ಕುರಿ ಕಾಯುವ ಪುತ್ರನಿಗೆ ಯುಪಿಎಸ್‌ಸಿಯಲ್ಲಿ 910ನೇ ಕಿರೀಟ!

KannadaprabhaNewsNetwork |  
Published : Apr 23, 2025, 12:36 AM IST
ಕಕಕಕ | Kannada Prabha

ಸಾರಾಂಶ

ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅದಮ್ಯ ವಿಶ್ವಾಸ. ತಂದೆ-ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ್‍ಯಾಂಕ್‌ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅದಮ್ಯ ವಿಶ್ವಾಸ. ತಂದೆ-ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ್‍ಯಾಂಕ್‌ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ‌ ಮಾಡಿದ್ದಾರೆ.

ಯುಪಿಎಸ್ಸಿಯಲ್ಲಿ ಮಗ ಪಾಸ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕೊಡ್ಲಿವಾಡದ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಪ್ಪ ಯಲ್ಲಪ್ಪ, ಅವ್ವ ಕಾಳವ್ವ, ಪತ್ನಿ ಯಶೋಧಾ, ಸಹೋದರ ಆನಂದ ಸೇರಿ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇರಲಿಲ್ಲ. ಅಲ್ಲದೇ ಇಡೀ ಊರಿಗೆ ಊರೇ ಹನುಮಂತನ ಸಾಧನೆಗೆ ಹೆಮ್ಮೆ ಪಡುತ್ತಿದೆ. ಹನುಮಂತ ಅವರ ಅಪ್ಪ ಮತ್ತು ಸಹೋದರ ಕುರಿ ಕಾಯುತ್ತಾ ಕೃಷಿ ಕಾಯಕ ಮಾಡುತ್ತಾರೆ. ಅವ್ವ ಅವರಿಗೆ ಸಹಾಯ ಮಾಡುತ್ತಾರೆ. ಮನೆಯಲ್ಲಿ ಬಡತನ ಹಾಸಿ ಹೊದ್ದಿದೆ. ಎಲ್ಲವನ್ನು ಮೆಟ್ಟಿ ನಿಂತು ಹನುಮಂತ ಯುಪಿಎಸ್ಸಿ ಪಾಸ್ ಆಗುವ ಮೂಲಕ ತಂದೆ-ತಾಯಿ ಹೆಮ್ಮೆ ಪಡುವ ಸಾಧನೆಗೈದಿದ್ದಾರೆ.ಹನುಮಂತ ಅವರು, 1 ರಿಂದ 7ನೇ ತರಗತಿಯವರೆಗೆ ಸ್ವಗ್ರಾಮ ಕೊಡ್ಲಿವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತಿದ್ದು, 8-10ನೇ ತರಗತಿ ಸತ್ತಿಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಗಿಸಿದ್ದಾರೆ. ಪಿಯುಸಿ ಧಾರವಾಡದ ಕೆಸಿಡಿ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದರೆ, ಬೆಳಗಾವಿ ಗೋಗಟೆ‌ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಪಡೆದಿದ್ದಾರೆ.

8ನೇ ಪ್ರಯತ್ನದಲ್ಲಿ ಪಾಸ್‌:

8ನೇ ಪ್ರಯತ್ನದಲ್ಲಿ ಪಾಸ್ ಆಗಿದ್ದೇನೆ. ಬಹಳ ಖುಷಿಯಾಗುತ್ತಿದೆ. ಮೂರು ಬಾರಿ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆದಿದ್ದೆ. ಕೆಪಿಎಸ್ಸಿ ಮುಖ್ಯ ಪರೀಕ್ಷೆಗೂ ಓದುತ್ತಿದ್ದೆ. ನನ್ನ ಈ ಸಾಧನೆ ತಂದೆ-ತಾಯಿಗೆ ಅರ್ಪಿಸುತ್ತೇನೆ. ಚಿಕ್ಕಂದಿನಲ್ಲಿ ಚಿಕ್ಕಂದಿನಲ್ಲಿ ಸತ್ತಿಗೇರಿ ಹಾಸ್ಟೇಲ್ ವಾರ್ಡನ್ ಎಸ್.ಕೆ.ಪಾಟೀಲ ಅವರೇ ನನಗೆ ಯುಪಿಎಸ್ಸಿ ಪರೀಕ್ಷೆ ಬಗ್ಗೆ ಮಾರ್ಗದರ್ಶನ ನೀಡಿದ್ದರು. ನನಗೆ ಸಹಾಯ ಮಾಡಿದ ಎಲ್ಲರಿಗೂ‌ ನಾನು ಚಿರಋಣಿ ಆಗಿದ್ದೇನೆ ಎಂದು ಯುಪಿಎಸ್ಸಿ ಟಾಪರ್ ಹನುಮಂತ ನಂದಿ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಗೋಗಟೆ‌ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಪಡೆರುವ ಹನುಮಂತಪ್ಪ ಯಲ್ಲಪ್ಪ ನಂದಿಯವರು ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ್‍ಯಾಂಕ್‌ ಪಡೆದಿರುವುದು ಸಂಸ್ಥೆಗೆ ಗೌರವ ತಂದಿದೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಯುಳ್ಳವರಾಗಿದ್ದು, ಅದಕ್ಕೆ ಬೇಕಾದ ವಾತಾವರಣ ನಮ್ಮ ಕಾಲೇಜಿನಲ್ಲಿ ಕಲ್ಪಿಸಲಾಗಿದೆ. ಕೇವಲ ಇಂಜನಿಯರ್‌ರಾಗಿ ಹೊರಹೊಮ್ಮುವುದಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಯಾಗಲೆಂದು ಹಾರೈಸುತ್ತೇವೆ. ಸಂಸ್ಥೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.

-ಡಾ.ಎಂ.ಎಸ್‌.ಪಾಟೀಲ,

ಪ್ರಾಂಶುಪಾಲರು, ಗೋಗಟೆ ಇಂಜನಿಯರಿಂಗ್‌ ಕಾಲೇಜು ಬೆಳಗಾವಿ.

ಸಮಾಜದಲ್ಲಿ ಬಡವರು, ನೊಂದವರಿಗೆ ಒಳ್ಳೆಯ ಸೇವೆ ಸಲ್ಲಿಸುವ ಅಭಿಲಾಷೆ ಇದೆ. ಭಾರತೀಯ ರೈಲ್ವೇ ಸೇವೆ ಅಥವಾ ಭಾರತೀಯ ಕಂದಾಯ ಸೇವೆಯಲ್ಲಿ ಉನ್ನತ ಹುದ್ದೆ ಸಿಗುವ ನಿರೀಕ್ಷೆ ಇದೆ. ಯಾವುದೇ ಹುದ್ದೆ ಸಿಕ್ಕರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ಹನುಮಂತಪ್ಪ ಯಲ್ಲಪ್ಪ ನಂದಿ,

ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ್‍ಯಾಂಕ್‌ ಪಡೆದ ಸಾಧಕ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ