ಬೆಂಗಳೂರು- ಮೈಸೂರ್ ಎಕ್ಸ್ ಪ್ರೆಸ್ ವೇ ಮದ್ದೂರಮ್ಮ ದೇವಸ್ಥಾನದ ಬಳಿ ಮೇಲ್ಸೇತುವೆ ಮೇಲೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಮದ್ದೂರು: ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ದಂಪತಿ ಹಾಗೂ ಇಬ್ಬರು ಮಕ್ಕಳು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಶುಕ್ರವಾರ ಮಧ್ಯಾಹ್ನ ಜರುಗಿದೆ. ಘಟನೆಯಲ್ಲಿ ಬೆಂಗಳೂರು ಮೂಲದ ಸೆಸ್ಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮನೋಹರ್, ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೆಎ- 09, ಎಂಎ 9898 ಫೋರ್ಡ್ ಕಾರ್ ನಲ್ಲಿ ಮನೋಹರ್ ಕುಟುಂಬ ಸಮೇತ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಬೆಂಗಳೂರು- ಮೈಸೂರ್ ಎಕ್ಸ್ ಪ್ರೆಸ್ ವೇ ಮದ್ದೂರಮ್ಮ ದೇವಸ್ಥಾನದ ಬಳಿ ಮೇಲ್ಸೇತುವೆ ಮೇಲೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಮನೋಹರ್ ಸಾರ್ವಜನಿಕರ ನೆರವಿನಿಂದ ಕಾರಿನಲ್ಲಿದ್ದ ಕುಟುಂಬದವರನ್ನು ರಕ್ಷಣೆ ಮಾಡಿಕೊಂಡಿದ್ದಾರೆ. ಎಕ್ಸ್ ಪ್ರೆಸ್ ವೇನಲ್ಲಿ ಹೊತ್ತಿ ಉರಿಯುತ್ತಿದ್ದ ಕಾರನ್ನು ಕಂಡ ಇತರೆ ವಾಹನ ಸವಾರರು ಆತಂಕಗೊಂಡು ಅಗ್ನಿಶಾಮಕದಳದವರಿಗೆ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಪ್ರಭಾರ ಅಗ್ನಿಶಾಮಕ ಅಧಿಕಾರಿ ಶಿವಾನಂದಯ್ಯ ಹಾಗೂ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಬಿಸಿಲಿನ ಝಳಕ್ಕೆ ಕಾರು ಸಂಪೂರ್ಣವಾಗಿ ಭಸ್ಮವಾಗಿದೆ. ಪಟ್ಟಣದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.