ಪ್ರೀತಿ, ಕ್ಷಮಾಗುಣದಿಂದ ಸಮಾಜದಲ್ಲಿ ಬದಲಾವಣೆ ತರುವವನೇ ನಾಯಕ: ವಂ.ಮೆಂಡೋನ್ಸಾ

KannadaprabhaNewsNetwork |  
Published : May 13, 2024, 12:08 AM IST
ನಾಯಕ12 | Kannada Prabha

ಸಾರಾಂಶ

ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಭಾರತೀಯ ಕಥೊಲಿಕ್ ಯುವ ಸಂಚಾಲನ ನೇತೃತ್ವದಲ್ಲಿ ಒಂದು ದಿನದ ಗೊಸ್ಪೆಲ್ ಗಾಲಾ (ಸುವಾರ್ತೆಯ ಸಂಭ್ರಮ) ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಭಾನುವಾರ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬೈಬಲ್ ಗ್ರಂಥಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗುವುದರ ಮೂಲಕ ಕಲ್ಯಾಣಪುರ ವಲಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಭಾರತೀಯ ಕಥೊಲಿಕ್ ಯುವ ಸಂಚಾಲನ ನೇತೃತ್ವದಲ್ಲಿ ಒಂದು ದಿನದ ಗೊಸ್ಪೆಲ್ ಗಾಲಾ (ಸುವಾರ್ತೆಯ ಸಂಭ್ರಮ) ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಭಾನುವಾರ ಚರ್ಚಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಬೈಬಲ್ ಗ್ರಂಥಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗುವುದರ ಮೂಲಕ ಕಲ್ಯಾಣಪುರ ವಲಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರೀತಿ ಮತ್ತು ಕ್ಷಮೆಯ ಗುಣಗಳ ಮೂಲಕ ಓರ್ವ ಉತ್ತಮ ನಾಯಕ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಿದೆ. ಯೇಸು ಸ್ವಾಮಿಯು ತನ್ನ ಜೀವನದಲ್ಲಿ ಕ್ಷಮೆ ಮತ್ತು ಪ್ರೀತಿಯ ಮೂಲಕ ಇಡೀ ವಿಶ್ವದಲ್ಲಿ ಕ್ರಾಂತಿಕಾರಕ ಬದಲಾವಣೆ ಮಾಡಿ ತೋರಿಸಿರುವುದು ನಮಗೆಲ್ಲರಿಗೂ ಮಾದರಿಯಾಗಿದೆ. ಯೇಸು ಸ್ವಾಮಿಯವರು ತೋರಿಸಿಕೊಟ್ಟ ಮೌಲ್ಯಗಳೊಂದಿಗೆ ನಾವು ಬದುಕಿದಾಗ ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಒರ್ವ ಮಾದರಿ ನಾಯಕನಾಗಲು ಸಾಧ್ಯವಿದೆ ಎಂದರು.

ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಂ.ಡೆನಿಸ್ ಡೆಸಾ ಮಾತನಾಡಿ, 2025 ಯೇಸು ಸ್ವಾಮಿಯ ಹುಟ್ಟಿನ ಜುಬಿಲಿ ಆಚರಣೆಯಿದ್ದು, ಇದಕ್ಕೆ ಪೂರಕವಾಗಿ ಈ ವರ್ಷವನ್ನು ಪ್ರಾರ್ಥನೆಯ ವರ್ಷವಾಗಿ ಘೋಷಿಸಲಾಗಿದೆ. ಯುವ ಜನರು ಹೇಗೆ ಆಟೋಟ, ಸಾಂಸ್ಕೃತಿಕ ವಿಚಾರಗಳಲ್ಲಿ ತೊಡಗಿಸಿಕೊಳ್ಳುತ್ತಾರೋ ಅದೇ ರೀತಿ ಆಧ್ಯಾತ್ಮಿಕ ವಿಚಾರಗಳಿಗೂ ಕೂಡ ಅವರುಗಳು ಆಸಕ್ತಿ ತೋರಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಯುವಜನರೊಂದಿಗೆ ಆಧ್ಯಾತ್ಮಿಕ ಸಂವಾದ ಮತ್ತು ಸಂಭಾಷಣೆ, ಬೈಬಲ್ ಕ್ವಿಜ್, ಬೈಬಲ್ ರೀಲ್ಸ್ ಮಾಡುವ ಸ್ಪರ್ಧೆ, ಕೊಲಾಜ್ ಹಾಗೂ ಆಧ್ಯಾತ್ಮಿಕ ಗಾಯನ ಕಾರ್ಯಕ್ರಮಗಳಲ್ಲಿ ವಲಯದ ಯುವಜನರು ವಿಶಿಷ್ಟ ಆಸಕ್ತಿಯಿಂದ ಭಾಗವಹಿಸಿದರು.

ತೊಟ್ಟಮ್ ಸಂತ ಅನ್ನಮ್ಮ ಕಾನ್ವೆಂಟ್ ನ ಮುಖ್ಯಸ್ಥೆ ಸಿಸ್ಟರ್ ಸುಷ್ಮಾ, ಉಡುಪಿ ಧರ್ಮಪ್ರಾಂತ್ಯದ ಐಸಿವೈಎಂ ಅಧ್ಯಕ್ಷ ಗೊಡ್ವಿನ್ ಮಸ್ಕರೇನ್ಹಸ್, ವಲಯ ಅಧ್ಯಕ್ಷ ಲೊಯ್ಡ್ ಕರ್ನೆಲಿಯೊ, ತೊಟ್ಟಂ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸುನಿಲ್ ಫೆರ್ನಾಂಡಿಸ್, ಐಸಿವೈಎಮ್ ಸಚೇತಕ ಲೆಸ್ಲಿ ಆರೋಝಾ, ಆಲಿಸ್ ಮಿನೇಜಸ್ ಉಪಸ್ಥಿತರಿದ್ದರು. ತೊಟ್ಟಂ ಐಸಿವೈಎಮ್ ಅಧ್ಯಕ್ಷರಾದ ಸ್ಯಾಮುವೆಲ್ ಫೆರ್ನಾಂಡಿಸ್ ಸ್ವಾಗತಿಸಿ, ಪ್ರಿಯಾಂಕ ಮಾರ್ಟಿಸ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ