ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ದಲಿತರ ಏಳಿಗೆಗೆ ಶ್ರಮಿಸಿದ ಧೀಮಂತ ವ್ಯಕ್ತಿ ಪ್ರೊ. ಬಿ.ಕೃಷ್ಣಪ್ಪ

KannadaprabhaNewsNetwork | Published : Jan 20, 2024 2:04 AM

ಶೋಷಿತರ ಪರವಾಗಿ ಹೋರಾಡಲು ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ, ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಕಾರ್ಮಿಕರು ನೀಡಿದ ತಲಾ ₹2 ಕೆಂಪುನೋಟಿನ ಹಣದಲ್ಲಿ ಇಡೀ ರಾಜ್ಯಾದ್ಯಂತ ಸಂಘಟನೆ ವಿಸ್ತರಿಸಿದ ಮಹಾನ್‌ ಜನಪರ ಹೋರಾಟಗಾರ ಪ್ರೊ. ಬಿ.ಕೃಷ್ಣಪ್ಪ. ಅವರು ಸದಾ ಕಾಲ ದಲಿತರ ಪರ ಚಿಂತನೆಗಳಿಂದ, ಅವರ ಏಳಿಗೆಗೆ ಶ್ರಮಿಸಿದ ಧೀಮಂತ ವ್ಯಕ್ತಿ ಎಂದು ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಿ.ಮೂರ್ತಿ ಭದ್ರಾವತಿಯಲ್ಲಿ ಡಿಎಸ್‌ಎಸ್ ಸುವರ್ಣ ಮಹೋತ್ಸವ ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಭದ್ರಾವತಿ

ಪ್ರೊ. ಬಿ.ಕೃಷ್ಣಪ್ಪ ಅವರು ಸದಾ ಕಾಲ ದಲಿತರ ಪರ ಚಿಂತನೆಗಳಿಂದ, ಅವರ ಏಳಿಗೆಗೆ ಶ್ರಮಿಸಿದ ಧೀಮಂತ ವ್ಯಕ್ತಿ ಎಂದು ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಿ.ಮೂರ್ತಿ ಹೇಳಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಡಿಎಸ್‌ಎಸ್ ಸುವರ್ಣ ಮಹೋತ್ಸವ ಬಹಿರಂಗ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಸ್ವಂತ ಹಣದಲ್ಲಿಯೇ ಸಂಘಟನೆ ಕಟ್ಟುವ ಜೊತೆಗೆ ನಗರದ ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಕಾರ್ಮಿಕರು ನೀಡಿದ ತಲಾ ₹2 ಕೆಂಪುನೋಟಿನ ಹಣದಲ್ಲಿ ಇಡೀ ರಾಜ್ಯಾದ್ಯಂತ ಸಂಘಟನೆ ವಿಸ್ತರಿಸಿದರು. ಆ ಮೂಲಕ ಹಲವು ಹೋರಾಟಗಳಲ್ಲಿ ಯಶಸ್ಸು ಸಾಧಿಸಿ ಶೋಷಿತರಿಗೆ ನ್ಯಾಯ ಒದಗಿಸಿಕೊಟ್ಟಿದ್ದರು ಎಂದು ಸ್ಮರಿಸಿದರು.

ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯ ಹಾಗೂ ಸಂವಿಧಾನದ ಆಧಾರದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಲಾಗಿದೆ. ಇಂಥದ್ದೊಂದು ಸಂಘಟನೆ 50 ವರ್ಷಗಳನ್ನು ಪೂರೈಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಅನೇಕ ಚಳವಳಿಗಳು ಆರಂಭಗೊಂಡು ಕೆಲ ಕಾಲದಲ್ಲಿಯೇ ನಶಿಸಿವೆ. ಆದರೆ, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ನಡುವೆ ಹುಟ್ಟಿದ ಚಳವಳಿಯಾಗಿದೆ. ಆದ್ದರಿಂದ ಇಂದಿಗೂ ಜೀವಂತವಾಗಿದೆ. ಸಾಮಾಜಿಕ ಮಾಧ್ಯಮಗಳಿಲ್ಲದ ಕಾಲದಲ್ಲಿಯೂ ಸದೃಢವಾಗಿ ಬಲಗೊಂಡ ಸಂಘಟನೆ ದಲಿತ ಸಂಘರ್ಷ ಸಮಿತಿ ಎಂದರು.

ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ದಲಿತ ಸಂಘರ್ಷ ಸಮಿತಿ ಅನೇಕ ಕಾಯ್ದೆಗಳು ರೂಪಿಸಲು ಕಾರಣವಾಗಿದೆ. ಅನೇಕ ಬಡವರ ಜಮೀನುಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಪ್ರಸ್ತುತ ದಲಿತರು ಅನೇಕ ಸೌಲಭ್ಯಗಳನ್ನು ಪಡೆಯುವಲ್ಲಿ ಸಂಘಟನೆ ಪಾತ್ರ ಪ್ರಮುಖವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್, ನಗರಸಭೆ ಸದಸ್ಯ ಚನ್ನಪ್ಪ, ಮುಖಂಡರಾದ ಈಶ್ವರಪ್ಪ, ಪ್ರಸನ್ನಕುಮಾರ್, ರಂಗನಾಥ್, ಕಾಣಿಕ್ ರಾಜ್, ಎಸ್.ಉಮಾ, ಶಾಂತಿ, ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಗಂಗಾಧರ್, ವಿ. ವಿನೋದ್, ಜಿಂಕ್‌ಲೈನ್ ಮಣಿ ಇನ್ನಿತರರು ಉಪಸ್ಥಿತರಿದ್ದರು.

ಮೆರವಣಿಗೆ:

ಸಮಾರಂಭಕ್ಕೂ ಮೊದಲು ನಗರದ ರಂಗಪ್ಪ ವೃತ್ತ, ಜೈಭೀಮ್ ನಗರದಿಂದ ಕಲಾ ತಂಡಗಳೊಂದಿಗೆ ಬಿ.ಎಚ್. ರಸ್ತೆ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಲಾಯಿತು. ಅನಂತರ ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ.ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು. ಮೆರವಣಿಗೆಯಲ್ಲಿ ಸಮಿತಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

- - - -ಡಿ19ಬಿಡಿವಿಟಿ:

ಭದ್ರಾವತಿಯಲ್ಲಿ ದಸಂಸ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಮುಖಂಡ ಜಿ.ಮೂರ್ತಿ ಚಾಲನೆ ನೀಡಿದರು. -ಡಿ19ಬಿಡಿವಿಟಿ(ಎ):

ಪ್ರೊ. ಬಿ. ಕೃಷ್ಣಪ್ಪ ಸಂಘಟಿಸಿದ ರಾಜ್ಯ ದಲಿತ ಸಂಘರ್ಷ ಸಮಿತಿ 50 ವರ್ಷ ಹಿನ್ನಲೆ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಭದ್ರಾವತಿ ನಗರದಲ್ಲಿ ಸಂಘಟನೆ ವತಿಯಿಂದ ಮೆರವಣಿಗೆ ನಡೆಸಲಾಯಿತು.