ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಮಧು

KannadaprabhaNewsNetwork | Published : Mar 5, 2024 1:34 AM

ಸಾರಾಂಶ

ಸರ್ಕಾರ ನಡೆಯುತ್ತಿರುವುದೇ ಸರ್ಕಾರಿ ನೌಕರರಿಂದ. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಈಗಾಗಲೇ ಸರ್ಕಾರ ಆಯೋಗ ರಚಿಸಿದೆ. ಆ ವರದಿ ಬಂದ ನಂತರ ನಾನು ನೌಕರರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗಸರ್ಕಾರ ನಡೆಯುತ್ತಿರುವುದೇ ಸರ್ಕಾರಿ ನೌಕರರಿಂದ. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿ, ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಈಗಾಗಲೇ ಸರ್ಕಾರ ಆಯೋಗ ರಚಿಸಿದೆ. ಆ ವರದಿ ಬಂದ ನಂತರ ನಾನು ನೌಕರರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಆಶ್ವಾಸನೆ ನೀಡಿದರು.

ಸರ್ಕಾರಿ ನೌಕರರ ಹಳೆ ಪಿಂಚಣಿ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಣಾಳಿಕೆಯಲ್ಲಿ ನಾವು ಭರವಸೆ ನೀಡಿದ್ದೆವು. ಪ್ರಣಾಳಿಕೆ ಉಪಾಧ್ಯಕ್ಷನಾಗಿ ನಾನು ಇದ್ದೆ. ಹಾಗಾಗಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬರಲು ಈಗಾಗಲೇ ಮುಖ್ಯಮಂತ್ರಿ ಜತೆ ಮಾತನಾಡಿದ್ದೇನೆ. ಖಂಡಿತ ಈ ಸಮಸ್ಯೆ ಬಗೆಹರಿಸಲಾಗುವುದು. ಕಾಲಕ್ಕೆ ತಕ್ಕಂತೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಮಾತನಾಡಿ, ರಾಜ್ಯದಲ್ಲಿ 2 ಲಕ್ಷ ಸರ್ಕಾರಿ ನೌಕರರ ಹುದ್ದೆ ಖಾಲಿಯಿದ್ದು, 5 ಲಕ್ಷ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಅಕ್ಕ ಪಕ್ಕದ ರಾಜ್ಯಕ್ಕೆ ಹೋಲಿಸಿದರೆ ರಾಜ್ಯದ ಸರ್ಕಾರಿ ನೌಕರರ ವೇತನ ಕಡಿಮೆ ಇದೆ. ಅವರಿಗೆ ಆರೋಗ್ಯದ ಸರಿಯಾದ ವ್ಯವಸ್ಥೆಯಿಲ್ಲ. ಒತ್ತಡದ ಜೀವನ ನಡೆಸುವಂತಾಗಿದೆ ಎಂದರು.

ಶಾಸಕ ಎಸ್.ಎನ್.ಚನ್ನಬಸಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮೊಹನ್ ಕುಮಾರ್, ಸೂಡಾ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್, ಗೌರವ ಅಧ್ಯಕ್ಷ ಕೃಷ್ಣಮೂರ್ತಿ ಪ್ರಮುಖರಾದ ವೈ.ಎಚ್.ನಾಗರಾಜ್, ಎಸ್.ಆರ್.ನರಸಿಂಹಮೂರ್ತಿ, ಪಾಪಣ್ಣ, ಅರುಣ್‍ಕುಮಾರ್, ಪ್ರಸನ್ನ, ಸಿದ್ದಬಸಪ್ಪ, ಪರಮೇಶ್ವರಪ್ಪ, ಸತೀಶ್, ಮಧುಕೇಶವ, ಬಸವಣ್ಣಪ್ಪ ಮತ್ತಿತರರು ಇದ್ದರು.

- - - ಕೋಟ್‌ಜಿಲ್ಲೆಯಲ್ಲಿ ಸರ್ಕಾರಿ ನೌಕರರಿಗೆ ಮತ್ತು ಸಾರ್ವಜನಿಕರಿಗೆ ಸರಿಯಾದ ಕ್ರೀಡಾಂಗಣ ವ್ಯವಸ್ಥೆಯಿಲ್ಲ. ಇನ್ನೂ 70 ಸಾವಿರ ಶಿಕ್ಷಕರಿಗೆ ಮುಂಬಡ್ತಿ ದೊರಕಿಲ್ಲ. ಹೀಗೆ ಸರ್ಕಾರಿ ನೌಕರರ ಹಲವು ಸಮಸ್ಯೆಗಳಿವೆ. ನೀತಿ ಸಂಹಿತೆ ಒಳಗೆ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕಿದೆ

- ಸಿ.ಎಸ್‌.ಷಡಕ್ಷರಿ, ರಾಜ್ಯಾಧ್ಯಕ್ಷ

- - -

-27ಎಸ್‌ಎಂಜಿಕೆಪಿ04:

ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

Share this article