ಮಕ್ಕಳು ವಿದ್ಯಾವಂತರಾದರೆ ಉತ್ತಮ ಸಮಾಜ ನಿರ್ಮಾಣ: ಶಾಸಕ ಗವಿಯಪ್ಪ

KannadaprabhaNewsNetwork |  
Published : Aug 30, 2024, 01:04 AM IST
29ಎಚ್‌ ಪಿಟಿ1- ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಅವರು ಚಾಲನೆ ನೀಡಿದರು. ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಮತ್ತಿತರರಿದ್ದರು. | Kannada Prabha

ಸಾರಾಂಶ

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಹಿಂದುಳಿದ ವರ್ಗಗಳ ಹಾಗೂ ದಲಿತರ ಏಳಿಗೆಗೆ ಶ್ರಮಿಸಿದರು.

ಹೊಸಪೇಟೆ: ಯಾವುದೇ ಸಮಾಜ ಪ್ರಗತಿಯಾಗಬೇಕಾದರೆ ಆ ಸಮಾಜದ ಮಕ್ಕಳು ವಿದ್ಯಾವಂತರಾಗಬೇಕು. ಈ ನಿಟ್ಟಿನಲ್ಲಿ ಯೋಚಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡುವುದು ಪಾಲಕರಾದ ನಮ್ಮ ಜವಾಬ್ದಾರಿಯಾಗಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊಸಪೇಟೆ ನಗರಸಭೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್‌ನಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಹಿಂದುಳಿದ ವರ್ಗಗಳ ಹಾಗೂ ದಲಿತರ ಏಳಿಗೆಗೆ ಶ್ರಮಿಸಿದರು. ಬಸವಣ್ಣನವರಂತೆ ಸಮಾಜ ಬದಲಾವಣೆಯ ಆಶಯ ಹೊಂದಿದ್ದರು. ಜನಮುಖಿ ಸಿದ್ಧಾಂತಕ್ಕೆ ಬದ್ಧರಾಗಿ ಅವರು ಕೆಲಸ ಮಾಡಿದರು ಎಂದು ತಿಳಿಸಿದರು.

ನಮ್ಮ ಸಮಾಜದಲ್ಲಿ ಕಡಿಮೆ ಜನಸಂಖ್ಯೆಯ ಸಮುದಾಯಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗಾಗಿ ಸರ್ಕಾರವು ಹಲವಾರು ನಿಗಮಗಳನ್ನು ರಚಿಸಿ ಅನುದಾನ ಮೀಸಲಿರಿಸಿ ಅಂತಹ ಸಮುದಾಯಗಳ ಏಳ್ಗೆಗೆ ಶ್ರಮಿಸಲಾಗುತ್ತಿದೆ. ಆಯಾ ನಿಗಮಗಳಲ್ಲಿ ಇರುವ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ವಿವಿಧ ಯೋಜನೆಗಳ ಸದುಪಯೋಗ ಪಡೆದು ಸಣ್ಣ ಸಣ್ಣ ಸಮುದಾಯದ ಜನರು ಮುಂದೆ ಬರಬೇಕು ಎಂದರು.

ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಮಾತನಾಡಿ, ಸರ್ಕಾರವು ಹಲವಾರು ಜಯಂತಿಗಳನ್ನು ಆಚರಣೆ ಮಾಡುತ್ತಿದೆ. ಈ ಮೂಲಕ ಮಹಾತ್ಮರ ಆಶಯಗಳು, ಸಿದ್ಧಾಂತ ಹಾಗೂ ಅವರ ಸಮಾಜಮುಖಿ ಕಾರ್ಯಗಳನ್ನು ಜನತೆಗೆ ತಿಳಿಸುವ ಕಾರ್ಯವಾಗುತ್ತಿದೆ. ಬ್ರಹ್ಮಶ್ರೀ ನಾರಾಯಣ ಗುರು ಅವರ ಕಾರ್ಯಗಳು ಸದಾಕಾಲ ಸ್ಮರಣೀಯವಾಗಿವೆ ಎಂದರು.

ಪ್ರತಿಭಾ ಪುಸ್ಕಾರ ಪ್ರದಾನ:

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಈಡಿಗ ಸಮಾಜದ ವಿದ್ಯಾರ್ಥಿಗಳಾದ ಹರಪನಹಳ್ಳಿ ತಾಲೂಕಿನ ಇ.ವಿ.ಅಜಯ್‌ಕುಮಾರ, ಇ.ವಿ.ಐಶ್ವರ್ಯ, ಇ.ಟಿ.ಅರವಿಂದ, ಹೂವಿನಹಡಗಲಿ ತಾಲೂಕಿನ ಅನುಷ್ ಈಡಿಗರ, ಈಡಿಗರ ಅಭಿಷೇಕ, ಇ.ಸಂಜನ, ಕೂಡ್ಲಿಗಿ ತಾಲೂಕಿನ ಆಶಾ, ಇ.ಜಿ.ಸುಪ್ರಿಯಾ, ಇ.ಪುಷ್ಪವತಿ, ಹೊಸಪೇಟೆ ತಾಲೂಕಿನ ಇ.ಹರ್ಷಿತ, ಇ.ಹರಿಪ್ರಸಾದ್ ಮತ್ತು ಇ.ಆಯುಶ್ ಅವರನ್ನು ಸನ್ಮಾನಿಸಿ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.

ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಈಡಿಗ ಸಮಾಜದ ಅಧ್ಯಕ್ಷ ಚಂದ್ರಣ್ಣ ಮತ್ತಿತರರಿದ್ದರು.

PREV

Recommended Stories

ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ