ಮಾಧ್ಯಮಗಳು ನೈತಿಕತೆಯೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಎಚ್.ಎಂ.ರೇವಣ್ಣ

KannadaprabhaNewsNetwork |  
Published : Jul 02, 2026, 01:30 AM IST
1) ಮಾಗಡಿ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಪಂಚ ಗ್ಯಾರಂಟಿಗಳ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಹಾಗೂ ಗಣ್ಯರು ಉದ್ಘಾಟಿಸಿದರು.2) ಮಾಗಡಿ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸಸಿಗಳನ್ನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್ ಎನ್ ಅಶೋಕ್ ವಿತರಣೆ ಮಾಡಿದರು. | Kannada Prabha

ಸಾರಾಂಶ

ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಪತ್ರಕರ್ತರ ಮಕ್ಕಳಾದ ತೇಜಸ್ವಿನಿ ಗಿರೀಶ್, ರಂಗ ಕಲಾವಿದರಾದ ಶಿವಣ್ಣ, ರೈತ ಸಂಘದಲ್ಲಿ ಸೇವೆ ಸಲ್ಲಿಸಿದ ಶಿವಲಿಂಗಯ್ಯರನ್ನು ಸಂಘದ ವತಿಯದ ಸನ್ಮಾನಿಸಲಾಯಿತು,

ಕನ್ನಡಪ್ರಭ ವಾರ್ತೆ ಮಾಗಡಿ

ಪ್ರಜಾಪ್ರಭುತ್ವದ ನಾಲ್ಕು ಪ್ರಮುಖ ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮಗಳು ಪ್ರಾಮಾಣಿಕತೆ ಮತ್ತು ನೈತಿಕತೆಯೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಾಜ್ಯ ಪಂಚ ಗ್ಯಾರಂಟಿಗಳ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಹೇಳಿದರು.

ಪಟ್ಟಣದ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರತಿಭಾ ಪುರಸ್ಕಾರ, ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದೊಡ್ಡ ಮಾಧ್ಯಮ ಸಂಸ್ಥೆಗಳು ಕೆಲವೇ ಪ್ರಭಾವಿ ವ್ಯಕ್ತಿಗಳ ಕೈಗೆ ಸೇರುತ್ತಿರುವುದು ಕಳವಳಕಾರಿ ಬೆಳವಣಿಗೆ. ಇದರಿಂದ ಸತ್ಯವನ್ನು ನಿರ್ಭೀತಿಯಾಗಿ ಪ್ರಕಟಿಸುವುದು ಕಷ್ಟವಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ದಿನಗಳಲ್ಲಿ ಲಂಕೇಶ್ ಪತ್ರಿಕೆ ಹಾಗೂ ಹಿರಿಯ ಪತ್ರಕರ್ತ ಕಿಡಿ ಶೇಷಣ್ಣ ಅವರಂತಹವರು ನಿರ್ಭೀತಿಯಿಂದ ಸತ್ಯವನ್ನು ಬರೆದಾಗ ಸರ್ಕಾರ ಹಾಗೂ ಅಧಿಕಾರಿಗಳೇ ಎಚ್ಚರಿಕೆಯಿಂದ ಇರುತ್ತಿದ್ದರು. ಆದರೆ ಇಂದಿನ ಪತ್ರಿಕೋದ್ಯಮದಲ್ಲಿ ಆ ಮೌಲ್ಯಗಳು ಕ್ಷೀಣಿಸುತ್ತಿದ್ದು, ಪತ್ರಿಕಾ ಧರ್ಮ ಹಾಗೂ ನಿಷ್ಪಕ್ಷಪಾತತೆ ಉಳಿಯಬೇಕಾದ ಅಗತ್ಯವಿದೆ ಎಂದು ಎಚ್.ಎಂ.ರೇವಣ್ಣ ತಿಳಿಸಿದರು.

ಪತ್ರಿಕೋದ್ಯಮದಲ್ಲಿ ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ ಹಾಗೂ ಚಿಂತನಾತ್ಮಕ ಲೇಖನಗಳು ಎಂಬ ಮೂರು ಪ್ರಮುಖ ಅಂಶಗಳಿದ್ದು, ಅವು ಜನರಲ್ಲಿ ಸರಿಯಾದ ಅರಿವು ಮೂಡಿಸುವ ರೀತಿಯಲ್ಲಿ ಇರಬೇಕು. ವೈಯಕ್ತಿಕ ಅಥವಾ ರಾಜಕೀಯ ಒಲವುಗಳ ಆಧಾರದ ಮೇಲೆ ವಿಶ್ಲೇಷಣೆ ನಡೆಯಬಾರದು, ರಾಜಕೀಯ ಕ್ಷೇತ್ರದಲ್ಲಿಯೂ ಮೌಲ್ಯಗಳು ಕುಸಿಯುತ್ತಿವೆ. ಹಿಂದೆ ಜನಸೇವೆಯ ಉದ್ದೇಶದಿಂದ ನಾಯಕರು ರಾಜಕೀಯಕ್ಕೆ ಬರುತ್ತಿದ್ದರು. ಆದರೆ ಇಂದು ಅಧಿಕಾರವೇ ಮುಖ್ಯವಾಗುತ್ತಿರುವುದು ವಿಷಾದನೀಯ. ಅಧಿಕಾರ ಇದ್ದರೂ ಇಲ್ಲದಿದ್ದರೂ ಜನಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಾಂಗದಲ್ಲಿ ತ್ವರಿತ ನ್ಯಾಯ ದೊರೆಯುವುದು ಅತ್ಯಂತ ಮುಖ್ಯ. ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲೂ ನೈತಿಕತೆ ಮತ್ತು ಪ್ರಾಮಾಣಿಕತೆ ಉಳಿದಾಗ ಮಾತ್ರ ಉತ್ತಮ ಆಡಳಿತ ಸಾಧ್ಯ ಎಂದು ಹೇಳಿದರು.

ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಕೆಎಎಸ್, ಐಎಎಸ್ ಸೇರಿ ವಿವಿಧ ಆಡಳಿತ ಸೇವೆಗಳಿಗೆ ಸೇರುವ ಮೂಲಕ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು. ತಮ್ಮ ಜೀವನದಲ್ಲಿ ಸತ್ಯ, ಪ್ರಾಮಾಣಿಕತೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್ ಮಾತನಾಡಿ, ಯಾವುದೇ ಸಮುದಾಯದ ಹಿತಾಸಕ್ತಿಯನ್ನು ಕಾಪಾಡಲು ಸಂಘಟನೆಗಳು ಬಲಿಷ್ಠವಾಗಿರಬೇಕು. ಅದೇ ರೀತಿ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಸದಸ್ಯರ ಹಕ್ಕುಗಳು ಹಾಗೂ ಕಲ್ಯಾಣಕ್ಕಾಗಿ ಸದಾ ಕಾರ್ಯನಿರ್ವಹಿಸಬೇಕು. ಪತ್ರಕರ್ತರು ಸಮಾಜದ ಸಮಸ್ಯೆಗಳನ್ನು ನಿರ್ಭಯವಾಗಿ ಜನರ ಮುಂದೆ ತರುವ ಮೂಲಕ ಸರ್ಕಾರವನ್ನು ಸರಿದಾರಿಯಲ್ಲಿ ನಡೆಸುವ ಶಕ್ತಿ ಹೊಂದಿದ್ದಾರೆ. ವಸ್ತುನಿಷ್ಠ ಹಾಗೂ ನಿಷ್ಪಕ್ಷಪಾತ ಪತ್ರಿಕೋದ್ಯಮವೇ ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಮಾಧ್ಯಮವು ಸಂವಿಧಾನದ ಮೌಲ್ಯಗಳು ಮತ್ತು ನಾಗರಿಕರ ಹಕ್ಕುಗಳನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಇತಿಹಾಸದಲ್ಲಿಯೂ ಮಾಧ್ಯಮವು ಅನೇಕ ಹಗರಣಗಳನ್ನು ಬಯಲಿಗೆಳೆದು ಜನರಲ್ಲಿ ಜಾಗೃತಿ ಮೂಡಿಸಿದ್ದು, ಆಡಳಿತ ವ್ಯವಸ್ಥೆ ಜವಾಬ್ದಾರಿಯುತವಾಗಿರಲು ಕಾರಣವಾಗಿದೆ. ಬ್ರಿಟಿಷರ ಆಡಳಿತದಿಂದ ಹಿಡಿದು ತುರ್ತು ಪರಿಸ್ಥಿತಿಯಂತಹ ಸಂದರ್ಭಗಳಲ್ಲಿಯೂ ಪತ್ರಿಕೋದ್ಯಮವು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವ ಕೆಲಸ ಮಾಡಿದೆ ಎಂದ ಅವರು, ಸಮಾಜದಲ್ಲಿ ಪರಿಸರ, ಸಂಸ್ಕೃತಿ, ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಪತ್ರಕರ್ತರ ಸಂಘ ಆಯೋಜಿಸಿರುವುದು ಶ್ಲಾಘನೀಯ. ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ಎಚ್.ಎನ್.ಅಶೋಕ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಪತ್ರಕರ್ತರ ಮಕ್ಕಳಾದ ತೇಜಸ್ವಿನಿ ಗಿರೀಶ್, ರಂಗ ಕಲಾವಿದರಾದ ಶಿವಣ್ಣ, ರೈತ ಸಂಘದಲ್ಲಿ ಸೇವೆ ಸಲ್ಲಿಸಿದ ಶಿವಲಿಂಗಯ್ಯರನ್ನು ಸಂಘದ ವತಿಯದ ಸನ್ಮಾನಿಸಲಾಯಿತು,

ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ್, ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಮ್, ಗ್ರಾಪಂ ಮಾಜಿ ಅಧ್ಯಕ್ಷೆ ತೇಜಸ್ವಿನಿ ರಮೇಶ್ ಮಾತನಾಡಿದರು.

ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.

ತಹಸೀಲ್ದಾರ್ ರಂಜಿತ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಎಂ.ಕೆ.ಧನಂಜಯ್ಯ, ಜುಟ್ಟನಹಳ್ಳಿ ವಿಎಸ್‌ಎಸ್‌ಎನ್ ಅಧ್ಯಕ್ಷ ಜೆ.ಪಿ.ಚಂದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿಪಾಳ್ಯ ಕೆ.ಕೃಷ್ಣಮೂರ್ತಿ, ಜೆಡಿಎಸ್ ಹಿರಿಯ ಮುಖಂಡರಾದ ತಮ್ಮಣ್ಣಗೌಡ, ಎನ್.ನಾಗರಾಜ್, ಆರ್‌ಟಿಒ ನವೀನ್, ಶಬಾಜ್‌ಖಾನ್, ರೈತ ಸಂಘ ರವಿಕುಮಾರ್, ಬಲರಾಮ್, ಗಂಗರಾಜು, ಜಯಮ್ಮ ಸಂಘದ ಅಧ್ಯಕ್ಷ ಎಚ್.ಆರ್.ಮಾದೇಶ್ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೌಗೋಳಿಕ ಸಂಪತ್ತು ಸದ್ಬಳಕೆ ಆದಾಗ ಮಾತ್ರವೇ ಅಭಿವೃದ್ಧಿ
ಕೆಪಿಟಿಸಿಎಲ್ ಖಾಸಗೀಕರಣ ಯತ್ನ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ರೈತ ಸಂಘ