ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗ್ಗೆಯಿಂದ ಶುರುವಾದ ಗಣೇಶೋತ್ಸವ ಸಂಭ್ರಮ ಸಂಜೆಯವರೆಗೂ ಮನೆ ಮಾಡಿತ್ತು. ಅದ್ಧೂರಿ ಮೆರವಣಿಗೆ ಮಧ್ಯೆ ಗಣನಾಯಕನನ್ನು ಸ್ವಾಗತಿಸಿದ ಜನತೆ ಗಣಪತಿ ಬಪ್ಪಾ ಮೊರಯಾ.. ಮಂಗಲ ಮೂರ್ತಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಡಿಜೆ, ಸೌಂಡ್ ಸಿಸ್ಚ್ಂ ಅಬ್ಬರದ ಮಧ್ಯೆ ಯುವ ಸಮುದಾಯ ಕುಣಿದು ಕುಪ್ಪಳಿಸುತ್ತ ಸಂಭ್ರಮದಿಂದ ಗಣಪನ ಮೆರವಣಿಗೆ ಮೂಲಕ ಕೊಂಡೊಯ್ದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬೆಳ್ಳಂಬೆಳಗ್ಗೆ ಕುಟುಂಬ ಸಮೇತರಾಗಿ ಬಂದ ಸಾರ್ವಜನಿಕರು ಗಣೇಶ ಮೂರ್ತಿಗಳನ್ನು ಪೂಜಿಸಿ ಮನೆಗೆ ಒಯ್ದರು. ಅದರಲ್ಲೂ ಗಣೇಶೋತ್ಸವ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳು ಅಕ್ಷರಶಃ ಜಾತ್ರೆಯಂತೆ ಗೋಚರಿಸಿದವು. ಎಲ್ಲಿ ನೋಡಿದ್ದಲ್ಲಿ ಗಣೇಶನ ನಾಮಜಪ ಕಂಡುಬಂತು.ರವಿವಾರ ಪೇಟೆಯಲ್ಲಿ ಬಾಳೆ ಸಸಿ ಸೇರಿದಂತೆ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಮಾರಾಟ ಜೋರಾಗಿತ್ತು. ಹೂವು ಹಣ್ಣು, ಅಲಂಕಾರಿಕ ವಸ್ತುಗಳು, ಗಣೇಶನ ಮೂರ್ತಿಗಳು, ತರಕಾರಿ, ಸಿಹಿತಿನಿಸುಗಳನ್ನು ಕೊಂಡೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಬೆಳಗಾವಿ ನಗರದಲ್ಲಿ ಗಣೇಶೋತ್ಸವವನ್ನು ಅತೀ ಅದ್ಧೂರಿಯಿಂದ ಆಚರಿಸಲಾಗುತ್ತದೆ. ನಗರದಲ್ಲಿ 270ಕ್ಕೂ ಅಧಿಕ ಸಾರ್ವಜನಿಕ ಮಂಟಪಗಳಲ್ಲಿ ಬೃಹತ್ ಗಾತ್ರದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಗಣೇಶ ನಾನಾ ರೂಪದಲ್ಲಿ ವಿರಾಜಮಾನನಾಗಿದ್ದಾನೆ. ಸಾರ್ವಜನಿಕ ಗಣೇಶ ಮೂರ್ತಿಗಳ ದರ್ಶನಕ್ಕೆ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಸಾರ್ವಜನಿಕ ಗಣೇಶ ಮಂಟಪಗಳು, ಗಣಪತಿಗಳ ಪ್ರತಿಷ್ಠಾಪನೆಯೂ ಆಕರ್ಷಣೀಯವಾಗಿವೆ.