ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶ್ಯೇನ ದೃಷ್ಟಿ ಕೇಂದ್ರಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಉಡುಪಿ
ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಹಾಗೂ ಗಡಿ ಭಾಗಗಳಲ್ಲಿ ಸಿಸಿಕ್ಯಾಮರ ಅವಳಡಿಸುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ದಿಟ್ಟ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಅವರು ಗುರುವಾರ ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ ದೃಷ್ಟಿ (ಸಿಸಿ ಕ್ಯಾಮರ) ಕೇಂದ್ರಕ್ಕೆ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದರು.ಜಿಲ್ಲೆಯ 207 ಜಂಕ್ಷನ್ಗಳಲ್ಲಿ 621 ನೈಟ್ ವಿಶನ್ ಹೊಂದಿರುವ ಕ್ಯಾಮೆರಾಗಳು ಮತ್ತು 10 ಜಿಲ್ಲಾ ಗಡಿ ರಸ್ತೆಗಳಲ್ಲಿ 20 ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಯೋಜನೆಗೆ ಸುಮಾರು 2.50 ರಿಂದ 3 ಕೋಟಿ ರುಪಾಯಿ ವೆಚ್ಚವಾಗುತ್ತಿದ್ದು, ಇದನ್ನು ಸಂಪೂರ್ಣವಾಗಿ ಉಡುಪಿ ಚೇಂಬರ್ ಆಫ್ ಕಾಮರ್ಸ್ ಸಂಘಟನೆ ನೀಡಿದೆ. ಇದಕ್ಕಾಗಿ ಸಂಸ್ಥೆಗೆ ಜಿಲ್ಲಾಡಳಿತ ಮತ್ತು ಸರ್ಕಾರದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದರು. ಕೋರ್ಟ್ ತೀರ್ಪಿಗೆ ತಲೆಬಾಗಬೇಕು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಏಳು ಸಹಚರರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಿದ ಸಚಿವರು, ನ್ಯಾಯಾಲಯ ತೀರ್ಪು ಕೊಟ್ಟ ನಂತರ ನಾವೆಲ್ಲರೂ ಅದಕ್ಕೆ ತಲೆಬಾಗಲೇಬೇಕು. ಸಂವಿಧಾನದಲ್ಲಿ ವಿಶ್ವಾಸ ಇರಿಸಿಕೊಂಡಿರುವ ನಾವೆಲ್ಲರೂ ಅದನ್ನು ಒಪ್ಪಿಕೊಳ್ಳಬೇಕು ಎಂದರು.
ಹೈಕಮಾಂಡ್ ತೀರ್ಮಾನಕ್ಕೆ ಬದ್ಧ:ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರನಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಅವರ ಅಭಿಮಾನಿಗಳ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ. ಆದರೆ ನಮ್ಮದು ಹೈಕಮಾಂಡ್ ಇರುವ ಪಕ್ಷ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದೇ ಫೈನಲ್ ಎಂದು ಹೇಳಿದರು. ಚೌತಿ ಹಬ್ಬಕ್ಕೆ ಗೃಹಲಕ್ಷ್ಮೀ ಹಣ:
ಗೃಹಲಕ್ಷ್ಮೀ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ. ಹಣ ಬಿಡುಗಡೆಯಾಗಿ ಸರಿಸುಮಾರು ಐದು ಆರು ದಿನಗಳು ಕಳೆದಿವೆ. ಎಲ್ಲರಿಗೂ ಹಣ ತಲುಪಲಿದೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ. ಜುಲೈ ಹಣ ಕೆಲವೇ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಬರಲಿದೆ. ಮುಂದಿನ ಗಣೇಶ ಚತುರ್ಥಿಯೊಳಗೆ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಸಚಿವೆ ಹೇಳಿದರು.ಈ ವೇಳೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಪಂ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.--------------ಅಕ್ಕ ಕೆಫೆಗೆ ಚಾಲನೆ
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಸಂಜೀವಿನಿ ಯೋಜನೆಯಡಿ, ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಅಕ್ಕ ಕೆಫೆಗೆ ಹಾಲುಕ್ಕಿಸುವ ಮೂಲಕ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.