ದೊಡ್ಡಬಳ್ಳಾಪುರ: ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದ ಪ್ರಸಕ್ತ ಸರ್ಕಾರದ ಮೊದಲ ಪೂರ್ಣಪ್ರಮಾಣದ ಬಜೆಟ್ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 7 ಯೋಜನೆಗಳನ್ನು ಪ್ರಸ್ತಾಪಿಸಲಾಗಿತ್ತು. ಆದರೆ ಈವರೆಗೆ ಆ 7 ಯೋಜನೆಗಳ ಪೈಕಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಒಂದು ಭರವಸೆ ಹೊರತುಪಡಿಸಿ ಉಳಿದ 6 ಯೋಜನೆಗಳು ಕಾರ್ಯಗತಗೊಂಡಿಲ್ಲ.
1.ಬೆಂಗಳೂರು ಹೊರವಲಯದಲ್ಲಿರುವ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್ಶಿಪ್ಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು.
ವಸ್ತುಸ್ಥಿತಿ: ಯೋಜನೆ ಪರಿಶೀಲನೆ ಹಂತದಲ್ಲಿದೆ. ಜಿಲ್ಲೆಯ ವಿವಿಧ ಪಟ್ಟಣಗಳನ್ನು ಸಂಪರ್ಕಿಸುವ ಸುಸಜ್ಜಿತ ರಸ್ತೆ ಮತ್ತು ರೈಲು ಯೋಜನೆಯ ಬಗ್ಗೆ ಅಧ್ಯಯನ ನಡೆಯುತ್ತಿದೆ. ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ.2.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆ ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು.
3.ತಾಲೂಕು ಆಸ್ಪತ್ರೆಗಳಿಲ್ಲದ ಅನೇಕಲ್, ನೆಲಮಂಗಲ, ಹೊಸಕೋಟೆ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು ತಲಾ 40 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು.
4.ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ.
5.ನೆಲಮಂಗಲದಲ್ಲಿ 6 ಕೋಟಿ ರುಪಾಯಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ (ರಾಜ್ಯದ ವಿವಿಧ ಜಿಲ್ಲೆಗಳ 6 ಸ್ಥಳಗಳಲ್ಲಿ ಚಾಲನಾ ಪಥ ನಿರ್ಮಾಣಕ್ಕೆ 36 ಕೋಟಿ ರು.ಮೀಸಲು).
6.ದೇವನಹಳ್ಳಿಯಲ್ಲಿ 5 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾಡ್ ನಿರ್ಮಾಣ ಮಾಡುವುದು (ತುಮಕೂರು ಮತ್ತು ದೇವನಹಳ್ಳಿಗಳಿಗೆ ಯೋಜನೆ ಜಾರಿಗೆ ಒಟ್ಟು 10 ಕೋಟಿ ರು ಮೀಸಲು.)
7.ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು ಉತ್ತೇಜಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಪೂಜನಹಳ್ಳಿಯಲ್ಲಿ ಆಹಾರ ಪಾರ್ಕ್ ಸ್ಥಾಪನೆ.