ಕನ್ನಡಪ್ರಭ ವಾರ್ತೆ ಕೊಪ್ಪಳ
ನಗರದಲ್ಲಿ ನಡೆದ 10ನೇ ಮೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಉಳಿಸಲು ಮತ್ತು ರಕ್ಷಣೆ ಮಾಡಲು ಮತ್ತೊಂದು ಸ್ವಾತಂತ್ರ್ಯ ಹೋರಾಟವಾಗುವ ಅಗತ್ಯವಿದೆ. ಕವಿ, ಸಾಹಿತಿಗಳು ಕೇವಲ ಬರೆದರೆ ಸಾಲದು, ಬರೆದಂತೆ ತಾವು ಇರಬೇಕು ಮತ್ತು ಅದರಂತೆಯೇ ನಡೆಯಬೇಕು ಎಂದರು.
ಗೋಮುಖ ವ್ಯಾಘ್ರಗಳಾಗಿರುವವರ ಮುಖವಾಡ ಕಳಚುವ ಕಾಲ ಬಂದಿದೆ. ಇನ್ನು ಸುಮ್ಮನೇ ಕುಳಿತುಕೊಳ್ಳಲು ಆಗುವುದಿಲ್ಲ. ಸಂವಿಧಾನ ರಚಿಸಿ, ನಮಗೆ ಶಕ್ತಿ ಕೊಟ್ಟಿರುವ ಬಾಬಾ ಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ನಡೆಯಬೇಕಾಗಿದೆ. ಅದೇ ಸಂವಿಧಾನ ಅಪಾಯದಲ್ಲಿರುವುದರಿಂದ ಎಲ್ಲರೂ ಜಾಗೃತರಾಗಿ, ಹೋರಾಟ ಮಾಡಬೇಕಾಗಿದೆ ಎಂದರು.ಹತ್ತು ವರ್ಷಗಳ ಕಾಲ ಮಹಿಳಾ ಮೀಸಲಾತಿಯನ್ನು ನೀಡದವರು ಈಗ ಸರ್ಕಾರ ಮುಗಿಯುವ ವೇಳೆಗೆ ಮುಂದಿನ ಚುನಾವಣೆಗೆ ಮೀಸಲಾತಿ ಪ್ರಕಟ ಮಾಡುತ್ತಾರೆ. ಇವರು ಮಹಿಳೆಗೆ ಮೀಸಲಾತಿ ನೀಡುವ ನಿಜವಾದ ಕಾಳಜಿ ಇದ್ದವರಾ ಎಂದು ಪ್ರಶ್ನೆ ಮಾಡಿದರು.
ಎಲ್ಲ ಧರ್ಮಗಳಿಗೂ ಸಮಾನ ಹಕ್ಕು, ಅವಕಾಶಗಳಿವೆ ಎಂದು ಸುಪ್ರೀಂ ಕೋರ್ಟು ಈ ದಿಸೆಯಲ್ಲಿ ಹಲವಾರು ತೀರ್ಪುಗಳನ್ನು ನೀಡಿದೆ. ಚುನಾವಣಾ ಬಾಂಡ್ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು ಎಂದು ಪ್ರಶ್ನೆ ಮಾಡಿದ ಅವರು, ಕಾರ್ಪೋರೇಟ್ ವಲಯದಿಂದ ರಾಜಕೀಯ ಪಕ್ಷಗಳಿಗೆ ಹಣ ನೀಡುವುದು ಭ್ರಷ್ಟ ವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂದರು.
ವಿಶೇಷ ಉದ್ಘಾಟನೆ:ಸಮಾಜದ ವಿವಿಧ ಅಲೆಮಾರಿ ಸಮುದಾಯಗಳಿಗೆ ಸೇರಿದ ಜನಸಾಮಾನ್ಯರಾದ ಬಸಮ್ಮ, ಜಂಬವ್ವ, ದುರ್ಗವ್ವ, ಶೋಭಾ ಮಠ , ಫಕೀರಜ್ಜ ಮತ್ತು ಮಕ್ಕಳು ಸಂವಿಧಾನದ ಪ್ರಸ್ತಾವನೆಯನ್ನು ಅತಿಥಿಗಳಿಗೆ ಸಲ್ಲಿಸಿ, ರಮೇಶ ಗಬ್ಬೂರ ನೇತೃತ್ವದಲ್ಲಿ ಎಲ್ಲರೂ ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಮೇ ಸಾಹಿತ್ಯ ಸಮ್ಮೇಳಕ್ಕೆ ಚಾಲನೆ ನೀಡಲಾಯಿತು.ಬಸವರಾಜ ಹೂಗಾರ ಪ್ರಾಸ್ತಾವಿಕ ಮಾತನಾಡಿದರು. ಜೆ. ಭಾರದ್ವಾಜ, ಕೆ. ವೆಂಕಟರಾಜು, ಮಹ್ಮದ್ ಬೇಗಂ, ಬಸವರಾಜ ಸೂಳಿಬಾವಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರ, ಟಿ. ರತ್ನಾಕರ, ಎ.ವಿ. ಕಣವಿ ಉಪಸ್ಥಿತರಿದ್ದರು.ಡಿ.ಎಂ. ಬಡಿಗೇರ ಸ್ವಾಗತಿಸಿ, ಸಂಗಮೇಶ ಮೆಣಸಿನಕಾಯಿ, ಅಖಿಲಾ ವಿದ್ಯಾಸಂದ್ರ ನಿರೂಪಿಸಿದರು.
ಆರ್ಸಿಎಫ್ ಕಲಾತಂಡ ಸಿಂಧನೂರು, ದಲಿತ ಕಲಾ ಮಂಡಳಿ, ಇಪ್ಟಾ ಕರ್ನಾಟಕ, ಅರುಣೋದಯ ಕಲಾ ತಂಡ ಕೊತಬಾಳ, ಶರಣ ಕಲಾಬಳಗ ಗಂಗಾವತಿ, ಸಾಂಬಯ್ಯ ಹಿರೇಮಠ ಮತ್ತು ತಂಡ ಹರ್ಲಾಪುರ-ಕುಂದಗೋಳ, ಡಿಂಗ್ರಿ ಭರತ್, ಮರಿಯಮ್ಮ ಚೂಡಿ, ಗೌರಿ ಗೋನಾಳ, ನಾದ ಮಣಿನಾಲ್ಕೂರು ಮತ್ತಿತರ ಕಲಾವಿದರಿಂದ ಹೋರಾಟದ ಹಾಡುಗಳು, ಜನಪರ ಗೀತೆಗಳು ಮೊಳಗಿದವು.