ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

KannadaprabhaNewsNetwork | Published : Oct 11, 2024 11:47 PM

ಹಾರೋಹಳ್ಳಿ: ಅವ್ಯವಸ್ಥೆಗಳ ಆಗರವಾಗಿರುವ ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ , ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾರೋಹಳ್ಳಿ: ಅವ್ಯವಸ್ಥೆಗಳ ಆಗರವಾಗಿರುವ ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ , ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಏಪ್ರಿಲ್ 8ರಂದು ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಅವ್ಯವಸ್ಥೆಗಳ ಆಗರ ಶೀರ್ಷಿಕೆ ಅಡಿಯಲ್ಲಿ ಕನ್ನಡಪ್ರಭದಲ್ಲಿ ವಿಶೇಷ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಲೋಕಾಯುಕ್ತರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿತು.

ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ, ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಮೂಲಭೂತ ಸೌಕರ್ಯಗಳ ಕೊರತೆ, ಬೀದಿ ದೀಪಗಳ ದುರಸ್ತಿ ಮತ್ತು ಸಾರ್ವಜನಿಕರ ಸುರಕ್ಷತೆ ಸೇರಿದಂತೆ ಹಲವಾರು ಸಮಸ್ಯೆಗಳ ಮೇಲೆ ಕನ್ನಡಪ್ರಭ ಬೆಳಕು ಚೆಲ್ಲಿದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಸುಮೊಟೊ ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆಗೆ ನೋಟೀಸ್ ಜಾರಿ ಮಾಡಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳ ಜಂಟಿ ತಂಡ ಸ್ಥಳ ಪರಿವೀಕ್ಷಣೆ ನಡೆಸಿ ಮಾಹಿತಿ ಕಲೆ ಹಾಕಿತು.

ಈ ವೇಳೆ ಮಾತನಾಡಿದ ತಹಸೀಲ್ದಾರ್ ಶಿವಕುಮಾರ್, ಕಾರ್ಖಾನೆಗಳ ತ್ಯಾಜ್ಯ ವಿಲೇವಾರಿ ವಿಷಯವಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕೆರೆಗಳ ಬಳಿ ಕಸ ಸುರಿಯದಂತೆ ಹಾಗೂ ಜನನಿಬಿಡ ಮತ್ತು ನಿರ್ಜನ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸುವುದಾಗಿ, ರಸ್ತೆ, ಬೀದಿ ದೀಪಗಳ ದುರಸ್ತಿಯನ್ನು ಅತೀ ಶೀಘ್ರವಾಗಿ ಕೈಗೊಳ್ಳಲು ಕ್ರಮ ವಹಿಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಕೈಗಾರಿಕಾ ಪ್ರದೇಶದಲ್ಲಿನ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ಪರಿಸರ ಜಿಲ್ಲಾ ಅಧಿಕಾರಿ ಸಿ.ಆರ್.ಮಂಜುನಾಥ್ ಮಾತನಾಡಿ, ಸ್ಥಳೀಯ ಕೈಗಾರಿಕಾ ಘಟಕಗಳು ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಹಾಗೂ ತ್ಯಾಜ್ಯಗಳ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗುವುದು. ನಿಯಮಗಳನ್ನು ಪಾಲಿಸದೆ ಎಲ್ಲೆಂದರಲ್ಲಿ ತ್ಯಾಜ್ಯ ಮತ್ತು ಕಸನಗಳನ್ನು ಸುರಿಯುವವರ ವಿರುದ್ಧ ನೋಟಿಸ್ ಜಾರಿ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದರು.

ಕೆಐಡಿಬಿ ಎಂಜಿನಿಯರ್ ಲೀಲಾವತಿ, ಪಟ್ಟಣ ಪಂಚಾಯಿತಿ ಅಧಿಕಾರಿ ಶ್ವೇತಾಬಾಯಿ, ಚೀಲೂರು, ಕೊಳ್ಳಿಗನಹಳ್ಳಿ ಗ್ರಾಪಂ ಪಿಡಿಒ, ಅಧಿಕಾರಿಗಳು ಹಾಜರಿದ್ದರು.

10ಕೆಆರ್ ಎಂಎನ್ 5.ಜೆಪಿಜಿ

ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ , ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.