ಭ್ರಷ್ಟಾಚಾರ ನಿಗ್ರಹ ಕಾನೂನುಗಳಲ್ಲೇ ಲೋಪ

KannadaprabhaNewsNetwork |  
Published : Oct 30, 2025, 01:15 AM IST
ಪೋಟೋ: 29ಎಸ್‌ಎಂಜಿಕೆಪಿ02ಶಿವಮೊಗ್ಗದ ಜಿಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ಲೋಕಾಯುಕ್ತ ಸಹಯೋಗದಲ್ಲಿ ಆಯೋಜಿಸಿದ್ದ ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ-2025” ಕಾರ್ಯಕ್ರಮವನ್ನು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಸರ್ಕಾರಿ ನೌಕರಿ ಎಂದರೆ ಜನಸೇವೆ ಮಾಡಲು ಸಿಕ್ಕ ಅವಕಾಶವೇ ಹೊರತು, ಅಧಿಕಾರ ಸಾಧಿಸುವ ವೇದಿಕೆ ಅಲ್ಲ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಮನೋಭಾವ ಬದಲಾಗಬೇಕು. ಆಗ ಮಾತ್ರ ಸರ್ಕಾರಿ ಇಲಾಖೆಗಳಲ್ಲಿ ಶೇ.50 ರಷ್ಟಾದರು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ಹೇಳಿದರು.

ಶಿವಮೊಗ್ಗ: ಸರ್ಕಾರಿ ನೌಕರಿ ಎಂದರೆ ಜನಸೇವೆ ಮಾಡಲು ಸಿಕ್ಕ ಅವಕಾಶವೇ ಹೊರತು, ಅಧಿಕಾರ ಸಾಧಿಸುವ ವೇದಿಕೆ ಅಲ್ಲ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಮನೋಭಾವ ಬದಲಾಗಬೇಕು. ಆಗ ಮಾತ್ರ ಸರ್ಕಾರಿ ಇಲಾಖೆಗಳಲ್ಲಿ ಶೇ.50 ರಷ್ಟಾದರು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ಹೇಳಿದರು.

ಇಲ್ಲಿನ ಜಿಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ಲೋಕಾಯುಕ್ತ ಸಹಯೋಗದಲ್ಲಿ ಆಯೋಜಿಸಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-2025” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡತನ, ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಅಂಶಗಳು ನಮ್ಮ ದೇಶದ ಅಭಿವೃದ್ಧಿಗೆ ಕಂಟಕವಾಗಿದೆ. ದೇಶದಲ್ಲಿ ಜನಸಂಖ್ಯೆ ಹೆಚ್ಚಾದಂತೆ ಅದರ ಅನುಗುಣವಾಗಿ ಉದ್ಯೋಗದ ಅವಕಾಶ ಹಾಗೂ ಅದಕ್ಕೆ ಬೇಕಾದ ಸಂಪನ್ಮೂಲಗಳ ಕೊರತೆಯು ಉಂಟಾಗುತ್ತಿದ್ದು, ಅದಕ್ಕಾಗಿ ಪೈಪೋಟಿ ನಡೆಯುತ್ತಿದೆ. ಈ ಕಾರಣದಿಂದಲೇ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ ಎಂದರು.

ಭ್ರಷ್ಟಾಚಾರ ನಿಗ್ರಹ ಕಾನೂನುಗಳಲ್ಲೇ ಬಹಳಷ್ಟು ಲೋಪಗಳಿದ್ದು, ಕಾನೂನು ಮೂಲಕ ಭ್ರಷ್ಟಾಚಾರವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರ ಉಪಯೋಗವನ್ನು ಭ್ರಷ್ಟಾಚಾರದಲ್ಲಿ ತೊಡಗಿರುವವರೇ ಹೆಚ್ಚಾಗಿ ಪಡೆಯುತ್ತಿದ್ದಾರೆ. ನಮ್ಮ ದೇಶದಲ್ಲಿ ಶೇ.90ರಷ್ಟು ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳು ಪಕ್ಷಗಾರರಾಗಿದ್ದು, ಭ್ರಷ್ಟಾಚಾರಕ್ಕೆ ಇದೂ ಕಾರಣವಾಗಿದೆ. ಹಾಗಾಗಿ ಇದರ ಸಂಪೂರ್ಣ ನಿರ್ಮೂಲನೆ ಅಸಾಧ್ಯವಾಗಿದೆ. ಆದ್ದರಿಂದ ಸರ್ಕಾರಿ ನೌಕರರಿಗೆ ಭ್ರಷ್ಟಾಚಾರ ಕುರಿತು ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್.ಎಂ.ಎಸ್ ಮಾತನಾಡಿ, ಸರ್ಕಾರಿ ನೌಕರರ ನಗದು ವ್ಯವಹಾರ ಪ್ರಶ್ನಾರ್ಥವಾಗಿದೆ. ಹಾಗಾಗಿ ಸರ್ಕಾರಿ ನೌಕರರು 20 ಸಾವಿರಕ್ಕಿಂತ ಅಧಿಕವಾಗಿ ಖರ್ಚು ಮಾಡುವುದಾದರೆ ಅದನ್ನು ಬ್ಯಾಂಕ್ ಮೂಲಕ ಮಾಡಬೇಕು. ಇತ್ತೀಚೆಗೆ ಸರ್ವೋಚ್ಛ ನ್ಯಾಯಾಲಯವೂ ಸರ್ಕಾರಿ ನೌಕರರು 20 ಸಾವಿರಕ್ಕಿಂತ ಅಧಿಕ ನಗದು ವ್ಯವಹಾರ ಮಾಡಿದರೆ ಅದನ್ನು ಆದಾಯ ತೆರಿಗೆ ಇಲಾಖೆಯ ತನಿಖೆ ಒಳಪಡಿಸಬೇಕೆಂದು ತಿಳಿಸಿದೆ ಎಂದು ಹೇಳಿದರು.

ಸರ್ಕಾರಿ ನೌಕರರು ತಮ್ಮ ಹೆಂಡತಿ, ಮಕ್ಕಳ ಆದಾಯ ಇದ್ದರೆ ಅದನ್ನು ವರದಿ ಮಾಡಿ. ಹೊಸದಾಗಿ ಅಧಿಕಾರ ವಹಿಸಿಕೊಳ್ಳುವ ಇಲಾಖೆಯಲ್ಲಿ ಹಿಂದಿನ ಅಧಿಕಾರದ ಅವಧಿಯಲ್ಲಿ ಮಾಡಿದ ಲೋಪದ ಬಗ್ಗೆ ಲೋಕಾಯುಕ್ತರು ನಿಮ್ಮನ್ನು ಪ್ರಶ್ನಿಸಿದರೆ ಅದಕ್ಕೆ ಹಾರಿಕೆ ಉತ್ತರ ನೀಡದೆ ಹಿಂದಿನ ಅಧಿಕಾರದಲ್ಲಿದ್ದ ಅಧಿಕಾರಿಯ ಸಂಕ್ಷೀಪ್ತ ಮಾಹಿತಿಯನ್ನು ಲೋಕಾಯುಕ್ತರಿಗೆ ಒದಗಿಸಿ ಹಾಗೂ ನೀವು ಯಾವಾಗ ಅಧಿಕಾರ ವಹಿಸಿಕೊಂಡಿದ್ದಿರಾ ಎಂಬ ಮಾಹಿತಿಯನ್ನು ಕೂಡ ನೀಡಿ ಎಂದು ಹೇಳಿದರು.

ಅಧಿಕಾರಿಗಳು ತಮ್ಮ ಖಾಸಗಿ ಜೀವನದಲ್ಲಿ ಬೇರೆ ಇಲಾಖೆಯ ಬಗ್ಗೆ ನಕರಾತ್ಮಕವಾಗಿ ಮಾತನಾಡಬಾರದು. ಇದರಿಂದ ಸರ್ಕಾರಿ ಅಧಿಕಾರಿಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಅಧಿಕಾರಿಗಳು ತಮ್ಮ ಖಾಸಗಿ ಜೀವನದಲ್ಲಿ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎನ್‌.ಹೇಮಂತ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಹನುಮಂತಪ್ಪ.ಕೆ.ಟಿ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಚ್‌.ಎಂ.ಮಂಜುನಾಥ ಚೌಧರಿ, ಉಪಾಧೀಕ್ಷಕ ಬಿ.ಪಿ.ಚಂದ್ರಶೇಖರ್, ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಕೆ.ಪಿ.ರುದ್ರೇಶ್‌ ಇತರರಿದ್ದರು.

ಭ್ರಷ್ಟಾಚಾರದ ನಿರ್ಮೂಲನೆ ಆರಂಭವಾಗಬೇಕಿರುವುದು ಉನ್ನತ ಅಧಿಕಾರಿಗಳ ಖುರ್ಚಿಯಿಂದ. ಸರ್ಕಾರಿ ವ್ಯವಸ್ಥೆ ಹಾಗೂ ಸರ್ಕಾರಿ ನೌಕರರ ತಮ್ಮ ಖುರ್ಚಿಯನ್ನು ಶುದ್ಧವಾಗಿಕೊಟ್ಟುಕೊಳ್ಳಬೇಕು. ಆಗ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ. ಅಧಿಕಾರಿಗಳು ಶುದ್ಧವಾಗಿದ್ದರೆ ವ್ಯವಸ್ಥೆಯು ಶುದ್ಧವಾಗಿರುತ್ತದೆ.

- ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು