- ತಾಲೂಕು ಕಸಾಪ - ಆರೋಗ್ಯ ಇಲಾಖೆ ಆಶ್ರಯದಲ್ಲಿ ಮುತ್ತಿನಕೊಪ್ಪದಲ್ಲಿ ಉಪನ್ಯಾಸ
ಹೆಣ್ಣು ಸಮಾಜದ ಕಣ್ಣಾಗಿದ್ದು ಹೆಣ್ಣಿಗೆ ಗೌರವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಮುತ್ತಿನಕೊಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಆಶಾ ವಿಶ್ವನಾಥ್ ತಿಳಿಸಿದರು.
ಮಂಗಳವಾರ ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಹಾಪಾಪ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಎಲ್ಲಿ ಮಹಿಳೆಯರನ್ನು ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸುತ್ತಾರೆ. ಮಹಿಳೆಯರಿಗೆ ಅಪಮಾನ ಮಾಡಿದರೆ, ದೌರ್ಜನ್ಯ ಮಾಡಿ ನಂತರ ಯಾಗ, ಯಜ್ಞಾಧಿಗಳನ್ನು ಮಾಡಿದರೂ ಅಲ್ಲಿ ದೇವತೆಗಳು ನೆಲೆಸಲ್ಲ. ಇಂದಿನ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನ ಮಾನ ಸಿಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.ಸ್ತ್ರೀಯರು ಸಂತೋಷದಿಂದ ಬದುಕಿದರೆ ಅವಳ ಕುಟುಂಬ ಸಂತೋಷದಿಂದ ಇರುತ್ತದೆ. ಕುಟುಂಬದ ಜವಬ್ದಾರಿಯನ್ನು ಹೊರುವ ಹೆಣ್ಣು ತಾಯಿಯಾಗಿ, ಪತ್ನಿಯಾಗಿ, ಸಹೋದರಿಯಾಗಿ, ಮಗಳಾಗಿ ತನ್ನ ಕರ್ತವ್ಯವನ್ನು ಅತ್ಯಂತ ಜವಬ್ದಾರಿ ಯಿಂದ ನಿರ್ವಹಿಸುತ್ತಾಳೆ ಎಂದರು.
ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಸುರೇಶ್ ಮಾತನಾಡಿ, ಪ್ರತಿಯೊಬ್ಬ ಯಶಸ್ಸಿನ ಪುರುಷನ ಹಿಂದೆ ಮಹಿಳೆ ಪಾತ್ರವಿದೆ. ಪ್ರತಿಯೊಂದು ಸಂಸಾರದಲ್ಲೂ ಹೆಣ್ಣೇ ಸರ್ವಸ್ವ. ಹೆಣ್ಣು ಭ್ರೂಣ ಹತ್ಯೆ ಮಹಾ ಪಾಪ ವಾಗಿದ್ದು ಭ್ರೂಣ ಹತ್ಯೆ ಯನ್ನು ಎಲ್ಲರೂ ಖಂಡಿಸಬೇಕು. ಭ್ರೂಣ ಹತ್ಯೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಅತಿಥಿಗಳಾಗಿ ಕಸಾಪ ಕಸಬಾ ಹೋಬಳಿ ಅಧ್ಯಕ್ಷೆ ಜುಬೇದ, ಜ್ವಾಲಾಮಾಲಿನಿ ಜೇಸಿ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಕೆ.ಗಂಗಾಧರ್. ಕಸಾಪ ಖಜಾಂಚಿ ಕೆ.ಎಸ್.ರಾಜಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್ ಇದ್ದರು.