ಕನ್ನಡಪ್ರಭ ವಾರ್ತೆ ಆಲಮಟ್ಟಿ
ಸೋಮವಾರ ಬೆಳಗ್ಗೆಯಿಂದಲೇ ಅವಳಿ ಜಿಲ್ಲೆಯ ವಿವಿಧೆಡೆಯಿಂದ ನೂರಾರು ದೇವ, ದೇವತೆಗಳ ಪಲ್ಲಕ್ಕಿಗಳು ಆಲಮಟ್ಟಿಯತ್ತ ಬಂದಿದ್ದವು. ಕೆಲವರು ಕಾಲ್ನಡಿಗೆ ಮೂಲಕ ಪಲ್ಲಕ್ಕಿಯನ್ನು ಹೊತ್ತು ತಂದರೆ, ಇನ್ನೂ ಕೆಲವರು ಟ್ರ್ಯಾಕ್ಟರ್, ಎತ್ತಿನ ಬಂಡಿ, ಇತರ ವಾಹನಗಳಲ್ಲಿ ತರುತ್ತಿರುವುದು ಕಂಡು ಬಂತು.
ಆಲಮಟ್ಟಿಯ ಕೃಷ್ಣಾ ತೀರದಲ್ಲಿ ನೂರಾರು ಪಲ್ಲಕ್ಕಿಗಳ ಸಮಾಗಮವಾಗಿತ್ತು. ನದಿಯ ಎರಡೂ ದಂಡೆಯ ಮೇಲೆ, ಛತ್ರಿ, ಚಾಮರ, ಪಲ್ಲಕ್ಕಿಗಳ ಸಂಭ್ರಮ, ಕಳಸದ ಮೆರವಣಿಗೆ, ಡೊಳ್ಳು ಕುಣಿತ, ಶಂಖನಾದ, ಹಲಗೆ ವಾದನ ಮಾರ್ದನಿಸಿ, ಭಕ್ತಿಯ ಭಾವುಕತೆಯಲ್ಲಿ ತೇಲಿಸಿತುವಿವಿಧ ಕಡೆಗಳಿಂದ ಬಂದ ಭಕ್ತರು ನದಿಯಲ್ಲಿ ಮಿಂದು, ಬಳಿಕ ಗಂಗಾ ಪೂಜೆ ನೆರವೇರಿಸಿದರು. ಮಡಿಯಲ್ಲಿಯೇ ಪಲ್ಲಕ್ಕಿ, ದೇವರ ಪರಿಕರಗಳು, ಉತ್ಸವ ಮೂರ್ತಿ, ಮುಖವಾಡಗಳು, ಆಭರಣಗಳನ್ನು ಶುಚಿಗೊಳಿಸಿ, ಬಳಿಕ ಅಲಂಕರಿಸಿ ಪೂಜಿಸಿದರು. ಕೆಲವರು ಕಂಬಳಿ ಹಾಸಿ ಪಲ್ಲಕ್ಕಿಯನ್ನಿಟ್ಟು ಪೂಜೆ ಸಲ್ಲಿಸಿದರು.
ನದಿ ತೀರದಲ್ಲಿಯೇ ಕಲ್ಲುಗಳನ್ನಿಟ್ಟು ಒಲೆ ಹೂಡಿ ಹೋಳಿಗೆ ಸೇರಿದಂತೆ ಸಿಹಿ ಪದಾರ್ಥ ತಯಾರಿಸಿ ನೇವೇದ್ಯ ಅರ್ಪಿಸಿ, ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಪ್ರಖರ ಬಿಸಿಲಿನ ಮಧ್ಯೆಯೂ ಪಲ್ಲಕ್ಕಿಗಳ ದರ್ಶನ ರಾರಾಜಿಸುತ್ತಿತ್ತು. ನಂತರ ಬಹುತೇಕ ಪಲ್ಲಕ್ಕಿಗಳನ್ನು ಕೃಷ್ಣಾ ತೀರದ ಚಂದ್ರಮ್ಮಾ ದೇವಸ್ಥಾನದ ಆವರಣದೊಳಗೆ ಇಟ್ಟು ಪೂಜೆ ಸಲ್ಲಿಸಲಾಯಿತು.