ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ, ಸೈಕಲ್ ಜಾಥಾಗೆ ಚಾಲನೆ ನೀಡಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಂವಿಧಾನ ಪೀಠಿಕೆ ಪ್ರತಿಜ್ಞೆ ಬೋಧಿಸಿದರು.
ಉಡುಪಿ: ಸಂವಿಧಾನದ ಬಗ್ಗೆ ಅರಿವು ಇದ್ದಾಗ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ, ಆದ್ದರಿಂದ ಜನರಲ್ಲಿ ಸಂವಿಧಾನಬದ್ಧ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಹೇಳಿದ್ದಾರೆ.ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ, ಸೈಕಲ್ ಜಾಥಾಗೆ ಚಾಲನೆ ನೀಡಿ, ಸಂವಿಧಾನ ಪೀಠಿಕೆ ಪ್ರತಿಜ್ಞೆ ಬೋಧಿಸಿ ಅವರು ಮಾತನಾಡಿದರು.ನನ್ನ ಮತ ನನ್ನ ಹಕ್ಕು, ಗಾಂಧೀ ಭಾರತ, ಸಂವಿಧಾನ ಪೀಠಿಕೆ ಬಗ್ಗೆ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಹಮ್ಮಿಕೊಂಡು ಬೈಕ್ ರ್ಯಾಲಿ ಮತ್ತು ಸೈಕಲ್ ರ್ಯಾಲಿಗಳ ಮೂಲಕ ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜನರು ಸಂವಿಧಾನದ ಬಗ್ಗೆ ಅರಿತುಕೊಳ್ಳಬೇಕು. ನಮ್ಮದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಇದನ್ನು ಸದೃಢಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಸೈಕಲ್ ರ್ಯಾಲಿಯು ಜಿಲ್ಲಾ ಕ್ರೀಡಾಂಗಣದಿಂದ ಹೊರಟು ಸಿಟಿ ಬಸ್ಸ್ಟ್ಯಾಂಡ್, ಕಡಿಯಾಳಿ, ಎಂ.ಜಿ.ಎಂ ಕಾಲೇಜು ಮಾರ್ಗವಾಗಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ತಲುಪಿ ಮರಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾಪ್ತಿಗೊಂಡಿತು.ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್. ಎಸ್. ಕದ್ರೋಳಿ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಸೈಕಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಡಾ ಗುರುರಾಜ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ ರೋಷನ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.