ರಾಮನಗರ: ರಾಮನಗರ ಕ್ಷೇತ್ರ ಕಳೆದ 25 ವರ್ಷಗಳ ಕಾಲ ಅಭಿವೃದ್ಧಿಯಾಗದೆ ಹಿಂದುಳಿದಿತ್ತು. ಕಳೆದ ಒಂದೂವರೆ ವರ್ಷದಲ್ಲಿ ನಾನು ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ 600ರಿಂದ 700 ಕೋಟಿ ಅನುದಾನ ತಂದಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ತಾಲೂಕಿನ ಕೈಲಾಂಚ ಹೋಬಳಿಯ ವಿವಿಧೆಡೆ ವಿವಿಧ ಕಾಮಗಾರಿಗೆ ಪೂಜೆ ಸಲ್ಲಿಸಿ, ತಾಲೂಕಿನ ಅಂಜನಾಪುರ ಗ್ರಾಮದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಮನಗರ ಟೌನ್ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಬೀದಿ ದೀಪಗಳು ಇರಲಿಲ್ಲ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವ ಸಂಬಂಧ ನಗರ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ವಹಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಮತ್ತಷ್ಟು ಅನುದಾನ ನೀಡಲು ಸಿದ್ಧವಿದೆ ಎಂದು ತಿಳಿಸಿದರು.ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ವರ್ಷ ಕಳೆದಿದೆ. ಎಲ್ಲರ ಆಶೀರ್ವಾದ, ಶ್ರಮ ಹಾಗೂ ಪಕ್ಷ ನೀಡಿದ್ದ ಗ್ಯಾರಂಟಿಗಳ ಆಶ್ವಾಸನೆಯಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲಾ ಐದು ಭರವಸೆಗಳನ್ನು ಅನುಷ್ಠಾನಕ್ಕೆ ತರುವ ಮುಖಾಂತರ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಲಾಭ ಜನರ ಮನೆ ಬಾಗಿಲಿಗೆ ತಲುಪಿದೆ. ಇಂತಹ ಕಾರ್ಯಕ್ರಮವನ್ನು ದೇಶದಲ್ಲಿ ಯಾರೂ ಸಹ ಮಾಡಿರಲಿಲ್ಲ. ಆದರೂ ಜನರ ಸಂಕಷ್ಟ ಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸಹಕಾರಿ ಆಗಿವೆ. ದಲ್ಲಾಳಿಗಳ ಹಾವಳಿಯನ್ನ ಮೆಟ್ಟಿ ನಿಂತಿದ್ದು, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಿದ್ದೇವೆ ಎಂದರು.ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಪ್ರತಿಯೊಬ್ಬರಿಗೆ 7 ಕೆ.ಜಿ ಅಕ್ಕಿ ನೀಡುತ್ತಿದ್ದರು. ಬಳಿಕ ಬಂದ ಬಿಜೆಪಿ ಸರ್ಕಾರ ಅದರ ವ್ಯಾಪ್ತಿಯನ್ನು 4 ಕೆಜಿಗೆ ಇಳಿಸಿತು. ರಾಜ್ಯದಲ್ಲಿ ಮತ್ತೇ ಕಾಂಗ್ರೆಸ್ ಸರಕಾರ ರಚನೆಯಾಗಿದ್ದು, ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಬಾಕಿ ಉಳಿದ 5ಕೆಜಿಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡುತ್ತಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಇ-ಸ್ವತ್ತುಗಳಿಗೆ ಖಾತೆಗಳು ಇಲ್ಲ. ಇ-ಸ್ವತ್ತು ಮಾಡಲು ಕ್ರಮ ವಹಿಸಲಾಗಿದೆ. ಪ್ರತಿ ಗ್ರಾಪಂಗೆ 147 ಮನೆಗಳು ವಸತಿ ಯೋಜನೆಯಿಂದ ಮಂಜೂರಾಗಿದೆ. ಫಲಾನುಭವಿಗಳಿಗೆ ಮೂರು ಹಂತದಲ್ಲಿ ಹಣ ಬಿಡುಗಡೆ ಆಗಲಿದೆ. ನಿಮ್ಮ ಆಶೀರ್ವಾದ, ಶಕ್ತಿ ನೀಡಿದರೆ ಮತ್ತಷ್ಟು ಕೆಲಸ ಮಾಡಲು ಹುಮ್ಮಸ್ಸು ಬರಲಿದೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.ಕಾರ್ಯಕ್ರಮದಲ್ಲಿ ವಿಭೂತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ಕಾರ್ಯಾದೇಶದ ಪತ್ರ ವಿತರಣೆ ಮಾಡಲಾಯಿತು. ಕೈಲಾಂಚ ಹೋಬಳಿಯ ವಿವಿಧೆಡೆ ವಿವಿಧ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಮಾಜಿ ಅಧ್ಯಕ್ಷ ಸಿಎನ್ ಆರ್ ವೆಂಕಟೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಎಚ್.ರಾಜು, ನಗರಸಭೆ ಸದಸ್ಯ ಬೈರೇಗೌಡ, ಗ್ರಾಪಂ ಅಧ್ಯಕ್ಷೆ ಸುನೀತಾ ನಾಗರಾಜು, ಉಪಾಧ್ಯಕ್ಷೆ ಮಹದೇವಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರದೀಪ್ ಮುಖಂಡರಾದ ಭದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.15ಕೆಆರ್ ಎಂಎನ್ 1.ಜೆಪಿಜಿ
ರಾಮನಗರ ತಾಲೂಕಿನ ಕೈಲಾಂಚ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಇಕ್ಬಾಲ್ ಹುಸೇನ್ ಭೂಮಿಪೂಜೆ ನೆರವೇರಿಸಿದರು.