ಲಕ್ಕುಂಡಿಯಲ್ಲಿ ಪ್ರಚ್ಯಾವಶೇಷ ಸಂಗ್ರಹಣೆಗೆ ವಿಶೇಷ ಅಭಿಯಾನ

KannadaprabhaNewsNetwork |  
Published : Nov 18, 2024, 12:01 AM IST
ಸಭೆಯಲ್ಲಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಈಗ ಇರುವ ಐತಿಹಾಸಿಕ ವಸ್ತುಗಳನ್ನೆ ಸರಿಯಾಗಿ ಹೊಂದಿಸಿ, ಸ್ವಚ್ಛಗೊಳಿಸಿ ಇಡುವ ಕಾರ್ಯ ಆಗಬೇಕು

ಗದಗ: ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ, ಸಾಂಸ್ಕೃತಿಕ ಪಟ್ಟಿಗೆ ಸೇರಿಸಿ ಜಾಗತಿಕ ಮಟ್ಟದಲ್ಲಿ ಗುರುತಿಸುವ ಕಾರ್ಯ ಪರಿಣಾಮಕಾರಿ ಆಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಪೂರಕ ಚಟುವಟಿಕೆಗಳು ನಡೆಯಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಕ್ಕುಂಡಿಯ ತಿಪ್ಪೆಯಲ್ಲಿಯೂ ಸಹ ಐತಿಹಾಸಿಕ ಶಿಲೆಗಳು ದೊರೆಯುತ್ತವೆ. ಪ್ರತಿಯೊಬ್ಬರ ಮನೆಯಲ್ಲಿ ಒಂದಲ್ಲ ಒಂದು ಐತಿಹಾಸಿಕ ವಸ್ತು ಸಿಗುತ್ತದೆ. ಲಕ್ಕುಂಡಿಯಲ್ಲಿ ಹೊಸ ದೇವಾಸ್ಥಾನ, ಕಟ್ಟಡ ನಿರ್ಮಿಸಿ ಅಭಿವೃದ್ಧಿ ಪಡಿಸಬೇಕಾಗಿಲ್ಲ, ಈಗ ಇರುವ ಐತಿಹಾಸಿಕ ವಸ್ತುಗಳನ್ನೆ ಸರಿಯಾಗಿ ಹೊಂದಿಸಿ, ಸ್ವಚ್ಛಗೊಳಿಸಿ ಇಡುವ ಕಾರ್ಯ ಆಗಬೇಕು ಎಂದರು.

ಐತಿಹಾಸಿಕ ವಸ್ತುವಿನ ಬಗ್ಗೆ ಅರಿವಿಲ್ಲದೆ ತಮ್ಮ ಹಿತ್ತಲಳೊಗೆ ಹುಗಿದು ಬಿದ್ದಿರುವ ಶಿಲೆಗಳು, ಗೋಡೆಗಳ ಮೇಲಿರುವ ಶಾಸನಗಳಾಗಿರಬಹುದು, ನಾಣ್ಯ, ಮನೆಯ ಕೆಳಗಿರುವ ಗುಡಿ ಅಥವಾ ಬಾವಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಅಂದಾಗ ಗ್ರಾಮದ ಮೇಲಿನ ಅಭಿಮಾನದಿಂದ, ತ್ಯಾಗ ಮನೋಭಾವದಿಂದ ಸ್ವಯಂ ಪ್ರೇರಣೆಯಿಂದ ಎಲ್ಲರು ಸಹಕಾರ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಗ್ರಾಪಂ ಸದಸ್ಯರು, ಪಿಡಿಓ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಿ, ರೂಟ್ ಮ್ಯಾಪ್ ಹಾಕಿಗೊಂಡು ಅಲಂಕಾರಿಕ ಪಾಲಿಕೆ ತೆಗೆದುಕೊಂಡು ಗ್ರಾಮದ ಪ್ರತಿ ಮನೆಗಳಿಗೆ ಹೋಗಿ ಅವರ ಮನೆಯಲ್ಲಿರುವ ಐತಿಹಾಸಿಕ ವಸ್ತುಗಳನ್ನು ಅವರ ಹೆಸರಿನಲ್ಲಿ ನೋಂದಾಯಿಸಿ ಸ್ವೀಕೃತ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಈ ವಿಶೇಷ ಅಭಿಯಾನ ಎಲ್ಲ ತಂಡಗಳು ಗುರಿ ಹೊಂದಿ ಕೆಲಸ ಮಾಡಿ ಕನಿಷ್ಟ 30-40 ಪ್ರಾಚ್ಯಾವಶೇಷ ವಸ್ತುಗಳನ್ನು ಸಂಗ್ರಹ ಮಾಡುವ ಕೆಲಸ ಆಗಬೇಕು, ಸಂಗ್ರಹವಾದ ಎಲ್ಲ ಐತಿಹಾಸಿಕ ವಸ್ತುಗಳನ್ನು ಸುರಕ್ಷಿತವಾಗಿ ಒಂಡೆಡೆ ಇರಿಸಬೇಕು. ಮುಂದೆ ನಿಯಮಾನುಸಾರ ಆಯುಕ್ತರು ಕೆಲಸ ಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಐತಿಹಾಸಿಕ ಶಿಲೆ, ಶಾಸನ, ನಾಣ್ಯ ನೀಡಿದವರಿಗೆ ಪತ್ರ ನೀಡಲಾಗುತ್ತದೆ, ಪ್ರಾಚ್ಯ ಅವಶೇಷಗಳಲ್ಲಿ ಅತೀ ಸುಂದರವಾದವುಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ವಿತರಿಸಲಾಗುತ್ತದೆ, ಕನ್ನಡ ಸಂಸ್ಕೃತಿ ಇಲಾಖೆಯು ಗ್ರಾಮದ ಮನೆಗಳಲ್ಲಿರುವ ಮನೆಗೆ ತೆರಳುವ ಪಾಲಿಗೆಗಳಿಗೆ ಸಾಂಸ್ಕೃತಿಕ ತಂಡ, ಪೊಲೀಸ್ ಬ್ಯಾಂಡ್ ಒದಗಿಸಬೇಕು ಎಂದರು.

ಪ್ರವಾಸೋದ್ಯಮ ನಿರ್ದೇಶಕ ಡಾ. ಕೆ.ವಿ.ರಾಜೇಂದ್ರ ಮಾತನಾಡಿ, ಮನೆ ಮನೆಗೆ ಪಾಲಿಕೆ ತೆಗೆದುಕೊಂಡು ಹೋಗುವ ಮೊದಲೆ ಎನ್.ಸಿ.ಸಿ, ಸ್ತ್ರೀ ಶಕ್ತಿ ಗುಂಪು, ಸ್ವಯಂ ಸೇವಕರಿಗೆ ಐತಿಹಾಸಿಕ ವಸ್ತುಗಳ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ನ.22 ರಿಂದ 24ರ ವರೆಗೆ ಲಕ್ಕುಂಡಿಯಲ್ಲಿ ನಡೆಯುವ ಪ್ರಚ್ಯಾವಶೇಷ ಸಂಗ್ರಹಣಾ ಅಭಿಯಾನ ಶಿಸ್ತು ಬದ್ಧವಾಗಿ ನಡೆಯಲು ಪ್ರಾಧಿಕಾರದ ಆಯುಕ್ತರು ರೂಪರೇಷ ಸಿದ್ದಪಡಿಸಬೇಕು. ಅಲ್ಲದೇ ಸಂಗ್ರಹಿಸಿದ ಪ್ರಾಚೀನ ಅವಶೇಷಗಳನ್ನು ಸುರಕ್ಷಿತವಾಗಿ ಶೇಖರಿಸಲು ವ್ಯವಸ್ಥೆ ಕಲ್ಪಿಸಬೇಕು. ಒಟ್ಟಾರೆ ಅಭಿಯಾನ ಯಶಸ್ಸಿಗೆ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು.

ಸಭೆಯಲ್ಲಿ ಲಕ್ಕುಂಡಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿ ಸದಸ್ಯ ಸಿದ್ದು ಪಾಟೀಲ, ಗ್ರಾಪಂ ಅಧ್ಯಕ್ಷ ಪೂಜಾರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಭರತ್.ಎಸ್., ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಶರಣು ಗೊಗೇರಿ, ಎಸಿ ಗಂಗಪ್ಪ, ವೀರಯ್ಯಸ್ವಾಮಿ, ಅದ ಕಟ್ಟಿಮನಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌