ಬಸವರಾಜ ಹಿರೇಮಠ
ಹಲವು ವರ್ಷಗಳ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಯ ಸ್ಥಾನಮಾನ ಸಿಗುವುದು ಬಹುತೇಕ ಪಕ್ಕಾ ಆಗಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಪ್ರತ್ಯೇಕ ಪಾಲಿಕೆಯ ವಿಷಯ ಚರ್ಚೆಯಾಗಿದ್ದು, ಆಶಾದಾಯಕ ಬೆಳವಣಿಗೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರು ಜಿಲ್ಲೆಯ ಶಾಸಕರ ಹಾಗೂ ಧಾರವಾಡ ಜನತೆಯ ಬೇಡಿಕೆಯಂತೆ ನಿಯಮಾನುಸಾರ ಅರ್ಹತೆಯನ್ನು ಪರಿಶೀಲಿಸಿ, ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ರಚಿಸಲು ಕ್ರಮಕೈಗೊಳ್ಳಲು ಸ್ಪಷ್ಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಧಾರವಾಡ ಜನರು ಹಾಗೂ ಹೋರಾಟಗಾರರು ಸರ್ಕಾರದ ಆದೇಶಕ್ಕಾಗಿ ಮಾತ್ರ ಕಾಯುವಂತಾಗಿದೆ. ಇದಲ್ಲದೇ, ಡಿ. 16ರಂದು ಧಾರವಾಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೃಹತ್ ಕಾರ್ಯಕ್ರಮ ಆಯೋಜಿಸಿದ್ದು ಈ ಸಮಯದಲ್ಲಿ ಪ್ರತ್ಯೇಕ ಪಾಲಿಕೆಯ ಘೋಷಣೆ ಮಾಡಲಿ ಎಂಬ ಆಗ್ರಹವು ಹೋರಾಟಗಾರರಿಂದ ವ್ಯಕ್ತವಾಗಿದೆ.ಎಲ್ಲ ಮಾನದಂಡದಲ್ಲಿ ಓಕೆ
ಸದನದಲ್ಲಿ ಗಮನಸೆಳೆದ ಶಾಸಕ ಅರವಿಂದ ಬೆಲ್ಲದ
ಹು-ಧಾ ಮಹಾನಗರ ಪಾಲಿಕೆಯು ರಾಜ್ಯದ ಎರಡನೇ ಅತೀ ದೊಡ್ಡ ಪಾಲಿಕೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ದಿನದಿಂದ ದಿನಕ್ಕೆ ವೇಗವಾಗಿಯೂ ಬೆಳೆಯುತ್ತಿದೆ. ಸಮೀಪದ ಅನೇಕ ಹಳ್ಳಿಗಳು ಪಾಲಿಕೆಗೆ ಹತ್ತಿರದಲ್ಲಿವೆ. ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿದ್ದು, ಈ ಪ್ರದೇಶದಲ್ಲಿ ಕೈಗಾರಿಕೆ, ವಸತಿ ಹಾಗೂ ಶೈಕ್ಷಣಿಕ ಕ್ಷೇತ್ರದ ಎಲ್ಲಾ ಕ್ಷೇತ್ರಗಳು ಬೃದಾಕಾರವಾಗಿ ಬೆಳೆದಿವೆ. ಆದರೆ, ಸಾರ್ವಜನಿಕರ ಸಮಸ್ಯೆಗಳು ಶೀಘ್ರವಾಗಿ ಇತ್ಯರ್ಥವಾಗುತ್ತಿಲ್ಲ ಹಾಗೂ ಹಲವಾರು ಸಂಘಟನೆಗಳು ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪಿಸಬೇಕು ಎಂದು ಅಭಿಪ್ರಾಯಿಸಿವೆ. ಸಾರ್ವಜನಿಕ ಹಿತದೃಷ್ಟಿ ಹಾಗೂ ಧಾರವಾಡದ ಜನರ ಸರ್ವತೋಮುಖ ಅಭಿವೃದ್ಧಿಯಿಂದ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾನ ನೀಡುವಂತೆ ಬೆಲ್ಲದ ಆಗ್ರಹಿಸಿದ್ದರು.
ಏತನ್ಮಧ್ಯೆ, ಈ ವಿಷಯವಾಗಿ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ಸಹ ಮಾಡಲಾಗುವುದು ಎಂದಿದ್ದಾರೆ. ಈ ಎಲ್ಲ ಬೆಳವಣಿಗೆ ಗಮನಿಸಿದರೆ ಕಾಂಗ್ರೆಸ್ ಸರ್ಕಾರ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾನ ಒದಗಿಸುವ ಎಲ್ಲ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.
ಧಾರವಾಡದ ಅಭಿವೃದ್ಧಿ ಹಿನ್ನೆಲೆಯಲ್ಲಿ ಪ್ರತ್ಯೇಕ ಪಾಲಿಕೆಯ ಹೋರಾಟದ ಭಾಗವಾಗಿ ನಗರಾಭಿವೃದ್ಧಿ ಸಚಿವರು ಸದನದಲ್ಲಿ ಆಶಾದಾಯಕ ಉತ್ತರ ನೀಡಿದ್ದು ಧಾರವಾಡದ ಪಾಲಿಗೆ ಸುಸಂದರ್ಭ. ಡಿ. 13ರ ಬುಧವಾರ ಮುಖ್ಯಮಂತ್ರಿಗಳ ಜೊತೆಗೆ ಜಿಲ್ಲೆಯ ಶಾಸಕರ ಸಭೆ ನಿಗದಿಯಾಗಿದೆ ಎಂಬ ಮಾಹಿತಿಯೂ ಇದೆ. ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಎಲ್ಲ ಶಾಸಕರು ಪ್ರತ್ಯೇಕ ಪಾಲಿಕೆಗೆ ಸಮ್ಮತಿ ತೋರಿದ್ದಾರೆ. ಮುಖ್ಯಮಂತ್ರಿಗಳ ಮನವೊಲಿಸಿ ಡಿ. 16ರಂದು ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಘೋಷಣೆ ಮಾಡಿಸುವ ಜವಾಬ್ದಾರಿಯನ್ನು ಜಿಲ್ಲೆಯ ಶಾಸಕರು ಹೊರಬೇಕೆಂದು ಹೋರಾಟ ಸಮಿತಿಯ ಮುಖಂಡ ರವಿ ಮಾಳಿಗೇರ ಆಗ್ರಹಿಸಿದರು.