ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣರಿಗೆ ಅಗ್ನಿ ಪರೀಕ್ಷೆ

KannadaprabhaNewsNetwork |  
Published : Aug 17, 2026, 01:15 AM IST
16ಕೆಆರ್ ಎಂಎನ್ 2.ಜೆಪಿಜಿಸಚಿವ ಎಚ್.ಸಿ.ಬಾಲಕೃಷ್ಣ | Kannada Prabha

ಸಾರಾಂಶ

ರಾಮನಗರ: ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದಿರುವ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಹಳೆಯ ಸಮಸ್ಯೆಗಳ ಸ್ವಾಗತಳೊಂದಿಗೆ ಜಿಲ್ಲೆಯ ಅಭಿವೃದ್ಧಿ ಸಂಬಂಧಿತ ದಶಕಗಳಿಂದ ನನೆಗುದಿಗೆ ಬಿದ್ದು ಮರು ಜೀವ ಪಡೆದಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆಯೇ ಎನ್ನುವ ಕನಸು ಜಿಲ್ಲೆಯ ಜನರಲ್ಲಿ ಚಿಗರೊಡೆದಿದೆ

ರಾಮನಗರ: ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದಿರುವ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಹಳೆಯ ಸಮಸ್ಯೆಗಳ ಸ್ವಾಗತಳೊಂದಿಗೆ ಜಿಲ್ಲೆಯ ಅಭಿವೃದ್ಧಿ ಸಂಬಂಧಿತ ದಶಕಗಳಿಂದ ನನೆಗುದಿಗೆ ಬಿದ್ದು ಮರು ಜೀವ ಪಡೆದಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆಯೇ ಎನ್ನುವ ಕನಸು ಜಿಲ್ಲೆಯ ಜನರಲ್ಲಿ ಚಿಗರೊಡೆದಿದೆ.

2023ರ ವಿಧಾನಸಭಾ ಕ್ಷೇತ್ರ ಚುನಾವಣೆ ಬಳಿಕ ಜಿಲ್ಲೆಯವರೇ ಆದ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಬೆಂಗಳೂರು ನಗರ ಉಸ್ತುವಾರಿ ವಹಿಸಿಕೊಂಡಿದ್ದರು. ಹೀಗಾಗಿ ಸಚಿವ ರಾಮಲಿಂಗಾರೆಡ್ಡಿ ಅವರ ಹೆಗಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಉಸ್ತುವಾರಿ ವಹಿಸಲಾಗಿತ್ತು.

ಜೂ.3ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ನಂತರವೂ ರಾಮಲಿಂಗಾರೆಡ್ಡಿ ಅವರಿಗೆ ಎರಡೂವರೆ ತಿಂಗಳ ಮಟ್ಟಿಗೆ ಮತ್ತೆ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲಾಯಿತು. ತಮ್ಮ ಅವಧಿಯಲ್ಲಿ ರಾಮಲಿಂಗಾರೆಡ್ಡಿರವರು ಯಾವುದೇ ಕೊರಗು ಕಾಡದಂತೆ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿದರು.

ಎರಡನೇ ಪಟ್ಟಿಯಲ್ಲಿ ಸಚಿವರಾದ ಬಾಲಕೃಷ್ಣ ಅವರಿಗೆ ಪೌರಾಡಳಿತ ಖಾತೆ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯೂ ಹೆಗಲೇರಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬಾಲಕೃಷ್ಣರಿಗೆ ತವರು ಜಿಲ್ಲೆ ಬೆಂಗಳೂರು ದಕ್ಷಿಣವನ್ನು ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಒಂದೂವರೆ ವರ್ಷದ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಣಬೇಕಿದೆ. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ಬಹುದೊಡ್ಡ ಸವಾಲುಗಳು ಮುಂದಿವೆ.

ಈಡೇರುತ್ತಾ ಟೌನ್‌ಶಿಪ್-ವಿಮಾನ ನಿಲ್ದಾಣ?

ದೇಶದ ಮೊದಲ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧಾರಿತ ವಿಶ್ವದರ್ಜೆಯ ಎಐ ಸಿಟಿ (ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ - ಬಿಡದಿ ಟೌನ್‌ಶಿಪ್) ಯೋಜನೆ, ಚೂಡಹಳ್ಳಿ ಹಾಗೂ ಸುತ್ತಮುತ್ತಲಿನ 15 ಗ್ರಾಮಗಳ ಭೂಮಿಯನ್ನು ಸ್ವಾಧೀನಪಡಿಸಿಕೊಂಡು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮೇಕೆದಾಟು ಅಣೆಕಟ್ಟೆ ನಿರ್ಮಾಣದಂತಹ ಅನೇಕ ಸವಾಲುಗಳಿಗೆ ಪರಿಹಾರ ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸಚಿವರಿಗೆ ಬರ ನಿರ್ವಹಣೆ ಉಸ್ತುವಾರಿ:

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಮಂಕಾಗಿರುವುದು ಒಂದಡೆಯಾದರೆ, ಮತ್ತೊಂದೆಡೆ ಕುಡಿಯುವ ನೀರಿಗೂ ತಾತ್ವಾರ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಗಾರು ಮಳೆ ನೆಚ್ಚಿಕೊಂಡು ಬಿತ್ತನೆ ಮಾಡಿದ್ದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇಂತಹ ಸಂದರ್ಭದಲ್ಲಿ ನೂತನ ಸಚಿವರಿಗೆ ಜಿಲ್ಲೆಗೆ ಎದುರಾದ ಬರಗಾಲ ನಿರ್ವಹಣೆ ಸವಾಲಾಗಿದೆ.

ಸಚಿವರ ಹೆಗಲಿಗೆ ಪಕ್ಷದ ಜವಾಬ್ದಾರಿ:

ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಹಾಗೂ ಗುಂಪುಗಾರಿಕೆ ಮಾತುಗಳು ಇವೆಯಾದರೂ ಅದು ಬಹಿರಂಗಗೊಂಡಿಲ್ಲ. ಸ್ಥಳೀಯ ಸಂಸ್ಥೆ ಮತ್ತು ವಿಧಾನಸಭಾ ಚುನಾವಣೆ ವೇಳೆ ಅದು ಭುಗಿಲೇಳದಂತೆ ಶಮನಗೊಳಿಸಬೇಕಾಗಿದೆ. ಜಿಲ್ಲೆಯ ಅಭಿವೃದ್ಧಿಯೊಂದಿಗೆ, ಪಕ್ಷವನ್ನು ಸಮರ್ಥವಾಗಿ ನಿಭಾಯಿಸುವ, ಎಲ್ಲ ನಾಯಕರನ್ನು ಒಗ್ಗೂಡಿಸಿಕೊಂಡು ಹೋಗುವ ಜವಾಬ್ದಾರಿ ನೂತನ ಸಚಿವ ಬಾಲಕೃಷ್ಣರ ಮೇಲಿದೆ. ಜತೆಗೆ ಮುಂಬರುವ ದಿನಗಳಲ್ಲಿ ಪಂಚಾಯತಿ, ವಿಧಾನ ಪರಿಷತ್ ಹಾಗೂ ವಿಧಾನಸಭಾ ಚುನಾವಣೆಗಳಿಗೂ ಪಕ್ಷವನ್ನು ಸಂಘಟಿಸುವ ಮೂಲಕ ಸ್ಥಳೀಯ ಆಡಳಿತದ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಬಲಗೊಳಿಸಬೇಕಿದೆ.

ಬಾಕ್ಸ್ .................

ಸಚಿವ ಬಾಲಕೃಷ್ಣರ ಮುಂದಿರುವ ಸವಾಲುಗಳೇನು ?

* ಬಿಡದಿ ಟೌನ್ ಶಿಪ್ ಯೋಜನೆ ಕುರಿತು ರಾಜ್ಯಸರ್ಕಾರ ಮತ್ತು ವಿಪಕ್ಷಗಳು, ರೈತರ ಪರ - ವಿರೋಧದ ಹೋರಾಟಗಳು ತಾರಕಕ್ಕೇರಿದೆ. ರೈತರ ಮನವೊಲಿಸಿ ಯೋಜನೆ ಕಾರ್ಯಗತಗೊಳಿಸುವ ಕಠಿಣ ಸವಾಲು.

* ಬಿಡದಿ ಹೋಬಳಿ ಕೊಡಿಯಾಲ ಕರೇನಹಳ್ಳಿ, ಚಿಕ್ಕಕುಂಟನಹಳ್ಳಿ ಸೇರಿದಂತೆ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಚೂಡಹಳ್ಳಿ ಹಾಗೂ ಸುತ್ತಮುತ್ತಲಿನ 15 ಗ್ರಾಮಗಳ ಭೂ ಸ್ವಾಧೀನಪಡಿಸಿಕೊಂಡು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಅನುಷ್ಠಾನಕ್ಕೆ ಶ್ರಮಿಸಬೇಕಿದೆ.

* ಮೇಕೆದಾಟು ಅಣೆಕಟ್ಟೆ ನಿರ್ಮಾಣ, ಸತ್ತೇಗಾಲ ನೀರಾವರಿ ಯೋಜನೆಗೆ ವೇಗ ನೀಡುವುದು. ಕನಕಪುರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ.

* ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸುವುದು.

* ರಾಮನಗರದಲ್ಲಿನ ಸೂಪರ್ ಸ್ಪೆಷಾಲಿಟಿ ಜಿಲ್ಲಾಸ್ಪತ್ರೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ, ಹಳೆಯ ಜಿಲ್ಲಾಸ್ಪತ್ರೆಯನ್ನು ತಾಯಿ ಮಗುವಿನ ಆಸ್ಪತ್ರೆಯನ್ನಾಗಿ ಮಾರ್ಪಡಿಸುವುದು. ಸುಸಜ್ಜಿತ ಒಳ ಮತ್ತು ಹೊರ ಕ್ರೀಡಾಂಗಣ ನಿರ್ಮಾಣ.

* ರಾಮನಗರದಲ್ಲಿ ಬೆಂಗಳೂರು-ಮೈಸೂರಿಗೆ ತೆರಳುವ ಪ್ರಯಾಣಿಕರಿಗಾಗಿ ಸುಸಜ್ಜಿತ ಬಸ್ ನಿಲ್ದಾಣ ಸ್ಥಾಪನೆ.

*ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಸಾಕಷ್ಟು ಅಭಿವೃದ್ದಿ ಕಾಣುತ್ತಿದ್ದು ಸಾರಿಗೆ ಒತ್ತಡ ಕಡಿಮೆ ಮಾಡಲು ಕೆಂಗೇರಿಯಿಂದ ಮೆಟ್ರೋ ರೈಲು ವಿಸ್ತರಣೆ.

*ಬೆಂಗಳೂರಿನಿಂದ ಕನಕಪುರ- ಚಾಮರಾಜನಗರ ಮಾರ್ಗವಾಗಿ ತಮಿಳುನಾಡಿನ ಕೊಯಮತ್ತೂರಿಗೆ ರೈಲ್ವೆ ಸಂಪರ್ಕ ಕಲ್ಪಿಸುವುದು.

* ಶ್ರೀರಂಗ ಏತ ನೀರಾವರಿ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದು.

*ವಂದಾರಗುಪ್ಪೆ ಬಳಿ ರೇಷ್ಮೆಗೂಡಿನ ಹೈಟೆಕ್ ಮಾರುಕಟ್ಟೆ ಹಾಗೂ ಬೈರಾಪಟ್ಟಣದಲ್ಲಿ ಮಾವು ಸಂಸ್ಕರಣಾ ಘಟಕ ತ್ವರಿಗತಿಯಲ್ಲಿ ಪೂರ್ಣಗೊಳಿಸುವುದು.

*ನಾಡಪ್ರಭು ಕೆಂಪೇಗೌಡರ ಹುಟ್ಟೂರು ಕೆಂಪಾಪುರ ಗ್ರಾಮ, ಲಿಂಗೈಕ್ಯ ಶಿವಕುಮಾರ ಶ್ರೀಗಳ ಹುಟ್ಟೂರು ವೀರಾಪುರ ಹಾಗೂ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಹುಟ್ಟೂರಾದ ಬಾನಂದೂರು ಗ್ರಾಮಗಳ ಅಭಿವೃದ್ಧಿ.

* ಪ್ರವಾಸೋಮದ್ಯಮಕ್ಕಾಗಿ ಸಂಗಮ-ಮೇಕೆದಾಟು ಅಭಿವೃದ್ದಿ, ಚುಂಚಿಫಾಲ್ಸ್, ಮಾವತ್ತೂರು ಕೆರೆ ಅಭಿವೃದ್ಧಿ, ಕಣ್ವ ಜಲಾಶಯದಲ್ಲಿ ಚಿಲ್ಡ್ರನ್ ಪಾರ್ಕ್, ಮಂಚನಬೆಲೆ ಜಲಾಶಯ ಬಳಿ ಉದ್ಯಾನವನ, ಟ್ರಕ್ಕಿಂಗ್‌ಗಾಗಿ ಬೆಳಿಕಲ್ ಬೆಟ್ಟ, ಅಚ್ಚಲು ಬೆಟ್ಟ, ಕಬ್ಬಾಳ್ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ, ಮೂಲ ಸೌಲಭ್ಯ ಕಲ್ಪಿಸುವುದು.

16ಕೆಆರ್ ಎಂಎನ್ 2.ಜೆಪಿಜಿ

ಸಚಿವ ಎಚ್.ಸಿ.ಬಾಲಕೃಷ್ಣ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಿಡ್ಲ್‌ ಕೆಳಗೆ.. ಸ್ರೀ ಮಠದ ಬಹುದಿನಗಳ ಬೇಡಿಕೆಗೆ ಸ್ಪಂದನೆ: ಆರ್‌ ಕೆ ಪಾಟೀಲ್‌
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಸ್ವಾಮೀಜಿ