ಕಠಿಣ ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ

KannadaprabhaNewsNetwork | Published : Jan 30, 2024 2:04 AM

ಸಾರಾಂಶ

ಸೂಲಿಬೆಲೆ: ಯಾವುದೇ ವ್ಯಕ್ತಿಯಾಗಲಿ ವಿದ್ಯಾರ್ಥಿಯಾಗಲಿ ಕಠಿಣ ಪರಿಶ್ರಮದಿಂದ ಮಾತ್ರ ಉಜ್ವಲ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.

ಸೂಲಿಬೆಲೆ: ಯಾವುದೇ ವ್ಯಕ್ತಿಯಾಗಲಿ ವಿದ್ಯಾರ್ಥಿಯಾಗಲಿ ಕಠಿಣ ಪರಿಶ್ರಮದಿಂದ ಮಾತ್ರ ಉಜ್ವಲ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಾಡಪ್ರಭು ಕೆಂಪೇಗೌಡ ಯುವಕರ ಸಂಘ, ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳ ಸಂಯುಕ್ತ ಅಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ಸಂಪರ್ಕಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ವಕೀಲ ಬಿ.ಎಂ.ಪ್ರಭಾಕರ್ ಮಾತನಾಡಿ, ಅಪ್ರಾಪ್ತ ವಯಸ್ಕರ ಮದುವೆ ಮಾಡಿದರೆ ಕಲ್ಯಾಣ ಮಂಟಪದ ಮಾಲೀಕರು, ಪುರೋಹಿತರು, ಪ್ರೋತ್ಸಾಹಿಸಿದವರು, ಮಧ್ಯವರ್ತಿಗಳು ಸೇರಿದಂತೆ ಎಲ್ಲರಿಗೂ ೧ರಿಂದ ೨ ವರ್ಷ ಶಿಕ್ಷೆ ೧ ಲಕ್ಷ ದಂಡ ವಿಧಿಸಲಾಗುತ್ತದೆ ಎಂದರು.

ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆ ಉಪನ್ಯಾಸಕ ಮುನಿಕೃಷ್ಣ ಮಾತನಾಡಿ, ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳಾ ಸಬಲೀಕರಣಕ್ಕೆ ಉಚಿತ ತರಬೇತಿ ಹಾಗೂ ಊಟ, ವಸತಿ ಕಲ್ಪಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು ಸ್ವಾವಲಂಬಿಗಳಾಗಿ ಜೀವಿಸಬೇಕು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಚೇತನ್ ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿರಬೇಕು. ಯುವಕರು ಹೆಚ್ಚಾಗಿ ಧೂಮಪಾನ ಹಾಗೂ ಮದ್ಯಪಾನದಂತಹ ವ್ಯಸನಗಳಿಗೆ ದಾಸರಾಗುತ್ತಿರುವುದು ಕಳವಳಕಾರಿ ವಿಚಾರ ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷ ಜನಾರ್ಧನರೆಡ್ಡಿ, ಉಪಾಧ್ಯಕ್ಷೆ ಷಾಜಿಯಾಖಾನಂ ಜಿಯಾವುಲ್ಲಾ, ಪ್ರಾಚಾರ್ಯ ಡಾ.ಕೆ.ಮೋಹನ್‌ಕುಮಾರ್, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಸಮಿತಿಯ ಕಾಳಮ್ಮ, ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ಅಧ್ಯಕ್ಷ ಬಿ.ಎಂ.ಸಾಗರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ದೇವಿದಾಸ್ ಸುಬ್ರಾಯ್ ಶೇಠ್, ಸೈಯದ್ ಮಹಬೂಬ್, ಉಪನ್ಯಾಸಕರಾದ ಕೃಷ್ಣಪ್ಪ, ಕಲ್ಪನಾ, ಸಂಗೀತಾ, ಶಶಿಕಲಾ, ಚನ್ನಕೃಷ್ಣ, ಗಿರೀಶ್, ಪತ್ರಕರ್ತ ಅತ್ತಿಬೆಲೆ ಮಂಜು, ಪ್ರಶಾಂತ್ ಇತರರಿದ್ದರು.

Share this article