ಕನ್ನಡಪ್ರಭ ವಾರ್ತೆ ಜಮಖಂಡಿ
ಕಳೆದ ವರ್ಷದ ಕಾರ್ಯಕ್ರಮದಲ್ಲಿ ನೂರಾರು ನಾಗಸಾಧುಗಳನ್ನು ಹಿಪ್ಪರಗಿ ಗ್ರಾಮಕ್ಕೆ ಕರೆತಂದು ಕ್ಷೇತ್ರವನ್ನು ಪುನೀತಗೊಳಿಸಿದ ದೇವಗಿರಿ ಬಾಬಾ ಅವರು ಈ ಬಾರಿಯೂ ಕಾರ್ಯಕ್ರಮಕ್ಕೆ ಆಗಮಿಸಿರುವುದನ್ನು ಸ್ಮರಿಸಿದರು. ಜಮಖಂಡಿ ತಾಲೂಕಿನ ವಿವಿಧ ಶಾಲಾ ಆವರಣಗಳಲ್ಲಿ ಗಿಡ ನೆಡುವ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದ ಅವರು, ಗ್ರಾಮಸ್ಥರು, ಯುವಕರು ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ನೂರಾರು ಗಿಡಗಳನ್ನು ನೆಟ್ಟು ಅವುಗಳ ಪೋಷಣೆಯ ಜವಾಬ್ದಾರಿಯನ್ನೂ ವಹಿಸಿಕೊಳ್ಳಬೇಕು ಎಂದರು.
ಸಾವಯವ ಕೃಷಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ರೈತರನ್ನು ಹಾಗೂ ಗೋಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ರೈತರನ್ನು ಅಭಿನಂದಿಸಿದರು. ರೈತರು ಪ್ರಕೃತಿಯೊಂದಿಗೆ ಹೊಂದಾಣಿಕೆಯಿಂದ ಕೃಷಿ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಬೇಕು ಎಂದು ಕರೆ ನೀಡಿದರು.ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಒತ್ತಾಯ:
ಕೃಷ್ಣಾ ನದಿ ದಂಡೆಯಲ್ಲಿರುವ ಗ್ರಾಮಗಳಿಗೆ ಅಗತ್ಯವಾದ ಲಿಫ್ಟ್ ಇರಿಗೇಶನ್ ಯೋಜನೆಗಳನ್ನು ಜಾರಿಗೊಳಿಸಿ ರೈತರ ಜಮೀನುಗಳಿಗೆ ನೀರು ತಲುಪಿಸಬೇಕು. ನೀರಾವರಿ ಯೋಜನೆಗಳ ಮೂಲಕ ಉತ್ತರ ಕರ್ನಾಟಕದ ರೈತರ ಬದುಕಿನಲ್ಲಿ ಬದಲಾವಣೆ ತರಬೇಕು ಎಂದು ಆಗ್ರಹಿಸಿದ ಅವರು, ಮೇಲ್ದಂಡೆ ಯೋಜನೆ ಶೀಘ್ರ ಪೂರ್ಣಗೊಳಿಸಿ ರೈತರಿಗೆ ಅವರ ಹಕ್ಕಿನ ನೀರು ಒದಗಿಸದಿದ್ದರೆ, ಮುಂದಿನ ದಿನಗಳಲ್ಲಿ ಹಿಪ್ಪರಗಿಯಿಂದ ಕೂಡಲಸಂಗಮ ಹಾಗೂ ಇತರೆ ಪ್ರದೇಶಗಳವರೆಗೆ ಪಾದಯಾತ್ರೆ ನಡೆಸಿ ರೈತರ ಹಕ್ಕಿಗಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಸಿದರು.
ಕೃಷ್ಣಾ ನದಿ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಆದರೆ, ದೇಶದ ಇತರ ಪ್ರಮುಖ ನದಿಗಳಿಗೆ ನೀಡುವಷ್ಟು ಧಾರ್ಮಿಕ ಮತ್ತು ಸಾಂಸ್ಕೃತಿಕ ಗೌರವವನ್ನು ಕೃಷ್ಣೆಗೆ ನೀಡುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ ಎಂದು ಅವರು ವಿಷಾದಿಸಿದರು. ಗಂಗಾ ಆರತಿ, ಕುಂಭಮೇಳ ಸೇರಿ ಉತ್ತರ ಭಾರತದಲ್ಲಿ ನದಿಗಳಿಗೆ ವಿಶೇಷ ಗೌರವ ನೀಡಲಾಗುತ್ತಿದೆ. ದಕ್ಷಿಣದಲ್ಲಿ ಕಾವೇರಿ ಮಾತೆಯನ್ನು ಭಕ್ತಿಭಾವದಿಂದ ಪೂಜಿಸಲಾಗುತ್ತಿದೆ. ಅದೇ ರೀತಿ ನಮ್ಮ ಕೃಷ್ಣಾ ನದಿಯನ್ನೂ ನಾವು ಗೌರವಿಸಿ, ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗಬೇಕು. ನದಿ ಸಂರಕ್ಷಣೆಗಾಗಿ ಐದು ಸಂಕಲ್ಪಗಳನ್ನು ಕೈಗೊಳ್ಳಬೇಕೆಂದು ಕರೆ ನೀಡಿದ ಅವರು, ಕೃಷ್ಣಾ ನದಿಯನ್ನು ಸ್ವಚ್ಛ ವಾಗಿಡುವುದು, ಜಲಮೂಲಗಳನ್ನು ಸಂರಕ್ಷಿಸುವುದು, ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದು, ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವುದು, ಗೋಸಂತತಿ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುವುದು ಎಂಬ ಸಂಕಲ್ಪಗಳೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.