ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಶೇ.50 ಸಹಾಯಧನ

KannadaprabhaNewsNetwork |  
Published : Sep 18, 2025, 01:10 AM IST
ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. | Kannada Prabha

ಸಾರಾಂಶ

ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಯಾವ ಬೆಳೆ ಬೆಳೆದರೆ ಆರ್ಥಿಕತೆಯಿಂದ ಮುಂದೆ ಬರಲು ಸಾಧ್ಯ ಎಂಬುದನ್ನು ವಿಚಾರ ಮಾಡಿ

ಗದಗ: ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆ ವಿಸ್ತರಿಸಲು ಅವಕಾಶವಿದ್ದು. ಬ್ಯಾಂಕ್ ಸಾಲದೊಂದಿಗೆ ಶೇ.50 ರಷ್ಟು ಅಥವಾ ಗರಿಷ್ಠ ₹15 ಲಕ್ಷಗಳವರೆಗೆ ಸಹಾಯಧನ ಸಿಗಲಿದೆ. ಆತ್ಮನಿರ್ಭರ ಭಾರತ ಅಭಿಯಾನ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ನೀಡುವ ಸಹಾಯಧನ ಯೋಜನೆಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್.ಹೇಳಿದರು.

ಅವರು ಬುಧವಾರ ಗದಗ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕೃಷಿ ಇಲಾಖೆ, ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಆತ್ಮ), ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಮತ್ತು ಕೆಪೆಕ್ ಲಿಮಿಟೆಡ್ ಬೆಂಗಳೂರು ಜಂಟಿ ಸಹಯೋಗದೊಂದಿಗೆ ಪಿಎಂಎಫ್‌ಎಂಇ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಯಾವ ಬೆಳೆ ಬೆಳೆದರೆ ಆರ್ಥಿಕತೆಯಿಂದ ಮುಂದೆ ಬರಲು ಸಾಧ್ಯ ಎಂಬುದನ್ನು ವಿಚಾರ ಮಾಡಿ ಆಧುನಿಕ ತಂತ್ರಜ್ಞಾನ ಅಳವಡಿಕೆ ಮಾಡಿಕೊಂಡು ಕೃಷಿ ಮಾಡಿದಾಗ ನಷ್ಟ ಆಗುವುದಿಲ್ಲ. ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಹಾಗೂ ಕೃಷಿ ಮಾಡುವ ಸಂದರ್ಭದಲ್ಲಿ ಕೃಷಿ ವಿಶ್ವ ವಿದ್ಯಾಲಯದ ಹಾಗೂ ಕೃಷಿ ಇಲಾಖೆಯ ಮಾರ್ಗದರ್ಶನ ಪಡೆದುಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದರು.

ಆತ್ಮ ನಿರ್ಭರ ಯೋಜನೆಯ ಲಾಭ ಎಲ್ಲ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು. ಬೇಕರಿ ಉದ್ದಿಮೆ, ಖಾರ ಪುಡಿ ತಯಾರಿಕೆ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಪ್ರೊಜೆಕ್ಟ್ ತಯಾರಿಸಿ ಕೃಷಿ ಇಲಾಖೆಗೆ ಸಲ್ಲಿಸಿದಾಗ ಸೂಕ್ತ ಮಾರ್ಗದರ್ಶನದಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಈ ಕಾರ್ಯಾಗಾರದ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಮಾತನಾಡಿ, ಪಿಎಂಎಫ್‌ಎಂಇ ಒಂದು ಉಪಯುಕ್ತ ಯೋಜನೆಯಾಗಿದೆ. ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್ ಗಳು ಸಹಕರಿಸುತ್ತವೆ. ಬೇಡಿಕೆಗನುಸಾರವಾಗಿ ರೈತರು ಬೆಳೆ ಬೆಳೆದು ಮಾರುಕಟ್ಟೆಗೆ ಅವಕಾಶ ಕಲ್ಪಿಸಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ರೈತರಿಗೆ ಅಭಿನಂದನಾ ಪತ್ರ, ಉದ್ದಿಮೆದಾರರಿಗೆ ಸಾಲ ಮಂಜೂರಾತಿ ಪತ್ರ ವಿತರಿಸಲಾಯಿತು. ಪಿಎಂಎಫ್‌ಎಂಇ ಯೋಜನೆಯ ಫಲಾನುಭವಿಗಳ ಯಶಸ್ಸಿನ ಕುರಿತು (ಸಕ್ಸೆಸ್ ಸ್ಟೋರಿ) ಕಿರುಚಿತ್ರ ಪ್ರದರ್ಶನ ಜರುಗಿತು. ಉದ್ದಿಮೆದಾರರಾದ ಮುಳಗುಂದದ ರಾಜೇಶ್ವರಿ ಬಡ್ನಿ, ವಾಸುದೇವ ಇಲ್ಲೂರು ತಮ್ಮ ಅನುಭವ ಹಂಚಿಕೊಂಡರು.

ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಅರಹುಣಸಿ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ವೀರೇಂದ್ರ ಪಾಟೀಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಂತೋಷ ಎಂ, ಕೆಪೆಕ್ ಸಂಸ್ಥೆಯ ವಿಘ್ನೇಶ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಹುಲಗಣ್ಣವರ, ತೋಟಗಾರಿಕೆ ಇಲಾಖೆಯ ಶಶಿಕಾಂತ ಕೋಟಿಮನಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳಾರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕೃಷಿ ವಿಜ್ಞಾನ ಕೇಂದ್ರದ ವಿನಾಯಕ ಸೇರಿದಂತೆ ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು, ಅಧಿಕಾರಿಗಳು ಹಾಜರಿದ್ದರು.

ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್.ಸ್ವಾಗತಿಸಿದರು. ಸಹಾಯಕ ಕೃಷಿ ನಿರ್ದೇಶಕಿ ಸೀಮಾ ಸವಣೂರ ನಿರೂಪಿಸಿದರು. ಉಪ ಕೃಷಿ ನಿರ್ದೇಶಕಿ ಸ್ಪೂರ್ತಿ ಜಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಸ್ಥಳದಲ್ಲಿ ಸಿರಿಧಾನ್ಯಗಳಿಂದ ರಚಿಸಿದ ರಂಗೋಲಿಯು ಗಮನ ಸೆಳೆಯಿತು. ಪಿಎಂಎಫ್‌ಎಂಇ ಯೋಜನೆ ಫಲಾನುಭವಿಗಳಿಂದ ಉದ್ದಿಮೆಗಳ ಉತ್ಪನ್ನದ ಗಾಣದ ಎಣ್ಣೆ, ಅವಲಕ್ಕಿ,ಖಾರ ಪುಡಿ, ಖಡಕ್ ರೊಟ್ಟಿ, ಶೇಂಗಾ ಚಟ್ನಿ ವಿವಿಧ ಆಹಾರ ಉತ್ಪನ್ನಗಳ ಮಾರಾಟ ಮಳಿಗೆಗಳು ಜನರನ್ನು ಆಕರ್ಷಿಸಿದವು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ