1,303 ಅರ್ಜಿಗಳ ಪೈಕಿ 696 ವಿಲೇವಾರಿ: ಡಿಸಿ

KannadaprabhaNewsNetwork |  
Published : Sep 19, 2026, 02:15 AM IST
ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ | Kannada Prabha

ಸಾರಾಂಶ

ಕೊಪ್ಪಳ, ಕುಕನೂರು, ಯಲಬುರ್ಗಾ, ಕನಕಗಿರಿ, ಕಾರಟಗಿ ಹಾಗೂ ಗಂಗಾವತಿ ತಾಲೂಕುಗಳಲ್ಲಿ ನಡೆದ ತಾಲೂಕು ಮತ್ತು ಹೋಬಳಿ ಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿ ಕುರಿತು ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಕೊಪ್ಪಳ: ‘ಪ್ರಜಾಸೇವಾ ಆಂದೋಲನ’ ಸಭೆಗಳಲ್ಲಿ ಸ್ವೀಕರಿಸಿದ ಜನರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ, ಅರ್ಜಿಗಳನ್ನು ವಿಲೇವಾರಿ ಮಾಡುತ್ತಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿಗೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚೆಗೆ ಜಿಲ್ಲೆಯ ಕೊಪ್ಪಳ, ಕುಕನೂರು, ಯಲಬುರ್ಗಾ, ಕನಕಗಿರಿ, ಕಾರಟಗಿ ಹಾಗೂ ಗಂಗಾವತಿ ತಾಲೂಕುಗಳಲ್ಲಿ ನಡೆದ ತಾಲೂಕು ಮತ್ತು ಹೋಬಳಿ ಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿ ಕುರಿತು ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಇಲಾಖಾವಾರು ಪ್ರಗತಿ ಪರಿಶೀಲಿಸಿದರು.

ಜಿಲ್ಲೆಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಒಟ್ಟು 1,303 ಅರ್ಜಿಗಳು ಸ್ವೀಕೃತವಾಗಿದ್ದು, ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗಿದೆ. ಈ ವರೆಗೆ 696 ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದ್ದು, ಬಾಕಿ ಇರುವ 586 ಅರ್ಜಿಗಳ ಪರಿಹಾರಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸಭೆಗೆ ಮಾಹಿತಿ ನೀಡಿದರು.

ರೇಷನ್ ಕಾರ್ಡ್‌ಗಳಲ್ಲಿ ಹೊಸ ಸೇರ್ಪಡೆ ಹಾಗೂ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ಪಶು ಚಿಕಿತ್ಸಾಲಯದಲ್ಲಿ ಖಾಲಿ ಇರುವ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಸಂಬಂಧಿಸಿದ ಅರ್ಜಿಗೆ ಸ್ಪಂದಿಸಿ, ಬಿರಳ್ಳಿ ಪಶು ಚಿಕಿತ್ಸಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಪರೀಕ್ಷಕರಿಗೆ ಹಟ್ಟಿ ಗ್ರಾಮಕ್ಕೆ ಪ್ರಭಾರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಹನುಮನಹಾಳಕ್ಕೆ ವೈದ್ಯ, ಎಕ್ಸ್‌ರೇ ಯಂತ್ರ: ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕುಷ್ಟಗಿ ತಾಲೂಕಿನ ಹನುಮನಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾರ್ವಜನಿಕರ ಬೇಡಿಕೆಯಂತೆ ಎಂಬಿಬಿಎಸ್ ವೈದ್ಯರನ್ನು ನಿಯೋಜಿಸಲಾಗಿದೆ. ಎಕ್ಸ್‌ರೇ ತಂತ್ರಜ್ಞರಿದ್ದರೂ ಯಂತ್ರದ ಕೊರತೆಯಿಂದ ಸೇವೆ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ಲಭ್ಯವಿದ್ದ ಎಕ್ಸ್‌ರೇ ಯಂತ್ರವನ್ನು ಅಲ್ಲಿಗೆ ಸ್ಥಳಾಂತರಿಸಿ ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಅಳವಂಡಿ ಆಸ್ಪತ್ರೆ ಮೇಲ್ದರ್ಜೆಗೆ ಪ್ರಸ್ತಾವನೆ: ಅಳವಂಡಿಯ ಸ್ಥಳೀಯರೊಬ್ಬರು ಫಿಟ್‌ನೆಸ್ ಪ್ರಮಾಣಪತ್ರಕ್ಕಾಗಿ ಸಲ್ಲಿಸಿದ್ದ ಅರ್ಜಿಗೆ ಸ್ಥಳದಲ್ಲಿಯೇ ಸ್ಪಂದಿಸಲಾಗಿದೆ. ಅಳವಂಡಿ ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪ್ರಸ್ತಾವನೆ ಸಿದ್ಧಪಡಿಸಿ ಆಯುಕ್ತರಿಗೆ ಸಲ್ಲಿಸಲಾಗಿದೆ. ಆ್ಯಂಬುಲೆನ್ಸ್ ಸೌಲಭ್ಯಕ್ಕಾಗಿ ಚಾಲಕ ಹುದ್ದೆ ಮಂಜೂರಾತಿ ಪಡೆದು ಸೇವೆ ಕಲ್ಪಿಸಲು ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮಂಗಳೂರು ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರ: ಮಂಗಳೂರು ಗ್ರಾಮದಲ್ಲಿ ನಡೆದ ‘ಪ್ರಜಾಸೇವಾ’ ಸಭೆಯಲ್ಲಿ ಸ್ವೀಕರಿಸಿದ ಅರ್ಜಿಯ ಆಧಾರದ ಮೇಲೆ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಮೂಲಸೌಕರ್ಯ ಕೊರತೆ ನೀಗಿಸಲಾಗಿದೆ. ಆರೋಗ್ಯ ಕೇಂದ್ರಕ್ಕೆ 40 ಹೊಸ ಫ್ಯಾನ್‌ಗಳನ್ನು ಅಳವಡಿಸಲಾಗಿದ್ದು, ಒಳಚರಂಡಿ ದುರಸ್ತಿ ಕಾರ್ಯವನ್ನೂ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್ ಸಿದ್ಧತೆ: ಮಲ್ಲಿಕಾರ್ಜುನ ನಾಗಪ್ಪ
ಎಲ್ಲರಿಗೂ ಕಾನೂನು ದೊರೆಯಲಿ: ಹುಲ್ಲೂರ ಹೇಮಲತಾ ಬಸಪ್ಪ