ಗ್ರಾಮೀಣ ವಸತಿ ಯೋಜನೆ ಅನುಷ್ಠಾನದಲ್ಲಿ ಶೇ.83ರಷ್ಟು ಪ್ರಗತಿ

KannadaprabhaNewsNetwork |  
Published : Jun 16, 2024, 01:45 AM ISTUpdated : Jun 16, 2024, 01:46 AM IST

ಸಾರಾಂಶ

ದೊಡ್ಡಬಳ್ಳಾಪುರ: 2010-11 ಸಾಲಿನಿಂದ 2022-23ನೇ ಸಾಲಿನ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವಿವಿಧ ವಸತಿ ಯೋಜನೆಗಳ ಅನುಷ್ಟಾನಕ್ಕಾಗಿ ಒಟ್ಟು 35846 ಮನೆಗಳು ಮಂಜೂರಾಗಿದ್ದು, ಇಲ್ಲಿಯವರೆಗೆ 29850 ಮನೆಗಳನ್ನು ಪೂರ್ಣಗೊಳಿಸಿ ಶೇ.83.27 ರಷ್ಟು ಸಾಧನೆ ಮಾಡಲಾಗಿದೆ ಎಂದು ಬೆಂ.ಗ್ರಾ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.

ದೊಡ್ಡಬಳ್ಳಾಪುರ: 2010-11 ಸಾಲಿನಿಂದ 2022-23ನೇ ಸಾಲಿನ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವಿವಿಧ ವಸತಿ ಯೋಜನೆಗಳ ಅನುಷ್ಟಾನಕ್ಕಾಗಿ ಒಟ್ಟು 35846 ಮನೆಗಳು ಮಂಜೂರಾಗಿದ್ದು, ಇಲ್ಲಿಯವರೆಗೆ 29850 ಮನೆಗಳನ್ನು ಪೂರ್ಣಗೊಳಿಸಿ ಶೇ.83.27 ರಷ್ಟು ಸಾಧನೆ ಮಾಡಲಾಗಿದೆ ಎಂದು ಬೆಂ.ಗ್ರಾ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.

ಶನಿವಾರ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ವಿವಿಧ ಇಲಾಖೆಗಳ ಅಧಿಕಾರಿಗಳು, ವಸತಿ ಯೋಜನೆಯಡಿ ನಿವೇಶನ ರಹಿತ ಕುಟುಂಬಗಳನ್ನು ಈಗಾಗಲೇ ಗುರುತಿಸಿದ್ದು, ಈ ಜಿಲ್ಲೆಯಲ್ಲಿ ಒಟ್ಟು 22310 ಫಲಾನುಭವಿಗಳಿರುತ್ತಾರೆ. ಇವರಿಗೆ ನಿವೇಶಗಳನ್ನು ಒದಗಿಸಲು 464 ಎಕರೆ 38 ಗುಂಟೆ ಜಮೀನನ್ನು ಕಾಯ್ದಿರಿಸಲಾಗಿದೆ. ಇಲ್ಲಿಯವರೆಗೆ ಆಶ್ರಯ ನಿವೇಶನ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಕಾಯ್ದಿರಿಸಿರುವ ಒಟ್ಟು 464.38 ಎಕರೆ ಜಮೀನಿನ ಪೈಕಿ 62.18 ಎಕರೆ ಜಮೀನಿನಲ್ಲಿ ಒಟ್ಟು 1679 ನಿವೇಶನ ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆ ಕೋರಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇಲ್ಲಿಯವರೆಗೆ 45.30 ಎಕರೆ ಪ್ರದೇಶದಲ್ಲಿ ಒಟ್ಟು 1116 ನಿವೇಶನಗಳನ್ನು ರಚಿಸಲು ರಾಜೀವ್‌ಗಾಂಧಿ ವಸತಿ ನಿಗಮದಿಂದ ಅನುದಾನ ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿರುತ್ತದೆ. ಉಳಿದ ಜಮೀನಿನನಲ್ಲಿ ಅರ್ಹ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲಾಗುತ್ತಿದೆ ಎಂದರು.

ನರೇಗಾ ಅಡಿ 14 ಲಕ್ಷ ಮಾನವ ದಿನಗಳ ಗುರಿ:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 14 ಲಕ್ಷ ಮಾನವ ದಿನಗಳ ಗುರಿ ಹೊಂದಿದ್ದು, ಮೇ-2024ರ ಅಂತ್ಯಕ್ಕೆ 3.64 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದ್ದು, ಸಂಚಿತ ಗುರಿಗೆ ಶೇಕಡ. 154.91 ರಷ್ಟು ಮಾನವ ದಿನಗಳನ್ನು ಸೃಜಿಸಿದ್ದು, ಆರ್ಥಿಕವಾಗಿ 1531.59 ಲಕ್ಷಗಳ ಪ್ರಗತಿ ಸಾಧಿಸಲಾಗಿದೆ ಎಂದರು.

ಮೇವು ಸಮಸ್ಯೆ ಇಲ್ಲ:

ಪ್ರಸ್ತುತ ವರ್ಷ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಯಲ್ಲಿ ಜಾನುವಾರುಗಳಿಗೆ 267934 ಮೆಟ್ರಿಕ್‌ ಟನ್‌ ಮೇವು ಲಭ್ಯವಿದ್ದು, ಇನ್ನು ಸುಮಾರು 31 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿರುತ್ತದೆ. ಪಶುಪಾಲನೆ ಇಲಾಖೆಯಿಂದ 58126 ಮೇವಿನ ಕಿರು ಪೊಟ್ಟಣ ಹಾಗೂ ಕೆ.ಎಂ.ಎಪ್‌ ನಿಂದ 40011 ಮೇವಿನ ಕಿರು ಪೊಟ್ಟಣ ಒಟ್ಟು 98137 ಮೇವಿನ ಕಿರು ಪೊಟ್ಟಣಗಳನ್ನು ನೀರಾವರಿ ಹೊಂದಿರುವ ರೈತರಿಗೆ ಉಚಿತವಾಗಿ ವಿತರಿಸಲಾಗಿದೆ ಎಂದರು.ಬಾಕ್ಸ್‌...

ಕುಡಿವ ನೀರಿಗೆ ಆದ್ಯತೆ:

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲೂಕುಗಳಿನ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಈಗಾಗಲೇ 43 ಗ್ರಾಮ ಪಂಚಾಯಿತಿಗಳಿಂದ 68 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದೆಂದು ಅಂದಾಜಿಸಿ, ಸಮಸ್ಯೆಯನ್ನು ಪರಿಹರಿಸುವುದಕ್ಕಾಗಿ ಈಗಾಗಲೇ 180 ಖಾಸಗಿ ವ್ಯಕ್ತಿಗಳ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ ಹಾಗೂ ತುರ್ತಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಟ್ಯಾಂಕರ್‌ಗಳ ಮೂಲಕ ತಕ್ಷಣ ನೀರು ಸರಬರಾಜು ಮಾಡಲು ಸನ್ನದ್ದವಾಗಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಾರೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಹಾಗೂ ಪ್ರತಿ ತಾಲೂಕಿಗೂ 25 ಲಕ್ಷ ರುಪಾಯಿ ವೆಚ್ಚದಲ್ಲಿ ಕೊಳವೆ ಬಾವಿ ಕೊರೆಯಲು ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್‌ ಹೇಳಿದರು.ಬಾಕ್ಸ್‌...........

ಅಮೃತ ಸರೋವರ ಅಡಿ 158 ಕೆರೆ ಅಭಿವೃದ್ಧಿ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬರಗಾಲ ಘೋಷಿತ ಜಿಲ್ಲೆಯಾಗಿದ್ದು, ಗೋಕಟ್ಟೆ, ಕುಂಟೆ, ಕೆರೆ, ಕಲ್ಯಾಣಿ, ಕೃಷಿಹೊಂಡ, ಬದು ನಿರ್ಮಾಣ, ನಾಲಾ ಅಭಿವೃದ್ಧಿ, ಚೆಕ್ ಡ್ಯಾಂ ಮತ್ತು ಸಸಿ ನೆಡುವಂತಹ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಪೂರ್ಣಗೊಳಿಸುವ ಕೆಲಸ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಮೃತ ಸರೋವರ ಕಾರ್ಯಕ್ರಮದಡಿ ಒಟ್ಟು 158 ಕೆರೆ, ಗೋಕಟ್ಟೆಗಳನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್‌ ತಿಳಿಸಿದರು.

ಸ್ಮಶಾನ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 679 ಸ್ಮಶಾನಗಳನ್ನು ಗುರುತಿಸಲಾಗಿದ್ದು. ಇದುವರೆಗೆ 207 ಸ್ಮಶಾನಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಮತ್ತು ಈ ಜಿಲ್ಲೆಯಲ್ಲಿನ ಎಲ್ಲಾ ಗ್ರಾಮಗಳಿಗೂ ಸಾರ್ವಜನಿಕ ಸ್ಮಶಾನವನ್ನು ಕಲ್ಪಿಸಿಕೊಡಲಾಗಿದೆ. ಅದೇ ರೀತಿ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 99593 ಅರ್ಜಿದಾರರಿಗೆ 29.48 ಕೋಟಿ ರುಪಾಯಿಗಳ ಬೆಳೆಹಾನಿ ಬರ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!