರಿತು ಅಫಿಡವಿಟ್ ಸಿದ್ಧಪಡಿಸಬೇಕು. ಜತೆಗೆ, ನವೆಂಬರ್ ತಿಂಗಳೊಳಗೆ ವಾರ್ಡ್ ಮರುರಚನೆ, ಗಡಿ ಗುರುತಿಸುವಿಕೆ, ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧಪಡಿಸುವುದು, ಚುನಾವಣೆ ಬೇಕಾಗುವ ಉಳಿದ ಸಿದ್ಧತೆಗಳ ಕುರಿತ ಸ್ಪಷ್ಟ ಮಾಹಿತಿ ಅಫಿಡವಿಟ್ನಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಒಂದು ತಿಂಗಳಲ್ಲಿ ಎಲ್ಲ ಕಾರ್ಯ ಪೂರ್ಣ
ಅಧಿಕಾರಿಗಳೊಂದಿಗಿನ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಜಿಬಿಎ ಅಡಿಯ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ವಾರ್ಡ್ಗಳ ಮರುವಿಂಗಡಣಾ ಆಯೋಗವು ಈಗಾಗಲೇ ಕೆಲಸ ಆರಂಭಿಸಿದೆ. ವಾರ್ಡ್ಗಳ ಮರುರಚನೆ, ಗಡಿ ಗುರುತಿಸುವಿಕೆ ಕಾರ್ಯ ನಡೆಸುತ್ತಿದೆ. ಆಯೋಗವು ತಾತ್ಕಾಲಿಕ ವಾರ್ಡ್ಗಳು, ಗಡಿ ಗುರುತಿಸುವಿಕೆ, ತಕರಾರು ಅರ್ಜಿಗಳ ಸ್ವೀಕಾರ ಸೇರಿದಂತೆ ಇನ್ನಿತರ ಕೆಲಗಳನ್ನು ಮಾಡಲಿದೆ. ಮುಂದಿನ ಒಂದು ತಿಂಗಳೊಳಗೆ ಅಂದರೆ ಸೆ. 1ರೊಳಗೆ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಲಿದೆ. ಆನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.ನಗರ ಪಾಲಿಕೆಗಳಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಿದ ಕೂಡಲೇ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಲ್ಳಲಾಗುವುದು. ಆ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡ ನಂತರ, ಚುನಾವಣೆಗೆ ಸಂಬಂಧಿಸಿದಂತೆ ಇನ್ನಿತರ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಅ. 22ರಿಂದ ಬೃಹತ್ ಇ-ಖಾತಾ ಅಭಿಯಾನಬೆಂಗಳೂರು ವ್ಯಾಪ್ತಿಯಲ್ಲಿ 24 ಲಕ್ಷ ಎ ಮತ್ತು ಬಿ ಖಾತಾ ಆಸ್ತಿಗಳಿವೆ. ಅದರಲ್ಲಿ ಈಗಾಗಲೇ 6.5 ಲಕ್ಷ ಆಸ್ತಿಗಳಿಗೆ ಇ-ಖಾತಾ ವಿತರಿಸಲಾಗಿದೆ. ಜನರಿಗೆ ಆನ್ಲೈನ್ ಮೂಲಕವೇ ಆಸ್ತಿ ವಿವರಗಳು ನಿಖರವಾಗಿ ದೊರೆಯುವಂತೆ ಮಾಡಬೇಕು. ಭವಿಷ್ಯದಲ್ಲಿ ಆಸ್ತಿ ವಿಚಾರವಾಗಿ ಯಾವುದೇ ತೊಂದರೆಯಾಗಬಾರದು ಎಂಬುದು ನಮ್ಮ ಚಿಂತನೆಯಾಗಿದೆ. ಆ ಕಾರಣಕ್ಕಾಗಿ ಅ. 22ರಿಂದ ನ. 1ರವರೆಗೆ ಬೃಹತ್ ಇ-ಖಾತಾ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಅಭಿಯಾನ ಯಶಸ್ವಿಗೊಳಿಸಲು ಶಿಕ್ಷಕರು, ಬೆಸ್ಕಾಂ ಬಿಲ್ ಕಲೆಕ್ಟರ್, ಬಿಬಿಎಂಪಿ ನೌಕರರ ಭಾಗವಹಿಸುವಿಕೆ ಕುರಿತು ಚರ್ಚಿಸಿ ನಿರ್ಧರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇ-ಖಾತಾ ಅಭಿಯಾನದಲ್ಲಿ ಮನೆಮನೆಗೆ ತೆರಳಿ ತಿಳುವಳಿಕೆ ನೀಡಲಾಗುವುದು. ಸಾರ್ವಜನಿಕರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಅಭಿಯಾನದ ಪ್ರಚಾರದಲ್ಲಿ ಭಾಗವಹಿಸಬಹುದು. ಆದರೆ, ಅವರಿಗೆ ಯಾವುದೇ ಜವಾಬ್ದಾರಿ ನೀಡುವುದಿಲ್ಲ ಎಂದರು.ಇವುಗಳ ನಡುವೆಯೇ ಆ. 15ರಿಂದ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಪಡೆಯಲು ಅನುಸರಿಸಬೇಕಾದ ಮಾನದಂಡಗಳನ್ನು ಬಿಡುಗಡೆ ಮಾಡಲಾಗುವುದು. ಯಾರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ, ಯಾವ ರೀತಿಯ ಅರ್ಜಿ ಸಲ್ಲಿಸಬೇಕು, ಯಾವ ಮೂಲದಿಂದ ಅರ್ಜಿ ಸಲ್ಲಿಸಬೇಕು ಎಂಬಂತಹ ವಿವರಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಹೆಬ್ಬಾಳ ಮೇಲ್ಸೇತುವೆ ಜಂಕ್ಷನ್, ಶಿವಾನಂದ ವೃತ್ತ ಜಂಕ್ಷನ್ ಅಭಿವೃದ್ಧಿ ಹಾಗೂ ಗಾಂಧಿ ಬಜಾರ್ನ ಬಹುಮಹಡಿ ವಾಹನ ನಿಲುಗಡೆ ಕಟ್ಟಡಗಳನ್ನು ಆ. 15ರೊಳಗೆ ಉದ್ಘಾಟನೆ ಮಾಡಲು ಚಿಂತನೆ ನಡೆಸಲಾಗಿದೆ. ಕೆ.ಆರ್.ಪುರ ಕಡೆಯಿಂದ ಬರುವ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ವಿವಿಧ ಯೋಜನೆಗಳ ಅಡಿ ಫಲಾನುಭವಿಗಳ ಆಯ್ಕೆಗಾಗಿ 10ರಿಂದ 15 ಸಾವಿರ ಜನರಿಗೆ ಸೌಲಭ್ಯಗಳ ಹಂಚಿಕೆ ಮಾಡಲಾಗುವುದು. ಅದರಲ್ಲಿ 3,700 ಬೀದಿಬದಿ ವ್ಯಾಪಾರಿಗಳು ತಳ್ಳುವ ಗಾಡಿಗಾಗಿ ಅರ್ಜಿ ಸಲ್ಲಿಸಿದ್ದರು. ಅವರಿಗೆ ಸೌಲಭ್ಯ ನೀಡಲು ನಿರ್ದೇಶಿಸಿದ್ದೇನೆ ಎಂದು ತಿಳಿಸಿದರು.