ಕನ್ನಡಪ್ರಭ ವಾರ್ತೆ ಮಂಡ್ಯ
ಮೆರವಣಿಗೆ ಸಮಿತಿ ಅಧ್ಯಕ್ಷರೂ ಆದ ಶಾಸಕ ಮಧು ಜಿ.ಮಾದೇಗೌಡ ಅವರು ಸಮಿತಿಗೆ ಬೇಕಾಗಬಹುದಾದ ಅನುದಾನ ಕೋರಲು ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉಪ ಸಮಿತಿಗಳ ಸಂಚಾಲಕರ ಸಭೆ ನಡೆಸಿದರು.
ಈ ವೇಳೆ 10 ವಿವಿಧ ಉಪ ಸಮಿತಿಗಳ ಸಂಚಾಲಕರು ವಿವಿಧ ಚಟುವಟಿಕೆ ನಿರ್ವಹಿಸಲು ತಮ್ಮ ಸಮಿತಿಗಳಿಗೆ ಬೇಕಾಗಬಹುದಾದ ಅಂದಾಜು ವೆಚ್ಚದ ಮಾಹಿತಿ ನೀಡಿದರು.ಕಲಾತಂಡ ಆಯ್ಕೆ ಉಪ ಸಮಿತಿ 31.45 ಲಕ್ಷ ರು., ಸ್ತಬ್ಧಚಿತ್ರ ಉಪ ಸಮಿತಿ 21 ಲಕ್ಷ ರು., ಪೂರ್ಣಕುಂಭ ಉಪ ಸಮಿತಿ 1 ಲಕ್ಷ ರು., ಸ್ಕೌಟ್ಸ್ ಮತ್ತು ಗೈಡ್ಸ್ ಉಪ ಸಮಿತಿ 1.30 ಲಕ್ಷ ರು., ದೈಹಿಕ ಶಿಕ್ಷಣ ಶಿಕ್ಷಕರ ಮತ್ತು ಎನ್ಸಿಸಿ ತಂಡಗಳ ಸಂಯೋಜನಾ ಉಪ ಸಮಿತಿ 1.50 ಲಕ್ಷ ರು., ಎತ್ತಿನಗಾಡಿ ಮತ್ತು ಆನೆಗಳ ಸಂಯೋಜನಾ ಉಪ ಸಮಿತಿ 6 ಲಕ್ಷ ರು., ಆಟೋರಿಕ್ಷಾ ಮೆರವಣಿಗೆ ಉಪ ಸಮಿತಿ 1.75 ಲಕ್ಷ ರು., ಸಂಘ-ಸಂಸ್ಥೆಗಳ ಸಂಯೋಜನಾ ಉಪ ಸಮಿತಿ 50 ಸಾವಿರ ರು., ಶಾಲಾ-ಕಾಲೇಜುಗಳ ಸಂಯೋಜನಾ ಉಪ ಸಮಿತಿ 50 ಸಾವಿರ ರು., ಹಾಗೂ ಸಮ್ಮೇಳನ ಅಧ್ಯಕ್ಷರ ರಥ, ಜಿಲ್ಲಾ ಅಧ್ಯಕ್ಷರ ರಥ ಸೇರಿದಂತೆ ಇನ್ನಿತರೆ ವೆಚ್ಚ ಸೇರಿ 30 ಲಕ್ಷ ಸೇರಿದಂತೆ ಒಟ್ಟು 95 ಲಕ್ಷ ರು. ತಾತ್ಕಾಲಿಕ ಅಂದಾಜು ವೆಚ್ಚದ ಮಾಹಿತಿಯನ್ನು ಉಪ ಸಮಿತಿಗಳ ಸಂಚಾಲಕರು ಮಂಡಿಸಿದರು.
ಸಮಿತಿಯ ಕಾರ್ಯಾಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಎಂ.ಪಿ.ಅರುಣ್ ಕುಮಾರ್, ಸದಸ್ಯ ಕಾರ್ಯದರ್ಶಿ ನಂದೀಶ್ ಬಿ.ವಿ. ಸಂಚಾಲಕ ಕಾರಸವಾಡಿ ಮಹದೇವು ಸೇರಿದಂತೆ ವಿವಿಧ ಉಪ ಸಮಿತಿಗಳ ಸಂಚಾಲಕರು ಸಭೆಯಲ್ಲಿ ಹಾಜರಿದ್ದರು.