ಕನ್ನಡಪ್ರಭವಾರ್ತೆ ತಿಪಟೂರು
ನಗರದ ಕಲ್ಪತರು ವಿದ್ಯಾಸಂಸ್ಥೆಯ ಕಲ್ಪತರು ಸೆಂಟ್ರಲ್ ಶಾಲೆಯಲ್ಲಿ ಆಯೋಜಿಸಿದ್ದ ಕಲ್ಪಜ್ಞಾನ ವೈಭವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜ್ಞಾನ ಮತ್ತು ಪ್ರತಿಭೆ ಅನಾವರಣಕ್ಕೆ ವಸ್ತು ಪ್ರದರ್ಶನ ಉತ್ತಮ ವೇದಿಕೆಯಾಗಿದೆ. ಶೈಕ್ಷಣಿಕ ಕ್ಷೇತ್ರವು ಸ್ಪರ್ಧಾತ್ಮಕ ಕ್ಷೇತ್ರವಾಗಿ ರೂಪುಗೊಳ್ಳುತ್ತಿದ್ದು, ಕೇವಲ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಏರ್ಪಟ್ಟಿದ್ದು ತಾಂತ್ರಿಕತೆಯೊಂದಿಗೆ ನಿಮ್ಮಲ್ಲಿರುವ ಪ್ರತಿಭೆಯನ್ನು ವ್ಯಕ್ತಪಡಿಸಬೇಕು. ಮಕ್ಕಳ ಬೌದ್ಧಿಕ ಮಟ್ಟ ಸುಧಾರಣೆಗೆ ಪ್ರತಿವರ್ಷವೂ ಈ ಶಾಲೆಯಲ್ಲಿ ವಸ್ತುಪ್ರದರ್ಶನ ಆಯೋಜಿಸುವ ಮೂಲಕ ಪ್ರೋತ್ಸಾಹಿಸುತ್ತಿರುವುದು ಕಾರ್ಯ ಶ್ಲಾಘನೀಯ ಎಂದರು. ತಹಸೀಲ್ದಾರ್ ಮೋಹನ್ಕುಮಾರ್ ಮಾತನಾಡಿ ಮಕ್ಕಳು ಜ್ಞಾನ ಮತ್ತು ಸಾಮಾಜಿಕ ಮೌಲ್ಯ ಬೆಳೆಸಿಕೊಳ್ಳಲು ಇದು ಸಹಕಾರಿಯಾಗಿದೆ. ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆರಡೂ ಮುಖ್ಯವಾಗಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಕಲೆ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಜೊತೆಗೆ ಅವರಲ್ಲಿರುವ ಸಾಂಸ್ಕೃತಿಕ ಪ್ರತಿಭೆಗೂ ಹೆಚ್ಚು ಒತ್ತು ನೀಡಿ ಪ್ರೋತ್ಸಾಹಿಸಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ಕಲ್ಪತರು ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ ಮಾತನಾಡಿ, ಮಕ್ಕಳಲ್ಲಿನ ವೈಜ್ಞಾನಿಕ ಮನೋಭಾವವನ್ನು ಬಿತ್ತರಿಸುವುದರ ಜೊತೆಗೆ ಅವರ ಪರಿಶ್ರಮ, ಆಸಕ್ತಿ, ಶ್ರದ್ಧೆ, ಪ್ರಾಮಾಣಿಕತೆಗೆ ಈ ವಸ್ತುಪ್ರದರ್ಶನ ಕೈಗನ್ನಡಿಯಾಗಿದೆ. ನಮ್ಮ ಶಾಲೆಯ ಮಕ್ಕಳಲ್ಲದೆ ಬೇರೆ ಶಾಲೆಯ ಮಕ್ಕಳು, ಶಿಕ್ಷಕರು ಸಹ ಈ ವಸ್ತು ಪ್ರದರ್ಶನವನ್ನು ನೋಡುವ ಅವಕಾಶ ನೀಡಲಾಗಿದೆ. ಶಿಕ್ಷಕರ ಮತ್ತು ಪೋಷಕರ ಮಾರ್ಗದರ್ಶನದಲ್ಲಿ ಉತ್ತಮವಾಗಿ ವಸ್ತುಪ್ರದರ್ಶನ ತಯಾರಿಸಿದ್ದು, ಮಕ್ಕಳ ಆಸಕ್ತಿ ಹೀಗೆ ಮುಂದುವರೆಯಲಿ ಎಂದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ತಾರಮಣಿ, ತುರುವೇಕೆರೆ ಇಂಡಿಯನ್ ಪಬ್ಲಿಕ್ ಶಾಲೆಯ ಆಡಳಿತಾಧಿಕಾರಿ ರುದ್ರಯ್ಯ ಹಿರೇಮಠ್, ಕೆವಿಎಸ್ ಉಪಾಧ್ಯಕ್ಷರುಗಳಾದ ಬಿ.ಎಸ್. ಉಮೇಶ್, ಬಿ.ಎಸ್.ನಟರಾಜು, ಟಿ.ಎಸ್.ಬಸವರಾಜು, ಜಿ.ಪಿ.ದೀಪಕ್, ಕಾರ್ಯದರ್ಶಿಗಳಾದ ಎಂ.ಆರ್. ಸಂಗಮೇಶ್, ಟಿ.ಯು.ಜಗದೀಶಮೂರ್ತಿ, ಜಿ.ಎಸ್.ಉಮಾಶಂಕರ್, ಎಚ್.ಜಿ.ಸುಧಾಕರ್, ಖಜಾಂಚಿ ಟಿ.ಎಸ್.ಶಿವಪ್ರಸಾದ್, ಪ್ರಾಂಶುಪಾಲೆ ದೇವಿಕ ಬಿ ಸ್ವಾಮಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗದವರಿದ್ದರು.