ಕೂಲಿ ಕೆಲಸದಾಕೆಯ ಪುತ್ರಿಗೆ ಎಂಎಸ್‌ಸಿಯಲ್ಲಿ ಚಿನ್ನದ ಪದಕ

KannadaprabhaNewsNetwork |  
Published : Jun 29, 2024, 12:31 AM IST

ಸಾರಾಂಶ

ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ನಿವಾಸಿ ಹುಲಿಗೆಮ್ಮ ಅವರ ಪುತ್ರಿ ಸಿದ್ದಮ್ಮ ಚೋಟಪ್ಪನವರ ಧಾರವಾಡದ ಕೃಷಿ ವಿವಿಯಲ್ಲಿ ಎಂಎಸ್‌ಸಿ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ರ್‍ಯಾಂಕ್‌ ಗಳಿಸಿದ್ದಾರೆ.

ಸೋಮರಡ್ಡಿ ಅಳವಂಡಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ಕಿತ್ತು ತಿನ್ನುವ ಬಡತನ, ಕೂಲಿ ಕೆಲಸ ಮಾಡಿ ಜೀವನದ ಬಂಡಿ ಸಾಗಿಸುವ ಜೊತೆಗೆ, ಪ್ರತಿಭಾವಂತ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮಹದಾಸೆ ಹೊತ್ತಿದ್ದ ಮಹಾತಾಯಿಯ ಪುತ್ರಿಯೋರ್ವಳು ಧಾರವಾಡದ ಕೃಷಿ ವಿವಿಯಲ್ಲಿ ಎಂಎಸ್‌ಸಿ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ರ್‍ಯಾಂಕ್‌ ಗಳಿಸಿ ಇತರರಿಗೆ ಮಾದರಿಯಾಗಿದ್ದಾರೆ.

ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ನಿವಾಸಿ ಹುಲಿಗೆಮ್ಮ ಅವರ ಪುತ್ರಿ ಸಿದ್ದಮ್ಮ ಚೋಟಪ್ಪನವರ ಈ ಸಾಧನೆ ಮಾಡಿದ್ದಾರೆ. ಶೇ.94.8 ಅಂಕದೊಂದಿಗೆ ವಿವಿಗೆ ಪ್ರಥಮ ಸ್ಥಾನ ಗಳಿಸಿ ಬಂಗಾರದ ಪದಕ ಪಡೆದಿದ್ದಾರೆ.ಧಾರವಾಡ ಕೃಷಿ ವಿವಿಯಲ್ಲಿ ಗುರುವಾರ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು ಬಂಗಾರದ ಪದಕ ನೀಡಿ ಪುರಸ್ಕರಿಸಿದ್ದಾರೆ.

ಕಿತ್ತು ತಿನ್ನುವ ಬಡತನ:

ಹುಲಿಗೆಮ್ಮನ ಪತಿ ಬೇಗನೆ ತೀರಿಕೊಂಡರು. ನಾಲ್ವರು ಪುತ್ರಿಯರು, ಇಬ್ಬರು ಪುತ್ರರನ್ನು ಜೋಪಾನ ಮಾಡುವ ಹೊಣೆ ಹೊತ್ತ ಹುಲಿಗೆಮ್ಮಾ ಕೂಲಿ ಕೆಲಸ ಮಾಡುತ್ತಲೇ ಮಕ್ಕಳನ್ನು ಚೆನ್ನಾಗಿಯೇ ಓದಿಸಬೇಕು ಎನ್ನುವ ಆಸೆಗೆ ಮಕ್ಕಳು ಜೀವತುಂಬಿದ್ದಾರೆ.

ನಾಲ್ಕನೇ ಮಗಳು ಸಿದ್ದಮ್ಮ ಓದಿನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕೊಪ್ಪಳ ನಗರದ ಶ್ರೀ ಶಾರದಾ ಶಾಲೆಯಲ್ಲಿ ಪೂರೈಸಿದ ಸಿದ್ದಮ್ಮ, ಗಂಗಾವತಿಯ ವಡ್ಡರಟ್ಟಿ ಗ್ರಾಮದ ಸರ್ಕಾರಿ ಕಿತ್ತೂರರಾಣಿ ಚೆನ್ನಮ್ಮ ಶಾಲೆಯಲ್ಲಿ ಹತ್ತನೇ ತರಗತಿವರೆಗೂ ಓದುತ್ತಾಳೆ. 10ನೇ ತರಗತಿಯಲ್ಲಿ ಶೇಕಡಾ 90ಕ್ಕೂ ಅಧಿಕ ಅಂಕ ಪಡೆದು, ಮಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿಗೆ ಉಚಿತ ಪ್ರವೇಶ ಪಡೆಯುತ್ತಾಳೆ. ಪಿಯುಸಿ ಯಲ್ಲಿಯೂ ಅತ್ಯುತ್ತಮ ಸಾಧನೆ ಮಾಡಿದ ಸಿದ್ದಮ್ಮ ರಾಯಚೂರು ಕೃಷಿ ವಿವಿಯ ಬಿಎಸ್ಸಿ ಕೃಷಿಗೆ ಸಿಇಟಿ ಪರೀಕ್ಷೆ ಬರೆದು ಆಯ್ಕೆಯಾಗುತ್ತಾಳೆ.

ಅಲ್ಲಿಯೂ ಅತ್ಯುತ್ತಮ ಸಾಧನೆ ಮಾಡಿದ ಸಿದ್ದಮ್ಮ ಧಾರವಾಡ ಕೃಷಿ ವಿವಿಯಲ್ಲಿ ಎಂಎಸ್ಸಿ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಉನ್ನತ ಸ್ಥಾನ ಸಿಗುತ್ತದೆ. ಇದೀಗ ಸಿದ್ದಮ್ಮ ಎಂಎಸ್ಸಿಯಲ್ಲಿ ಶೇಕಡಾ 94.8ರಷ್ಟು ಅಂಕ ಗಳಿಸಿ ಪ್ರಥಮ ರ್‍ಯಾಂಕ್‌ ಪಡೆದು ಬಂಗಾರದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಗಳ ಸಾಧನೆಯನ್ನು ಕಂಡು ನನ್ನೆಲ್ಲ ಕಷ್ಟಕ್ಕೂ ಫಲ ದೊರೆತಂತೆ ಆಗಿದೆ. ನಾನು ಕೂಲಿ ಮಾಡಿದರೂ ಪರವಾಗಿಲ್ಲ. ಮಕ್ಕಳು ಚೆನ್ನಾಗಿ ಓದಬೇಕು ಎನ್ನುವ ಬಯಕೆ ಈಡೇರಿದೆ. ನನಗಂತೂ ತುಂಬಾ ಸಂತೋಷವಾಗಿದೆ.

ಹುಲಿಗೆಮ್ಮಾ ಚೋಟಪ್ಪನವರ, ಸಿದ್ದಮ್ಮಳ ತಾಯಿ

ನನಗೆ ಗೋಲ್ಡ್ ಮೆಡಲ್ ಬಂದಿರುವುದಕ್ಕೆ ಖುಷಿಯಾಗಿದೆ. ಈಗ ಪಿಎಚ್‌ಡಿ ಮಾಡುತ್ತಿದ್ದು, ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುತ್ತಿದ್ದೇನೆ. ನನ್ನ ತಾಯಿ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ, ಸಾಧನೆಯ ಮೂಲಕ ಅವರ ಋಣ ತೀರಿಸಬೇಕಾಗಿದೆ.

-ಸಿದ್ದಮ್ಮ ಚೋಟಪ್ಪನವರ ಗೋಲ್ಡ್ ಮೆಡಲ್ ಪಡೆದ ವಿದ್ಯಾರ್ಥಿನಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!