ಉಡುಪಿ : ಸಂವಿಧಾನದ ಮೌಲ್ಯಗಳ ಬಗ್ಗೆ ಯುವಜನತೆಯಲ್ಲಿ ಸೂಕ್ತ ಅರಿವಿದ್ದಾಗ ಮಾತ್ರ ಶಿಸ್ತುಬದ್ಧ ಜೀವನ ಸಾಧ್ಯ ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಿರುವ ಕೆಲವೇ ರಾಷ್ಟ್ರಗಳಲ್ಲಿ ಭಾರತವೂ ಒಂದು. ಸಂಸತ್ತು ಈ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ಯುವ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ತಿಳಿದುಕೊಂಡು ಅದರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಲು ಯುವ ಸಂಸತ್ತು ಕಾರ್ಯಕ್ರಮ ಒಂದು ಉತ್ತಮ ವೇದಿಕೆಯಾಗಿದೆ. ಸಂಸತ್ತಿಗೆ ತನ್ನದೇ ಆದ ಪಾವಿತ್ರ್ಯತೆ, ಪ್ರಾಮುಖ್ಯತೆ ಇದ್ದು, ಅದನ್ನರಿತು, ಅದರ ಮೌಲ್ಯಗಳನ್ನು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಂಡು, ಉತ್ತಮ ನಾಗರಿಕರಾಗಿ ದೇಶ ಹಾಗೂ ಸಮಾಜವನ್ನು ಮುನ್ನಡೆಸಬೇಕು ಎಂದವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. 1.4 ಕೋಟಿ ಗೂ ಹೆಚ್ಚು ಜನರಿದ್ದರೂ ಸಹ ನೆಮ್ಮದಿಯ ಜೀವನ ನಡೆಸಲು ಸಂವಿಧಾನದ ಮೌಲ್ಯಗಳೇ ಕಾರಣ. ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಸಂಪತ್ತು ಹೊಂದಿರುವ ನಮ್ಮ ದೇಶದ ಯುವಜನತೆಯಲ್ಲಿ ಸಂವಿಧಾನದ ಬಗ್ಗೆ ಹೆಚ್ಚಿನ ತಿಳುವಳಿಕೆ ಪಡೆದು, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶ ಕಟ್ಟುವ ಕೆಲಸದಲ್ಲಿ ತೊಡಗಬೇಕು ಎಂದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸಂವಿಧಾನದ ಪೀಠಿಕೆ ಬೋಧಿಸಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರವೀಣ ಮೊಗವೀರ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಯುವ ಸಂಸತ್ತು ಕಾರ್ಯಕ್ರಮದ ಪೋಸ್ಟರನ್ನು ಅನಾವರಣಗೊಳಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.