ಕಾನೂನಾತ್ಮಕ ದಾರಿಯಲ್ಲಿ ಸಾಗಿದರೆ ನೆಮ್ಮದಿಯ ಬದುಕು: ನ್ಯಾ.ಮಂಜುನಾಥ ನಾಯಕ್ ಅಭಿಮತ

KannadaprabhaNewsNetwork |  
Published : Oct 07, 2024, 01:40 AM IST
ಪೊಟೋ: 5ಎಸ್‌ಎಂಜಿಕೆಪಿ02ಶಿವಮೊಗ್ಗದ ಮಹಾತ್ಮಗಾಂಧೀ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಜಾಗೃತಿ ಕಾರ್ಯಕ್ರಮ ಹಾಗೂ ಸರ್ಕಾರ  ಮಹಿಳಾ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ನೀಡುವ ಜಿಲ್ಲಾ ಮಟ್ಟದ ಕಾರ್ಯಗಾರ ಉದ್ಘಾಟಿಸಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಮಾತನಾಡಿದರು.  | Kannada Prabha

ಸಾರಾಂಶ

ಶಿವಮೊಗ್ಗದ ಮಹಾತ್ಮಗಾಂಧೀ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ ಸಭಾಂಗಣದಲ್ಲಿ ಶನಿವಾರ ಕಾನೂನು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜೀವನದಲ್ಲಿ ಗುರಿ ಸಾಧಿಸಲು ಕಾನೂನಾತ್ಮಕವಾಗಿ ಸರಿದಾರಿಯಲ್ಲಿ ಸಾಗಬೇಕು. ಆಗ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ರಾದ ಮಂಜುನಾಥ ನಾಯಕ್ ತಿಳಿಸಿದರು.

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನವದೆಹಲಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಶಿವಮೊಗ್ಗ, ಮಹಾನಗರ ಪಾಲಿಕೆ ಶಿವಮೊಗ್ಗ, ಜಿಲ್ಲಾ ಸ್ವಯಂ ಸೇವಾಸಂಸ್ಥೆಗಳ ಒಕ್ಕೂಟ ಹಾಗೂ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ ಸಹಯೋಗ ದಲ್ಲಿ ಶಿವಮೊಗ್ಗದ ಮಹಾತ್ಮಗಾಂಧೀ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಜಾಗೃತಿ ಕಾರ್ಯಕ್ರಮ ಹಾಗೂ ಸರ್ಕಾರ ಮಹಿಳಾ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ನೀಡುವ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿಯವರು ಮಾತನಾಡಿ, ಶಿವಮೊಗ್ಗ ನಗರದಲ್ಲಿ ದಿನೇ ದಿನೇ ಹೊಸ ಹೊಸ ಬಡಾವಣೆಗಳು ಬೆಳೆಯುತ್ತಿದ್ದು, ಜೊತೆಗೆ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಗಟ್ಟಲು ನಗರದ ಎಲ್ಲಾ ಬಡಾವಣೆಗಳಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸಿಸಿಟಿವಿ ಅಳವಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಜಿಲ್ಲಾ ವಾರ್ತಾಧಿಕಾರಿಗಳು ಮತ್ತು ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸದಸ್ಯರಾದ ಬಿ. ಎಸ್. ತಿನ್ನೋಲಿರವರು ಮಾತನಾಡಿ, ಕಾನೂನು ಎಂಬ ಪದದ ಅರ್ಥ‘ಸಾಮಾನ್ಯ ತಿಳಿವಳಿಕೆ’ಎಂಬುದಾಗಿದ್ದು, ಪ್ರತಿಯೊಬ್ಬ ಮನುಷ್ಯರು ನೆಲದ ಕಾನೂನುಗಳ ಬಗ್ಗೆ ಸಾಮಾನ್ಯ ತಿಳುವಳಿಕೆ ಹೊಂದಿದಾಗ ಪ್ರಜ್ಞಾವಂತ ನಾಗರೀಕರಾಗಿ ಬಾಳಲು ಸಾಧ್ಯ. ಈ ದಿಶೆಯಲ್ಲಿ ಮಹಿಳೆಯರು ಸಹ ಕಾನೂನಿನ ಸಾಮಾನ್ಯ ತಿಳಿವಳಿಕೆ ಹೊಂದುವುದು ಅತ್ಯಗತ್ಯ ವಾಗಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್ ಮಾತನಾಡಿ, ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ದೈಹಿಕ ದೌರ್ಜನ್ಯಗಳು ನಡೆಯುತ್ತಿದ್ದು, ಇವುಗಳನ್ನು ತಡೆಗಟ್ಟಲು ಮನೆಯೊಳಗಿರುವ ಮಹಿಳೆ ಕಾನೂನು ತಿಳಿವಳಿಕೆ ಹೊಂದುವ ಜೊತೆಗೆ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿದರೆ ಮಕ್ಕಳು ಕಾನೂನು ಪರಿಪಾಲನೆ ಮಾಡಿ ಎಲ್ಲರ ಬಾಳು ಹಸನಾಗಲು ಸಾಧ್ಯ ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಆಯುಕ್ತ ಡಾ.ಕವಿತಾ ಯೋಗಪ್ಪನವರ್ ಮಾತನಾಡಿ, ಮಹಿಳೆ ಅಬಲೆಯಲ್ಲ ಸಬಲೆ. ನಮ್ಮ ಮನಸ್ಸಿನಲ್ಲಿ ನಾವೇ ಕೀಳರಿಮೆಯ ಬೇಲಿ ಹಾಕಿಕೊಳ್ಳದೆ, ಇರುವ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ನ ನಿರ್ದೇಶಕ ಕೆ.ಸಿ. ಬಸವರಾಜ್ ಮಹಿಳೆಯರು ಶಿಕ್ಷಣ, ಸಾಕ್ಷರತೆ ಹೊಂದುವ ಜೊತೆಗೆ ಕಾನೂನಿನ ಜ್ಞಾನವನ್ನು ಪಡೆದು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಜೊತೆಗೆ ಸಮಾಜದಲ್ಲಿ ಪ್ರಗತಿ ಹಾಗೂ ಸಾಮರಸ್ಯ ಸಾಧಿಸಲು ಪ್ರಯತ್ನಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ "ವಿಧಾನ್ಸೇ ಸಮಾಧಾನಾ " ಕುರಿತು ಹಾಗೂ ಮಹಿಳಾ ಸಬಲೀಕರಣ ಕುರಿತು ಆಡಿಯೋ ವಿಡೀಯೋ ಪ್ರದರ್ಶನ ನಡೆಯಿತು. ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಿಂದ ಬಂದಿದ್ದ ಮಹಿಳೆಯರು ಕಾರ್ಯಾಗಾರದಲ್ಲಿ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ವಕೀಲರಾದ ಎಚ್.ಪ್ರಶಾಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ ಶಶಿರೇಖಾ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಮಹಾನಗರ ಪಾಲಿಕೆ ಅಧಿಕಾರಿ ಅನುಪಮರವರು ಪ್ರಾರ್ಥಿಸಿದರು. ಫೆವೋಸ್ ಕಾರ್ಯದರ್ಶಿ ನಟರಾಜ್ ರವರು ವಂದಿಸಿದರು. ಮಹಾತ್ಮ ಗಾಂಧೀ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಉಷಾರಾವ್ ಕಾರ್ಯಕ್ರಮ ನಿರೂಪಣೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ