ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು, ಶಾಲೆಗೆ ಹಸಿರು ತಳಿರು, ತೋರಣ, ಸ್ವಾಗತ ಕಮಾನು ತಯಾರು ಮಾಡಲಾಗಿತ್ತು, ವಿದ್ಯಾರ್ಥಿಗಳಿಗೆ ಸಮವಸ್ತ್ರ- ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಕನ್ನಡಪ್ರಭ ವಾರ್ತೆ ಮಂಡ್ಯ
೨೦೨೫- ೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢಶಾಲಾ ತರಗತಿಗಳು ಶುಕ್ರವಾರದಿಂದ ವಿಧ್ಯುಕ್ತವಾಗಿ ಆರಂಭಗೊಂಡವು. ಶಾಲೆಗಳ ಪ್ರವೇಶದ್ವಾರದಲ್ಲಿ ತಳಿರು ತೋರಣ, ರಂಗೋಲಿ ಬಿಟ್ಟು, ತರಗತಿಗಳ ಕೊಠಡಿಗಳಿಗೆ ಅಲಂಕಾರ ಮಾಡಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಭವ್ಯ ಸ್ವಾಗತ ನೀಡಿದರು.
ಶಾಲಾ ಆರಂಭದ ಮೊದಲ ದಿನವೇ ಶೇ.೭೦ ರಿಂದ ೮೦ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿದ್ದರು. ಅತ್ಯುತ್ಸಾಹದಿಂದಲೇ ವಿದ್ಯಾರ್ಥಿಗಳು ತರಗತಿಗಳಿಗೆ ಆಗಮಿಸಿದರು. ಶಿಕ್ಷಕರು ಮಕ್ಕಳಿಗೆ ಗುಲಾಬಿ ಹೂ ನೀಡಿ, ಸಿಹಿ ವಿತರಿಸಿದರು.
ಸರ್ಕಾರಿ ಶಾಲೆಗಳಿಗೆ ಶೇ.೮೦ರಷ್ಟು ಪಠ್ಯಪುಸ್ತಕಗಳು ಬಂದಿದ್ದು, ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನೂ ಆಯೋಜನೆ ಮಾಡಲಾಗಿತ್ತು.
ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ಮಾತನಾಡಿ, ೨೦೨೫- ೨೬ನೇ ಶೈಕ್ಷಣಿಕ ವರ್ಷದ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚಟುವಟಿಕೆಗಳು ಪುನ:ಆರಂಭಗೊಳ್ಳಲು ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದೆವು ಎಂದು ಹೇಳಿದರು.
ನಗರದ ಹೊಸಹಳ್ಳಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ೨೦೨೫- ೨೬ನೇ ಶೈಕ್ಷಣಿಕ ವರ್ಷದ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚಟುವಟಿಕೆಗಳ ಪುನಾರಂಭ, ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದಿನಿಂದ ಎಲ್ಲಾ ಶಾಲೆಗಳು ಪುನಾರಂಭಗೊಳ್ಳುತ್ತಿವೆ, ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ, ಶಿಕ್ಷಕರ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ಬಿಇಒ ಅವರು ಮಾಹಿತಿ ನೀಡಿದ್ದಾರೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಮಾತನಾಡಿ, ಶಾಲೆ ಆರಂಭಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡು ಪಾಠ, ಶಾಲಾ ಚಟುವಟಿಕೆ ಆರಂಭಗೊಳ್ಳುತ್ತಿವೆ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಗುತ್ತಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಬಿಸಿಯೂಟ, ಮೊಟ್ಟೆ ವಿತರಣೆ ಆಗಲಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಶಿಕ್ಷಕರ ಕೊರತೆ ಇಲ್ಲ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು, ಶಾಲೆಗೆ ಹಸಿರು ತಳಿರು, ತೋರಣ, ಸ್ವಾಗತ ಕಮಾನು ತಯಾರು ಮಾಡಲಾಗಿತ್ತು, ವಿದ್ಯಾರ್ಥಿಗಳಿಗೆ ಸಮವಸ್ತ್ರ- ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಎಚ್.ಎಸ್.ಮಂಜು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮೀ, ಡಿಡಿಪಿಐ ಶಿವರಾಮೇಗೌಡ, ಶಾಲಾಭಿವೃದ್ಧಿ ಸಮಿತಿಯ ಶೇಖರ್, ಜೆ.ಕೆ.ಶ್ರೀಕಾಂತ್, ಪ್ರೌಢಶಾಲೆ ಮುಖ್ಯಶಿಕ್ಷಕಿ ಜ್ಯೋತಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಲೀಲಾವತಿ, ಸಹಶಿಕ್ಷಕ ವೃಂದ ಹಾಜರಿದ್ದರು.
ಮೊದಲ ದಿನ ವಿದ್ಯಾರ್ಥಿಗಳು ಶೇ.೮೦ರಷ್ಟು ತರಗತಿಗಳಿಗೆ ಹಾಜರಾಗಿದ್ದಾರೆ. ಶಾಲಾವರಣದಲ್ಲಿ ರಂಗೋಲಿ ಬಿಟ್ಟು, ತಳಿರು ತೋರಣ ಕಟ್ಟಿ, ಹೂವುಗಳಿಂದ ಅಲಂಕರಿಸಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಬಿಸಿಯೂಟಕ್ಕೂ ವ್ಯವಸ್ಥೆ ಮಾಡಿದ್ದು, ಶೇ.೮೦ರಷ್ಟು ಪಠ್ಯಪುಸ್ತಕಗಳು ಪೂರೈಕೆಯಾಗಿದ್ದು, ಸಮವಸ್ತ್ರಗಳನ್ನೂ ವಿತರಿಸಲಾಗುತ್ತಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.