ರಾಮನಗರ: ಇಂದಿನ ಪ್ರಶಿಕ್ಷಣಾರ್ಥಿಗಳು ಭಾವಿ ಶಿಕ್ಷಕರು. ಇಂತಹ ಬಹುದೊಡ್ಡ ಪಾತ್ರ ನಿರ್ವಹಿಸಲು ಅಣಿಯಾಗುವ ಪ್ರಶಿಕ್ಷಣಾರ್ಥಿಗಳು ಜವಾಬ್ದಾರಿಯುತವಾಗಿ ಮುನ್ನಡೆಯಬೇಕು ಎಂದು ಭಾಷ್ ಇಂಡಿಯಾ ಫೌಂಡೇಶನ್ ಕ್ಷೇತ್ರ ನಿರ್ದೇಶಕ ಡಾ.ಎಂ.ಪುಂಡಲೀಕ ಕಾಮತ್ ಹೇಳಿದರು.
ಸಮರ್ಥ ಶಿಕ್ಷಕ ಉತ್ತಮ ರಾಷ್ಟ್ರ ನಿರ್ಮಾಪಕ ಎಂಬುದು ಅತಿಶಯೋಕ್ತಿಯ ಮಾತಲ್ಲ. ಒಂದು ಸದೃಢ ರಾಷ್ಟ್ರವನ್ನು ನಿರ್ಮಾಣ ಮಾಡುವುದಕ್ಕೆ ಶಿಕ್ಷಕ ಸಮುದಾಯದಿಂದ ಮಾತ್ರವೇ ಸಾಧ್ಯ. ಅದರಲ್ಲಿಯೂ ಪ್ರಾಥಮಿಕ, ಪ್ರೌಢಶಾಲಾ ಹಂತದ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಬೀರುವ ಪ್ರಭಾವವನ್ನು ಮತ್ತಾರೂ ಬೀರಲು ಸಾಧ್ಯವಿಲ್ಲ. ತಮ್ಮ ಭವಿಷ್ಯತ್ತಿಗೆ ಬಾಲ್ಯದಲ್ಲೇ ಬುನಾದಿ ಹಾಕಿದ ಶಿಕ್ಷಕರನ್ನು-ಉಪನ್ಯಾಸಕರು, ಪ್ರಾಧ್ಯಾಪಕರೂ ನೆನಪಿಸಿಕೊಳ್ಳುತ್ತಾರೆ. ಆದ್ದರಿಂದ ಶಿಕ್ಷಕರು ಸದಾ ಅಭಿನಂದನಾರ್ಹರಾಗಿರುತ್ತಾರೆ ಎಂದರು.
ಕಾವೇರಿ ಶಿಕ್ಷಣ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ದೇವರಾಜಪ್ಪ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ತಮ್ಮ ಜೀವನದಲ್ಲಿ ಪರಿಮಾಣಾತ್ಮಕ ನಿರ್ಧಾರಗಳಿಂದ ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಸಾದ್ಯವಾಗುತ್ತದೆ. ತಮ್ಮ ವ್ಯಕ್ತಿತ್ವವನ್ನು ಆದರ್ಶಮಯವಾಗಿಟ್ಟಿಕೊಂಡಿರಬೇಕು. ಶಿಸ್ತು, ಪ್ರಾಮಾಣಿಕತೆ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.ಶಿಕ್ಷಕರಾಗುವವರು ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ವರ್ಗದಲ್ಲಿ ಚಟುವಟಿಕೆಗಳನ್ನು ರೂಪಿಸಿದರೆ, ಕಲಿಕೆ ಪರಿಣಾಮಕಾರಿಯಾಗುತ್ತದೆ. ಪಠ್ಯ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ಕೆರಳಿಸಬೇಕು. ಬೋಧನೆ-ಕಲಿಕೆ ಪ್ರಕ್ರಿಯೆ ಆಸಕ್ತಿದಾಯಕವಾಗಿರುವಂತೆ ನೋಡಿಕೊಳ್ಳಬೇಕು. ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಂಡಾಗ ಪರಿಪೂರ್ಣ ಶಿಕ್ಷಕನಾಗಲು ಸಾದ್ಯ. ಅಂತಹ ಪ್ರವೃತ್ತಿಯನ್ನು ಭಾವಿ ಶಿಕ್ಷಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶಿಬಿರದ ಮುಖ್ಯಸ್ಥೆ ಬಿಂದುಕುಮಾರ್, ಶಿಬಿರದ ಸಂಯೋಜಕ ಚಂದ್ರಮೌಳೇಶ್ ಇತರರಿದ್ದರು. 31ಕೆಆರ್ ಎಂಎನ್ 9.ಜೆಪಿಜಿ
ರಾಮನಗರದ ಜಾನಪದ ಲೋಕದಲ್ಲಿ ಬೆಂಗಳೂರಿನ ಕಾವೇರಿ ಬಿ.ಇಡಿ ಕಾಲೇಜು ಆಯೋಜಿಸಿದ್ದ ಸಮುದಾಯ ಜೀವನ ಶಿಬಿರವನ್ನು ಪ್ರಶಿಕ್ಷಣಾರ್ಥಿಗಳು ಉದ್ಘಾಟಿಸಿದರು.