ಹಾವೇರಿ: ಕರ್ನಾಟಕ ಬಿಜೆಪಿಯ ಭೀಷ್ಮ, ದಕ್ಷಿಣ ಭಾರತದಲ್ಲಿ ಕಮಲ ಅರಳಿಸಿದ ರೂವಾರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ರಾಜ್ಯಕಾರಣದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಂಡಿರುವ ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು, ಜಿಲ್ಲೆಯಿಂದ 50 ಸಾವಿರಕ್ಕೂ ಹೆಚ್ಚು ಜನರು ತೆರಳಲಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.ನಗರದ ಕಾಗಿನೆಲೆ ರಸ್ತೆಯಲ್ಲಿರುವ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರು ನಾಲ್ಕು ಬಾರಿ ಸಿಎಂ ಆಗಿ ರಾಜ್ಯಕ್ಕೆ ಸೇವೆ ಸಲ್ಲಿಸಿದ್ದು, ಅವರ ಅಭಿಮಾನೋತ್ಸವ ಕಾರ್ಯಕ್ರಮದ ಮೂಲಕ ಮುಂದಿನ ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿಸಲಿದೆ. ಜತೆಗೆ, ಕಾಂಗ್ರೆಸ್ಗೆ ಎಚ್ಚರಿಕೆಯ ಸಂದೇಶವೂ ರವಾನೆಯಾಗಲಿದೆ. ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಿಂದಲೂ ಸಹ 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಈಗಾಗಲೇ ಅಭಿಮಾನೋತ್ಸವಕ್ಕೆ ಸಕಲ ಸಿದ್ಧತೆ ನಡೆಸಿದ್ದೇವೆ. ಚಿತ್ರದುರ್ಗ ಇಲ್ಲಿಂದ ಸುಮಾರು 130-140 ಕಿಮೀ ದೂರದಲ್ಲಿದ್ದು, ಅಗತ್ಯ ಬಸ್ ಸೌಲಭ್ಯ ಮಾಡಲಾಗುತ್ತಿದೆ. ಆದಾಗ್ಯೂ ಸಾಕಷ್ಟು ಜನರು ತಮ್ಮ ವೈಯಕ್ತಿಕ ವಾಹನದಲ್ಲಿ ತೆರಳುವುದಾಗಿ ತಿಳಿಸಿದ್ದಾರೆ. ಸುಮಾರು 50-55 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಶಿವರಾಜ ಸಜ್ಜನರ, ಭರತ ಬೊಮ್ಮಾಯಿ, ಭೋಜರಾಜ ಕರೂದಿ, ವಿಜಯಕುಮಾರ ಚಿನ್ನಿಕಟ್ಟಿ, ನಿರಂಜನ ಹೇರೂರ ಮತ್ತಿತರರು ಇದ್ದರು.ಹಿರೇಕೆರೂರು ತಾಲೂಕಿನ ಸುಮಾರು 23 ಗ್ರಾಪಂಗಳ ಬೆಳೆವಿಮೆ ಬಂದಿಲ್ಲ, ಇದನ್ನು ಖಂಡಿಸಿ ಮೇ 6ರಂದು ಹಿರೇಕೆರೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳೆ ನಷ್ಟವಾಗಿದ್ದು, ಈ ಕುರಿತು ಬೆಳೆವಿಮೆ ಪರಿಹಾರ ಕೊಡಿಸುವಲ್ಲಿ ಕೃಷಿ, ಕಂದಾಯ ಮತ್ತು ಸಾಂಖ್ಯಿಕ ಇಲಾಖೆ ವಿಫಲವಾಗಿವೆ. ಬೆಳೆ ವಿಮೆಯಿಂದ ರೈತರು ವಂಚಿತರಾಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರವೇ ರೈತನ ರಕ್ತ ಕುಡಿಯುತ್ತಿದೆ. ಸಕಾಲಕ್ಕೆ ಗೊಬ್ಬರ ಸಿಗುತ್ತಿಲ್ಲ. ದಿನಕ್ಕೊಂದು ಹೊಸ ನಿಯಮ ಮಾಡುತ್ತಿದ್ದು, ಇದೀಗ ಗೊಬ್ಬರಕ್ಕೆ ಎಫ್ಐಡಿ ಮತ್ತು ಲಿಂಕ್ ಎಂಬುದನ್ನು ತಂದಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.