ಉಡುಪಿ: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿಯು ಸರ್ವತೋಮುಖ ಬೆಳವಣಿಗೆಗೆ ಬಹುದೊಡ್ಡ ಸಾಧನವಾಗಿದೆ. ಕುಳಿತಲ್ಲಿಯೇ ಆಡುವ ಮೊಬೈಲ್ ಆಟ ನಮಗೆ ಮಾರಕವಾದರೆ, ಕಣ್ಣ ಮುಂದಿರುವ ಕ್ರೀಡಾಂಗಣದ ಆಟ ಮನಸಿನ ಏಕಾಗ್ರತೆಯನ್ನು ಹೆಚ್ಚಿಸಿ ಬದುಕಿಗೆ ಪೂರಕವಾಗಲಿದೆ. ಆದ್ದರಿಂದ ವಿದ್ಯಾರ್ಥಿಗಳು ಆಟ, ಪಾಠ ಹಾಗೂ ಊಟ ಇವುಗಳನ್ನು ಸಮತೋಲನದಿಂದ ಕಾಯ್ದುಕೊಂಡು ಅತ್ಯುನ್ನತ ಸಾಧನೆಯನ್ನು ಮಾಡುವ ಮೂಲಕ ದೇಶದ ಅಮೂಲ್ಯ ಆಸ್ತಿಯಾಗುವಂತಾಗಲಿ ಎಂದು ಅದಮಾರು ಮಠದ ಹಿರಿಯ ಗುರುಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.ಅವರು ಇತ್ತೀಚೆಗೆ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಶ್ರೀ ವಿಬುಧೇಶ ಸಭಾಂಗಣದಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಮಹಿಳೆಯರ ಹಾಗೂ ಪುರುಷರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಅತಿಥಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಕ್ರೀಡಾ ವಿಭಾಗಕ್ಕೆ ವಿಶೇಷ ಮಹತ್ವವನ್ನು ನೀಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಇಂದು ಗುರುತಿಸಿಕೊಳ್ಳುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸುವಂತಾಗಲಿ ಎಂದು ಶುಭ ಹಾರೈಸಿದರು.ವೇದಿಕೆ ಮೇಲೆ ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಜೆರಾಲ್ಡ್ ಸಂತೋಷ್ ಡಿಸೋಜ, ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಸಿಎ ಟಿ. ಪ್ರಶಾಂತ್ ಹೊಳ್ಳ, ಕ್ರೀಡಾ ವೀಕ್ಷಕ ಗಣೇಶ ಕೋಟ್ಯಾನ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಮರವಂತೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಚಂದ್ರಕಾಂತ್ ಭಟ್ ವಹಿಸಿದ್ದರು. ಕಾಲೇಜಿನ ಐಕ್ಯುಎಸಿ ಘಟಕ ಸಂಯೋಜಕ ಡಾ. ರಾಘವೇಂದ್ರ ಎಲ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ನಾಗರಾಜ ಆಚಾರ್ಯ ವಂದಿಸಿದರು. ಅವನಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.