ಸಭೆ । ಬೇಲೂರಲ್ಲಿ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ
‘ಇಂದು ನಡೆಯುತ್ತಿರುವ ಸಮನ್ವಯ ಸಭೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರು, ಮುಖಂಡರ ಒಗ್ಗಟ್ಟಿನ ಶಕ್ತಿ ಪ್ರದರ್ಶನ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತುತ್ತಿರುವ ಕಾಂಗ್ರೆಸ್ಸಿಗರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್ ಹೇಳಿದರು.
ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ನಡೆದ ಸಮನ್ವಯ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮತಾನಾಡಿ, ಮೋದಿಯವರು ದೇಶವನ್ನು ಉತ್ತಮವಾಗಿ ನಡೆಸುತ್ತಿದ್ದು ದೇಶದ ಭದ್ರತೆ ಬಗ್ಗೆ ಕಾಳಜಿ ಇಟ್ಟುಕೊಂಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ರೈತಪರ ಜನಸಾಮಾನ್ಯರ ಪರ ಹೋರಾಟ ನಡೆಸುತ್ತ ಬಂದಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಟ್ಟರೆ ನಮ್ಮ ದೇಶವನ್ನು ತಲೆಯೆತ್ತಿ ನಿಲ್ಲುವಂತೆ ಮಾಡುತ್ತೇನೆ ಎಂದು ಮೋದಿ ಭರವಸೆ ನೀಡಿದ್ದರು. ನುಡಿದ ಮಾತಿನಂತೆ ನಡೆದು ಭ್ರಷ್ಟಾಚಾರ ರೈತ ಆಡಳಿತ ನೀಡಿ ಇಡೀ ಪ್ರಪಂಚದಲ್ಲಿ ವಿಶ್ವ ಗುರುವಾಗಿ ಭಾರತ ಹೊರಹೊಮ್ಮಿದೆ ಎಂದು ಹೇಳಿದರು.ದೇಶದ ಭವಿಷ್ಯದ ಭದ್ರತೆಗಾಗಿ, ಸುಸ್ಥಿತಿಗಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ತಮ್ಮ ರಾಜಕಾರಣವನ್ನು ಬದಿಗೊತ್ತಿ ಮೋದಿ ಮತ್ತೆ ಪ್ರಧಾನ ಮಂತ್ರಿಯಾಗಲು ಬೆಂಬಲ ನೀಡಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಕಾರ್ಯಕರ್ತರು, ಮುಖಂಡರು ಭಿನ್ನಾಭಿಪ್ರಾಯ ಮರೆತು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಹಾಸನ ಲೋಕಸಭಾ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಈ ಸಮನ್ವಯ ಸಭೆ ಮಾದರಿ ಸಭೆಯಾಗಿದ್ದು ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಮೈತ್ರಿ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದ ವಿರೋಧಿಗಳಿಗೆ ಕಣ್ಣು ಕೆಂಪು ಮಾಡಿದೆ. ಈ ಹಿಂದೆ ತಮ್ಮಿಂದ ಏನಾದರೂ ತಪ್ಪಾಗಿದ್ದರೆ ಕ್ಷಮೆ ಇರಲಿ, ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳನ್ನು ಒಟ್ಟಾಗಿ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇಲೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಸಮನ್ವಯ ಸಭೆ ನಡೆಸಲಾಯಿತು.