4 ಲಕ್ಷ ಮೌಲ್ಯದ 8 ಕೆಜಿ ಗಾಂಜಾ ನಾಶ

KannadaprabhaNewsNetwork |  
Published : Jun 27, 2026, 12:45 AM IST
ಎಸ್ಪಿ ನೇತೃತ್ವದಲ್ಲಿ ಗಾಂಜಾ ನಾಶ ಪಡಿಸಲಾಯಿತು. | Kannada Prabha

ಸಾರಾಂಶ

ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಜೈವಿಕ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗಾಂಜಾವನ್ನು ಸಾಗಿಸಿ ವೈಜ್ಞಾನಿಕ ವಿಧಾನದಲ್ಲಿ ಸಂಪೂರ್ಣವಾಗಿ ನಾಶಪಡಿಸಲಾಯಿತು.

ಗದಗ: ಮಾದಕ ವಸ್ತುಗಳ ನಿರ್ಮೂಲನೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಜಿಲ್ಲಾ ಪೊಲೀಸರು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 8.08 ಕೆಜಿ ಗಾಂಜಾವನ್ನು ನ್ಯಾಯಾಲಯದ ಅನುಮತಿ ಪಡೆದು ನಿಯಮಾನುಸಾರವಾಗಿ ಶುಕ್ರವಾರ ನಾಶಪಡಿಸಿದರು.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾದ ಒಟ್ಟು ಎಂಟು ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಂದಾಜು 404100 ಮೌಲ್ಯದ ಗಾಂಜಾ(ಮಾದಕ) ಪದಾರ್ಥವನ್ನು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನ್ಯಾಯಾಲಯದ ಆದೇಶದಂತೆ, ಎಸ್ಪಿ ನೇತೃತ್ವದಲ್ಲಿ ಹಾಗೂ ಜಿಲ್ಲಾ ಡ್ರಗ್ ಡಿಸ್ಪೋಸಲ್ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಪ್ರಕ್ರಿಯೆ ನಡೆಸಲಾಯಿತು.

ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಜೈವಿಕ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗಾಂಜಾವನ್ನು ಸಾಗಿಸಿ ವೈಜ್ಞಾನಿಕ ವಿಧಾನದಲ್ಲಿ ಸಂಪೂರ್ಣವಾಗಿ ನಾಶಪಡಿಸಲಾಯಿತು. ಮಾದಕ ವಸ್ತುಗಳು ಮತ್ತೊಮ್ಮೆ ದುಷ್ಕರ್ಮಿಗಳ ಕೈ ಸೇರದಂತೆ ತಡೆಯುವುದು, ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಇದರ ಮೂಲ ಉದ್ದೇಶವಾಗಿದೆ.

ಜಿಲ್ಲಾ ಪೊಲೀಸರು ಕಳೆದ ಕೆಲವು ತಿಂಗಳುಗಳಿಂದ ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಅಕ್ರಮ ಸಂಗ್ರಹದ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಹಲವು ಪ್ರಕರಣಗಳನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾವನ್ನೇ ಶುಕ್ರವಾರ ನಾಶಪಡಿಸಲಾಯಿತು.

ಕಾರ್ಯಾಚರಣೆಯಲ್ಲಿ ಎಸ್ಪಿ ರೋಹನ್ ಜಗದೀಶ್, ಡಿಎಎಸ್ಪಿ ಮುರ್ತುಜಾ ಖಾದ್ರಿ ಸೇರಿದಂತೆ ಜಿಲ್ಲಾ ಡ್ರಗ್ ಡಿಸ್ಪೋಸಲ್ ಸಮಿತಿ ಸದಸ್ಯರು, ವಿವಿಧ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು ಪ್ರಕ್ರಿಯಿಯನ್ನು ಪೂರ್ಣಗೊಳಿಸಿದರು. ವಿಲೇವಾರಿ ಕಾರ್ಯ: ಯುವ ಸಮುದಾಯವನ್ನು ಮಾದಕ ವ್ಯಸನದಿಂದ ದೂರವಿಡುವುದು ಹಾಗೂ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಆದ್ಯತೆಯಾಗಿದೆ. ಸಮಾಜವನ್ನು ಮಾದಕ ವ್ಯಸನದಿಂದ ರಕ್ಷಿಸುವ ಉದ್ದೇಶದಿಂದ ನ್ಯಾಯಾಲಯದ ಮಾರ್ಗಸೂಚಿ ಮತ್ತು ಎನ್ಡಿಪಿಎಸ್ ಕಾಯ್ದೆಯ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಈ ವಿಲೇವಾರಿ ಕಾರ್ಯ ಕೈಗೊಳ್ಳಲಾಯಿತು ಎಂದು ಎಸ್ಪಿ ರೋಹನ್ ಜಗದೀಶ್ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಮಾರಕ ಶಿಲ್ಪಗಳ ಅನಾದರ ಸಲ್ಲದು: ಡಾ. ಮದ್ದಾನಸ್ವಾಮಿ ಯರಬಾಳ
ಪಂಚಮಸಾಲಿಗಳಿಗೆ ರಾಜ್ಯವನ್ನೇ ಆಳುವ ಶಕ್ತಿಯಿದೆ: ಸವಿತಾ ರಮೇಶ