ಕನ್ನಡಪ್ರಭ ವಾರ್ತೆ, ಚಿತ್ರದುರ್ಗಜೂನ್.27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಜುಲೈ 2ರಂದು ಡಾ.ಫ.ಗು ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.
ಜೂ. 27ರಂದು ಬೆಳಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರ ಅಥವಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ನಡೆಸಲು ಚರ್ಚಿಸಲಾಯಿತು. ಕಾರ್ಯಕ್ರಮ ನಡೆಯುವ ಸ್ಥಳದ ಕುರಿತು ಹಾಗೂ ಕೆಂಪೇಗೌಡರ ಕುರಿತು ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಒಂದೆರೆಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಸಮಾಜದ ಮುಖಂಡರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಸರ್ಕಾರದ ಶಿಷ್ಟಾಚಾರದ ಅನುಸಾರ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು. ಸಂಗೀತ ಕಾರ್ಯಕ್ರಮ ಆಯೋಜನೆ ಸೇರಿದಂತೆ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಜುಲೈ 2ರಂದು ಬೆಳಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಫ.ಗು.ಹಳಕಟ್ಟಿಯರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಿಸಲು ತೀರ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಜಯಂತಿ ಅಂಗವಾಗಿ ವಚನ ಸಾಹಿತ್ಯ ಕುರಿತು ಉಪನ್ಯಾಸ ಕಾರ್ಯಕ್ರಮ, ಸಂಗೀತ ಕಾರ್ಯಕ್ರಮ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಜಗನ್ನಾಥ್, ಉಪಾಧ್ಯಕ್ಷ ಮಂಜುಕುಮಾರ್, ನಿರ್ದೇಶಕರಾದ ರಂಗಧಾಮಯ್ಯ ಆರ್.ಪರಮೇಶ್ವರ, ಆರ್.ಚಿದಾನಂದಪ್ಪ, ನರೇಂದ್ರ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.