ಕಾರ್ಖಾನೆ ಲಿಫ್ಟನಲ್ಲಿ ಶಾರ್ಟ್‌ ರ್ಕ್ಯೂಟ್‌; ಕಾರ್ಮಿಕ ಸಜೀವ ದಹನ

KannadaprabhaNewsNetwork | Published : Aug 8, 2024 1:37 AM

ಕನ್ನಡಪ್ರಭ ವಾರ್ತೆ ಬೆಳಗಾವಿ ಕಾರ್ಖಾನೆಯ ಲಿಫ್ಟ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಾರ್ಮಿಕನೋರ್ವ ಸಚಿವ ದಹನವಾಗಿದ್ದು, ಮೂವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹಂ ಕಾರ್ಖಾನೆಯಲ್ಲಿ ಅವಘಡ । ಮೂವರ ಸ್ಥಿತಿ ಗಂಭೀರಕನ್ನಡಪ್ರಭ ವಾರ್ತೆ ಬೆಳಗಾವಿ

ಕಾರ್ಖಾನೆಯ ಲಿಫ್ಟ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಾರ್ಮಿಕನೋರ್ವ ಸಚಿವ ದಹನವಾಗಿದ್ದು, ಮೂವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.ಬೆಳಗಾವಿಯ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ (20) ಮೃತ ಕಾರ್ಮಿಕನಾಗಿದ್ದು, ಲಿಫ್ಟ್‌ನಲ್ಲಿ ಸುಟ್ಟುಕರಕಲಾದ ಸ್ಥಿತಿಯಲ್ಲಿ ಮೃತದೇವ ಪತ್ತೆಯಾಗಿದೆ. ಬೆಳಗಾವಿ ತಾಲೂಕಿನ ಕ‍ವಳೇವಾಡಿಯ ಮಾರುತಿ ನಾರಾಯಣ ಕರವೇಕರ (32), ಜುನೇ ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಲಗುಡೆ (35) ಮತ್ತು ರಂಜೀತ ದಶರಥ ಪಾಟೀಲ (39) ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮೂವರ ಸ್ಥಿತಿಯೂ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ವಿವರ:ಕಾರ್ಖಾನೆಯ ಲಿಫ್ಟ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ. ಕಾರ್ಖಾನೆ ಒಳಗಡೆ ಇದ್ದ ಹಲವು ಕಾರ್ಮಿಕರು ದಿಕ್ಕಾಪಾಲಾಗಿ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಬೆಂಕಿಯಲ್ಲಿ ಬೆಂದಿದ್ದ ಮೂವರನ್ನು ಹೊರಕ್ಕೆ ಎಳೆತಂದು ರಕ್ಷಣೆ ಮಾಡಲಾಯಿತು ಎಂದು ಪತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಸ್ಥಳಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಕೋಣಿ ನೇತೃತ್ವದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಮೃತ ಕಾರ್ಮಿಕನ ಮೃತದೇಹ ಪರಿಶೀಲಿಸಿದರು.ಸತತ 14 ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ:ಬೆಂಕಿ ಕೆನ್ನಾಲಿಗೆ ಭೀಕರವಾಗಿತ್ತು. ನೋಡ ನೋಡುತ್ತಿದ್ದಂತೆಯೇ ಬೆಂಕಿ ಧಗಧಗನೇ ಹೊತ್ತಿ ಉರಿಯತೊಡಗಿತು. ಅಗ್ನಿ ಶಾಮಕ ವಾಹನಗಳು ಹತ್ತಿರ ಸುಳಿಯಲೂ ಸಾಧ್ಯವಾಗಿಲ್ಲ. ಬೆಂಕಿ ನಂದಿಸಿಲು ಪೊಲೀಸರು ಗ್ರಾಮಸ್ಥರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಮಾಡಿದರು. ಬೆಂಕಿ ನಂದಿಸಲು 6 ಅಗ್ನಿಶಾಮಕ ವಾಹನಗಳು, ಸಿಬ್ಬಂದಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದರೂ ಬೆಂಕಿ ನಿಯಂತ್ರಣಕ್ಕೆ ಬರಲಿಲ್ಲ. ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಖಾನೆಯ ಕಟ್ಟಡದ ಗೋಡೆ, ಕಿಟಕಿಗಳನ್ನು ಜೆಸಿಬಿ ಯಂತ್ರದಿಂದ ಒಡೆದು ಹಾಕಿ ಒಳಗೆ ನೀರು ಚಿಮ್ಮಿಸಿ, ಬೆಂಕಿ ನಂದಿಸಲಾಯಿತು. ಸತತವಾಗಿ 14 ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದೆ.ಅವಘಡದಲ್ಲಿ ಮೃತಪಟ್ಟ ಮತ್ತು ಗಂಭೀರ ಗಾಯಗೊಂಡಿರುವ ಕಾರ್ಮಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಾಕ್ಸ್‌..ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಂತಾಪಕಾರ್ಖಾನೆ ಬೆಂಕಿ ಅವಘಡಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಘಾತ ವ್ಯಕ್ತಪಡಿಸಿದ್ದು, ಯುವಕ ಸಾವಿಗೀಡಾಗಿರುವುದಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಸೊಸೆ ಡಾ.ಹಿತಾ ಮೃಣಾಲ್‌ ಹೆಬ್ಬಾಳಕರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ಸಹಾಯ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.