- ರಾಜ್ಯದಲ್ಲಿ ಖರೀದಿ ಕೇಂದ್ರ ಸ್ಥಾಪಿಸಲು ಈರುಳ್ಳಿ ಬೆಳೆಗಾರರ ಒತ್ತಾಯ - - -
ಮಳೆ ಕೊರತೆಯಿಂದಾಗಿ ಇಳುವರಿ ಕುಂಠಿತವಾಗಿ ಸಂಕಷ್ಟಕ್ಕೆ ಈಡಾಗಿರುವ ಈರುಳ್ಳಿ ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಬೇಕು. ಜೊತೆಗೆ, ಈರುಳ್ಳಿಗೆ ₹2500 ಬೆಂಬಲ ಬೆಲೆ ಘೋಷಿಸಿ, ಖರೀದಿ ಕೇಂದ್ರಗಳ ಮೂಲಕ ಈರುಳ್ಳಿ ಬೆಳೆ ಖರೀದಿಗೆ ಮುಂದಾಗಲಿ ಎಂದು ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಬಸವಲಿಂಗಪ್ಪ ಒತ್ತಾಯಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೀವ್ರ ಬರಗಾಲದಲ್ಲೂ ರೈತರು ಪ್ರತಿ ಎಕರೆಗೆ ₹70-₹80 ಸಾವಿರ ಖರ್ಚು ಮಾಡಿ, ಅಲ್ಲಲ್ಲಿ ಅಲ್ಪಸ್ಪಲ್ಪ ಈರುಳ್ಳಿ ಬೆಳೆದಿದ್ದರೂ ಅದಕ್ಕೆ ಬೆಲೆಯೇ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ₹2500 ಬೆಂಬಲ ಬೆಲೆ ಘೋಷಿಸಿ, ಖರೀದಿ ಕೇಂದ್ರ ಸ್ಥಾಪಿಸುವ ಮೂಲಕ ಈರುಳ್ಳಿ ಖರೀದಿಸಲಿ ಎಂದರು.ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆ ಬಾಂಗ್ಲಾ ದೇಶದಿಂದ ಈರುಳ್ಳಿಯನ್ನು ಕೇಂದ್ರ ಸರ್ಕಾರ ಆಮದು ಮಾಡಿಕೊಳ್ಳುತ್ತಿದೆ. ಇದರಿಂದಾಗಿ ಸ್ಥಳೀಯ ಈರುಳ್ಳಿ ಬೆಳೆಗಾರರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈರುಳ್ಳಿ ಖರೀದಿ ಕೇಂದ್ರ ಸ್ಥಾಪಿಸಲಾಗಿತ್ತು. ಈಗಲೂ ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸಿ, ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲಿ ಎಂದು ಮನವಿ ಮಾಡಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡಬೇಕು. ಮುಂಗಾರು ಹಂಗಾಮಿನಲ್ಲಿ ಈರುಳ್ಳಿ ಬೆಳೆಯು ಹಾನಿಗೆ ಈಡಾಗಿರುವ ಹಿನ್ನೆಲೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರವನ್ನು ಸರ್ಕಾರ ನೀಡಬೇಕು. ಯಾವುದೇ ಕಾರಣಕ್ಕೂ ಈರುಳ್ಳಿ ಬೆಳೆಗಾರರ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಬಾರದು ಎಂದು ಬಸವಲಿಂಗಪ್ಪ ಮನವಿ ಮಾಡಿದರು.
- - -
* ಈರುಳ್ಳಿ ಹಾರ ಧರಿಸಿ ಪತ್ರಿಕಾಗೋಷ್ಠಿ
- - -