ನೆಮ್ಮದಿ ಬದುಕಿಗೆ ಗ್ಯಾರೆಂಟಿ ಯೋಜನೆ ಅಗತ್ಯ

KannadaprabhaNewsNetwork | Published : Dec 21, 2024 1:15 AM

ಸಾರಾಂಶ

ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಶಿಕಾರಿಪುರ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.

ಅವರು ಸೋಮವಾರ ಪಟ್ಟಣದ ತಾಲೂಕು ಪಂಚಾಯಿತಿ ಮುಂಭಾಗ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿಯಂತಾಗಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಹೆಮ್ಮೆ ಇದೆ ನನಗೆ ಎಂದು ತಿಳಿಸಿದರು.

ಈ ಎಲ್ಲಾ ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳು ಅರ್ಹರಾದ ಎಲ್ಲಾ ಪಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಲುಪುತ್ತಿರುವುದು ಹರ್ಷವೆನಿಸಿದೆ. ರಾಜ್ಯದ ಪ್ರತಿ ಪಂಚಾಯಿತಿಗೆ ವಾರ್ಷಿಕವಾಗಿ ಸುಮಾರು ₹9 ಕೋಟಿಗೂ ಅಧಿಕ ಮೊತ್ತ ನೇರವಾಗಿ ತಲುಪುತ್ತಿದೆ. ಈ ಎಲ್ಲಾ ಯೋಜನೆಗಳು ಶೇ. 99ರಷ್ಟು ಯಶಸ್ವಿಯಾಗಿರುವುದು ಪ್ರಸ್ತುತ ಸರ್ಕಾರದ ಹೆಗ್ಗಳಿಕೆ ಎಂದರು.

ಈ ಎಲ್ಲಾ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಜಾತ್ಯತೀತವಾಗಿ, ಪಕ್ಷತೀತವಾಗಿ ನೀಡಲಾಗುತ್ತಿದೆ. ಅರ್ಹರಾದ ಯಾರೊಬ್ಬರೂ ಈ ಯೋಜನೆಗಳ ಸೌಲಭ್ಯದಿಂದ ವಂಚಿತರಾಗದಂತೆ ಗಮನಿಸಲಾಗುವುದು. ಅಂತೆಯೇ ಎರಡು -ಮೂರು ದಶಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರವರು ಜನಸಾಮಾನ್ಯರ ಸಂಕಷ್ಟಗಳನ್ನು ಅರಿತು ಕೃಷಿ ಚಟುವಟಿಕೆಗಳಿಗೆ ಬಳಸುವ ವಿದ್ಯುತ್‌ ಆನ್ನು ಅಂದೇ ಉಚಿತವಾಗಿ ನೀಡಿದ್ದರು ಎಂದು ತಿಳಿಸಿದರು.

ಅಲ್ಲದೆ ಅಂದು ಜಾರಿಗೆ ತಂದಿದ್ದ ಆಶ್ರಯ, ಆರಾಧನಾ, ಗ್ರಾಮೀಣ ಕೃಪಾಂಕ ಮುಂತಾದ ಜನಪ್ರಿಯ ಯೋಜನೆಗಳು ಇಂದಿಗೂ ಜನಮಾನಸದಲ್ಲಿವೆ. ಆ ಪರಂಪರೆ ಇಂದಿಗೂ ಮುಂದುವರೆದಿದೆ. ಮುಂದೆಯೂ ಮುಂದುವರೆಯಲಿದೆ ಎಂದ ಅವರು, ಸರ್ಕಾರದ ಇಂತಹ ಯೋಜನೆಗಳ ಲಾಭ ಪಡೆದ ಸಾರ್ವಜನಿಕರು ಜನಪ್ರತಿನಿಧಿಗಳಿಗೆ ಬೆಂಬಲವಾಗಿ ನಿಲ್ಲಬೇಕು. ಶೇ. 100ರಷ್ಟು ಅಂಕ ನೀಡಿ ಉತ್ತೀರ್ಣಗೊಳಿಸಬೇಕು ಎಂದು ನುಡಿದರು.

ಪ್ರಸಕ್ತ ಸರ್ಕಾರವು ಹಿಂದೆಂದಿಗಿಂತ ಇಂದು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಅದಕ್ಕಾಗಿ ಪ್ರತಿ ವರ್ಷ ಸರ್ಕಾರವು ಶೇ. 38ರಷ್ಟು ಅನುದಾನವನ್ನು ಖರ್ಚು ಮಾಡುತ್ತಿದೆ. ಯಾವುದೇ ಮಗು ಕಲಿಕೆಯಿಂದ ಹಿಂದೆ ಸರಿಯದಂತೆ ಗಮನಿಸಲಾಗುತ್ತಿದೆ. ಅದರ ಭಾಗವಾಗಿ ಅನುತ್ತೀರ್ಣಗೊಂಡ ಮಕ್ಕಳಿಗೆ ಪೂರಕ ಪರೀಕ್ಷೆಗಳನ್ನು ನಡೆಸಿ ಶಿಕ್ಷಣದ ಮುಖ್ಯವಾಹಿನಿಯಲ್ಲಿ ಉಳಿಸಿಕೊಂಡು ಶಿಕ್ಷಣ ನೀಡಲಾಗುತ್ತಿದೆ. ರಾಜ್ಯದ ಸುಮಾರು 57 ಲಕ್ಷ ಮಕ್ಕಳಿಗೆ ಪ್ರತಿದಿನ ಬಿಸಿ ಊಟ, ಮೊಟ್ಟೆ, ಬಾಳೆಹಣ್ಣು, ಸೇಂಗಾ ಚಿಕ್ಕಿ, ಪೌಷ್ಠಿಕ ಆಹಾರ, ಹಾಲು, ರಾಗಿ ಮಾಲ್ಟ್ ನೀಡಲಾಗುತ್ತಿದೆ. ಅಲ್ಲದೆ ಸಕಾಲದಲ್ಲಿ ಸಮವಸ್ಟ್ರ, ಪಠ್ಯಪುಸ್ತಕ, ಶೂ- ಸಾಕ್ಸ್ ನೀಡಿ ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.ಈಗಾಗಲೇ ಶಿಕಾರಿಪುರ ತಾಲೂಕಿನ ಈಸೂರು, ಹೊಸೂರು, ಬಗನಕಟ್ಟೆ ಗ್ರಾಮದ ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳನ್ನಾಗಿ ಪರಿವರ್ತಿಸಿ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶಿರಾಳಕೊಪ್ಪದ ಒಂದು ಶಾಲೆ ಹಾಗೂ ಶಿಕಾರಿಪುರದ ನಗರದ ಹೃದಯ ಭಾಗದಲ್ಲಿರುವ ಹಾಗೂ ಹೆಚ್ಚಿನ ವಿದ್ಯಾರ್ಥಿಗಳಿರುವ 2 ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನಾಗರಾಜ ಗೌಡ, ಪಾರಿವಾಳದ ಶಿವರಾಂ, ಭಂಡಾರಿ ಮಾಲತೇಶ್, ನಗರದ ಮಹದೇವಪ್ಪ, ಪಾಲಾಕ್ಷಪ್ಪ ಗೌಡ, ತಹಸೀಲ್ದಾರ್ ಮಲ್ಲೇಶಪ್ಪ ಪೂಜಾರ್ ಸೇರಿದಂತೆ ಅನೇಕ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Share this article