ಸೋಮರಡ್ಡಿ ಅಳವಂಡಿ
ಕಿತ್ತು ತಿನ್ನುವ ಬಡತನ, ಕೂಲಿ ಕೆಲಸ ಮಾಡಿ ಜೀವನದ ಬಂಡಿ ಸಾಗಿಸುವ ಜೊತೆಗೆ, ಪ್ರತಿಭಾವಂತ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮಹದಾಸೆ ಹೊತ್ತಿದ್ದ ಮಹಾತಾಯಿಯ ಪುತ್ರಿಯೋರ್ವಳು ಧಾರವಾಡದ ಕೃಷಿ ವಿವಿಯಲ್ಲಿ ಎಂಎಸ್ಸಿ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ರ್ಯಾಂಕ್ ಗಳಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ನಿವಾಸಿ ಹುಲಿಗೆಮ್ಮ ಅವರ ಪುತ್ರಿ ಸಿದ್ದಮ್ಮ ಚೋಟಪ್ಪನವರ ಈ ಸಾಧನೆ ಮಾಡಿದ್ದಾರೆ. ಶೇ.94.8 ಅಂಕದೊಂದಿಗೆ ವಿವಿಗೆ ಪ್ರಥಮ ಸ್ಥಾನ ಗಳಿಸಿ ಬಂಗಾರದ ಪದಕ ಪಡೆದಿದ್ದಾರೆ.ಧಾರವಾಡ ಕೃಷಿ ವಿವಿಯಲ್ಲಿ ಗುರುವಾರ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು ಬಂಗಾರದ ಪದಕ ನೀಡಿ ಪುರಸ್ಕರಿಸಿದ್ದಾರೆ.ಕಿತ್ತು ತಿನ್ನುವ ಬಡತನ:
ನಾಲ್ಕನೇ ಮಗಳು ಸಿದ್ದಮ್ಮ ಓದಿನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕೊಪ್ಪಳ ನಗರದ ಶ್ರೀ ಶಾರದಾ ಶಾಲೆಯಲ್ಲಿ ಪೂರೈಸಿದ ಸಿದ್ದಮ್ಮ, ಗಂಗಾವತಿಯ ವಡ್ಡರಟ್ಟಿ ಗ್ರಾಮದ ಸರ್ಕಾರಿ ಕಿತ್ತೂರರಾಣಿ ಚೆನ್ನಮ್ಮ ಶಾಲೆಯಲ್ಲಿ ಹತ್ತನೇ ತರಗತಿವರೆಗೂ ಓದುತ್ತಾಳೆ. 10ನೇ ತರಗತಿಯಲ್ಲಿ ಶೇಕಡಾ 90ಕ್ಕೂ ಅಧಿಕ ಅಂಕ ಪಡೆದು, ಮಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿಗೆ ಉಚಿತ ಪ್ರವೇಶ ಪಡೆಯುತ್ತಾಳೆ. ಪಿಯುಸಿ ಯಲ್ಲಿಯೂ ಅತ್ಯುತ್ತಮ ಸಾಧನೆ ಮಾಡಿದ ಸಿದ್ದಮ್ಮ ರಾಯಚೂರು ಕೃಷಿ ವಿವಿಯ ಬಿಎಸ್ಸಿ ಕೃಷಿಗೆ ಸಿಇಟಿ ಪರೀಕ್ಷೆ ಬರೆದು ಆಯ್ಕೆಯಾಗುತ್ತಾಳೆ.
ಮಗಳ ಸಾಧನೆಯನ್ನು ಕಂಡು ನನ್ನೆಲ್ಲ ಕಷ್ಟಕ್ಕೂ ಫಲ ದೊರೆತಂತೆ ಆಗಿದೆ. ನಾನು ಕೂಲಿ ಮಾಡಿದರೂ ಪರವಾಗಿಲ್ಲ. ಮಕ್ಕಳು ಚೆನ್ನಾಗಿ ಓದಬೇಕು ಎನ್ನುವ ಬಯಕೆ ಈಡೇರಿದೆ. ನನಗಂತೂ ತುಂಬಾ ಸಂತೋಷವಾಗಿದೆ.
ನನಗೆ ಗೋಲ್ಡ್ ಮೆಡಲ್ ಬಂದಿರುವುದಕ್ಕೆ ಖುಷಿಯಾಗಿದೆ. ಈಗ ಪಿಎಚ್ಡಿ ಮಾಡುತ್ತಿದ್ದು, ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುತ್ತಿದ್ದೇನೆ. ನನ್ನ ತಾಯಿ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ, ಸಾಧನೆಯ ಮೂಲಕ ಅವರ ಋಣ ತೀರಿಸಬೇಕಾಗಿದೆ.